ಕುಡಿಯುವ ನೀರಿನ ತೀವ್ರ ಅಭಾವ । ಕೂಲಿ ಕಾರ್ಮಿಕರೇ ಹೆಚ್ಚಿರುವ ಗ್ರಾಮದ 80 ಕುಟುಂಬಗಳಿಗೆ ತೊಂದರೆ । ಅಧಿಕಾರಿಗಳ ನಿರ್ಲಕ್ಷ್ಯ
ಜಿ.ದೇವರಾಜ ನಾಯ್ಡುಕನ್ನಡಪ್ರಭ ವಾರ್ತೆ ಹನೂರು
ಕೂಲಿ ಕಾರ್ಮಿಕರೇ ಹೆಚ್ಚಾಗಿರುವ ರಾಮಾಪುರ ಗ್ರಾಪಂ ವ್ಯಾಪ್ತಿಯ ಮಾಮರದೊಡ್ಡಿ ಗ್ರಾಮದಲ್ಲಿ ನಿತ್ಯ ಕುಡಿಯುವ ನೀರಿಗಾಗಿ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಗ್ರಾಮದ ಜನತೆಯ ಗೋಳು ಕೇಳುವವರು ಇಲ್ಲದಂತಾಗಿದೆ.ಹನೂರು ತಾಲೂಕಿನ ರಾಮಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಮರದೊಡ್ಡಿ ಗ್ರಾಮದಲ್ಲಿ 80 ಕುಟುಂಬಗಳ 300ಕ್ಕೂ ಹೆಚ್ಚು ಜನಸಂಖ್ಯೆ ಇದ್ದು, ಕಳೆದ ಹಲವಾರು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಸೂಚಿಸದೆ ಜನಪ್ರತಿನಿಧಿ ಅಧಿಕಾರಿಗಳ ಇಚ್ಛಾಶಕ್ತಿ ಕೊರತೆಯಿಂದ ಜನತೆ ಪರಿತಪಿಸುವಂತಾಗಿದೆ.
ದೂರು ನೀಡಿದರೂ ಪ್ರಯೋಜನವಿಲ್ಲ:ಮಾಮರದೊಡ್ಡಿ ಗ್ರಾಮ ಇಲ್ಲಿನ ಜನತೆ ನಿತ್ಯ ಕುಡಿಯುವ ನೀರಿನ ಶೇಖರಣೆ ಮಾಡಲು ಗಂಟೆಗಟ್ಟಲೆ ಕಾಯುವಂತಹ ಪರಿಸ್ಥಿತಿ ಇದ್ದರೂ ಸಹ ನೀರಿನ ಸಮಸ್ಯೆ ನೀಗಿಸುವಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಕ್ರಮ ವಹಿಸಿಲ್ಲ. ಹಲವಾರು ಬಾರಿ ನಿವಾಸಿಗಳು ದೂರು ಸಲ್ಲಿಸಿದ್ದರೂ ಸಹ ಒಂದು ಬಾರಿಯೂ ಗ್ರಾಮಕ್ಕೆ ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳದೆ ಇರುವುದರಿಂದ ಗ್ರಾಮದ ಜನತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೂಲಿ ಕಾರ್ಮಿಕರೇ ಹೆಚ್ಚಾಗಿರುವ ಗ್ರಾಮ:ಮಾಮರದೊಡ್ಡಿ ಗ್ರಾಮದಲ್ಲಿ ಹೆಚ್ಚಾಗಿ ಕೂಲಿ ಕಾರ್ಮಿಕರೇ ವಾಸಿಸುತ್ತಿರುವುದರಿಂದ ಇತ್ತ ಯಾವ ಜನಪ್ರತಿನಿಧಿ ಅಧಿಕಾರಿಗಳು ಸಹ ಗ್ರಾಮಕ್ಕೆ ಭೇಟಿ ನೀಡಿ ಇಲ್ಲಿನ ಕುಡಿಯುವ ನೀರಿನ ಸಮಸ್ಯೆ ನೀಗಿಸುವ ನಿಟ್ಟಿನಲ್ಲಿ ಕ್ರಮವಹಿಸದೆ ಇರುವುದರಿಂದ ಇಲ್ಲಿನ ಕೂಲಿ ಕಾರ್ಮಿಕರು ನಿತ್ಯ ಕೂಲಿ ಕೆಲಸ ಬಿಟ್ಟು ನೀರಿನ ಶೇಖರಣೆ ಮಾಡುವುದು ಅನಿವಾರ್ಯವಾಗಿದೆ. ಸಂಬಂಧಪಟ್ಟವರು ಸಮಸ್ಯೆ ಬಗೆಹರಿಸಲು ಮುಂದಾಗುವಂತೆ ಗ್ರಾಮಸ್ಧರು ಒತ್ತಾಯಿಸಿದ್ದಾರೆ.
ರಾಮಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಮಾಮರ ದೊಡ್ಡಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ಹೀಗಾಗಿ ಸಂಬಂಧಪಟ್ಟ ಜನಪ್ರತಿನಿಧಿ ಅಧಿಕಾರಿಗಳು ಹಾಗೂ ಜಿಲ್ಲಾಮಟ್ಟದ ಹಿರಿಯ ಅಧಿಕಾರಿಗಳು ಇತ್ತ ಗಮನ ಹರಿಸಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಬೇಕು. ಇಲ್ಲದಿದ್ದರೆ ಸಂಘ-ಸಂಸ್ಥೆಗಳ ಜೊತೆಗೂಡಿ ಗ್ರಾಮ ಪಂಚಾಯಿತಿ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ.ಮನೋಜಮ್ಮ, ರೈತ ಸಂಘ, ಗ್ರಾಮ ಘಟಕ, ಮಾಮರದೊಡ್ಡಿ
ಗ್ರಾಮಸ್ಥರು ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಬಗ್ಗೆ ಮನವಿ ಸಲ್ಲಿಸಿದ್ದಾರೆ. ಸಿಬ್ಬಂದಿಗೆ ಗ್ರಾಮದ ನೀರಿನ ಸಮಸ್ಯೆ ಇರುವ ಬಗ್ಗೆ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ. ಗ್ರಾಮಕ್ಕೆ ಭೇಟಿ ನೀಡಿ ಗ್ರಾಮದಲ್ಲಿ ನೀರಿನ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು.ಪುಷ್ಪಲತಾ. ಗ್ರಾಪಂ ಅಭಿವೃದ್ಧಿ ಅಧಿಕಾರಿ, ರಾಮಾಪುರ