ಅಶ್ವಥ್ ಎಚ್.ಕೆ.ಹಳುವಾಡಿ
ಮೇಲುಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಸೇರಿದ ತಾಲೂಕಿನ ಗಾಣದಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡು ವರ್ಷ ಇದ್ದ ಮಕ್ಕಳ ಸಂಖ್ಯೆ ೮೦. ಈಗ ದಾಖಲಾಗಿರುವ ಮಕ್ಕಳ ಸಂಖ್ಯೆ ೨೫. ಶಾಲೆಯ ಕೊಠಡಿಗಳ ಸ್ಥಿತಿ ನೋಡಿ ಬೆಚ್ಚಿದ ಊರಿನ ಜನರು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಟೀಸಿ ಪಡೆದುಕೊಂಡು ಬೇರೆ ಶಾಲೆಗಳಿಗೆ ದಾಖಲಿಸಿದ್ದಾರೆ.
ಶಾಲೆಯ ಕೊಠಡಿಗಳನ್ನು ದುರಸ್ತಿ ಮಾಡಿಸಿಕೊಡುವಂತೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರನ್ನು ಕೋರಲಾಯಿತು. ಜಿಲ್ಲಾ ಪಂಚಾಯ್ತಿ, ಶಾಲಾ ಶಿಕ್ಷಣ ಅಧಿಕಾರಿಗಳನ್ನೂ ಕೋರಲಾಯಿತು. ಯಾರೂ ಸಹ ಕೊಠಡಿಗಳನ್ನು ದುರಸ್ತಿಪಡಿಸುವ ಕನಿಷ್ಠ ಭರವಸೆಯನ್ನೂ ನೀಡಲಿಲ್ಲ. ಹೀಗಾಗಿ ನಾಲ್ಕು ಕೊಠಡಿಗಳಿಗೆ ಬೀಗ ಹಾಕಲಾಗಿದೆ. ಉಳಿದಿರುವ ಎರಡು ಕೊಠಡಿಗಳಲ್ಲಿ ಮಕ್ಕಳಿಗೆ ಪಠ್ಯ ಬೋಧನೆ ಮಾಡಲಾಗುತ್ತಿದೆ. ಒಂದು ಮುಖ್ಯ ಶಿಕ್ಷಕರ ಕೊಠಡಿಯಾಗಿದೆ.ಈಗಲೂ ಶಾಲೆಯನ್ನು ದುರಸ್ತಿಪಡಿಸದಿದ್ದರೆ ಮುಂದಿನ ವರ್ಷ ಈ ಶಾಲೆಗೆ ದಾಖಲಾಗುವ ಮಕ್ಕಳ ಸಂಖ್ಯೆ ಮತ್ತಷ್ಟು ಕುಸಿದರೂ ಅಚ್ಚರಿಪಡಬೇಕಿಲ್ಲ. ಕೊನೆಗೆ ಶಾಲೆಯನ್ನೇ ಮುಚ್ಚುವ ಪರಿಸ್ಥಿತಿ ಎದುರಾಗುವುದು ಹೆಚ್ಚು ದೂರವೇನಿಲ್ಲ.
ಈ ಶಾಲೆಯ ಕೊಠಡಿಗಳ ಮೇಲ್ಛಾವಣಿ ಕುಸಿದುಬೀಳುತ್ತಿದೆ. ಹೆಂಚುಗಳು ಒಡೆದುಹೋಗಿವೆ. ಮತ್ತಷ್ಟು ಬೀಳುವ ಸ್ಥಿತಿಯಲ್ಲಿವೆ. ಮಳೆ ಬಂದರೆ ಕೊಠಡಿಗಳೆಲ್ಲಾ ಸೋರುತ್ತಿವೆ. ಮಳೆಯ ನೀರಿಳಿದು ಶಾಲೆಯ ಗೋಡೆಗಳು ಶಿಥಿಲಗೊಂಡಿವೆ.
ಶಾಲೆಯ ಕೊಠಡಿಗಳನ್ನು ಸುಸ್ಥಿತಿಗೆ ತರುವಂತೆ ಊರಿನ ರೈತಸಂಘದ ಕಾರ್ಯಕರ್ತರಾಗಿರುವ ಜಯರಾಂ ಅವರು ಶಾಸಕ ದರ್ಶನ್ ಪುಟ್ಟಣ್ಣಯ್ಯನವರ ಗಮನಕ್ಕೆ ತಂದಿದ್ದಾರೆ. ಎರಡು-ಮೂರು ವರ್ಷಗಳಿಂದ ಮನವಿ ಸಲ್ಲಿಸುತ್ತಾ ಬಂದಿದ್ದರೂ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ. ಶಾಲಾ ಕೊಠಡಿಗಳನ್ನು ಸುಸ್ಥಿತಿಗೆ ತರುವುದರಿಂದ ನಮ್ಮೂರಿನ ಶಾಲೆಗೆ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುವರು ಎಂದು ಜಯರಾಂ ಕನ್ನಡಪ್ರಭ ಪತ್ರಿಕೆಗೆ ತಿಳಿಸಿದರು.
ಮಕ್ಕಳನ್ನು ಶಾಲೆಗೆ ದಾಖಲು ಮಾಡಲು ಬರುವವರು ಶಾಲೆಯ ಕೊಠಡಿಗಳ ಸ್ಥಿತಿಯನ್ನು ಕಂಡು ಬೆಚ್ಚಿಬೀಳುತ್ತಿದ್ದಾರೆ. ಕಾಂಕ್ರೀಟ್ ಮೇಲ್ಛಾವಣಿ, ಹೆಂಚುಗಳು ಬಿದ್ದರೆ ಮಕ್ಕಳ ಗತಿ ಏನು ಎಂದು ಆಲೋಚಿಸಿ ಮಕ್ಕಳನ್ನು ದಾಖಲಿಸುವುದಕ್ಕೆ ಹಿಂದೇಟು ಹಾಕುತ್ತಿದ್ದಾರೆ. ಈಗಾಗಲೇ ಶಾಲೆಯಲ್ಲಿ ಕಲಿಯುತ್ತಿದ್ದ ಮಕ್ಕಳನ್ನು ತಂದೆ-ತಾಯಿಗಳು ಟೀಸಿ ತೆಗೆದುಕೊಂಡು ಬೇರೆ ಶಾಲೆಗಳಿಗೆ ದಾಖಲಿಸಿದ್ದಾರೆ. ಶಿಕ್ಷಕರು ಪೋಷಕರ ಮನವೊಲಿಸುವ ಪ್ರಯತ್ನಿಸಿದರೂ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ. ಕಳೆದ ನಾಲ್ಕು ವರ್ಷಗಳಿಂದಲೂ ಕೊಠಡಿಗಳನ್ನು ದುರಸ್ತಿಪಡಿಸಲಾಗುತ್ತಿಲ್ಲವಾದ್ದರಿಂದ ಪೋಷಕರೂ ಬೇಸತ್ತು ಮಕ್ಕಳನ್ನು ಬೇರೆ ಶಾಲೆಗಳ ಕಡೆ ಮುಖ ಮಾಡುವಂತೆ ಮಾಡಿದ್ದಾರೆ.
- ದರ್ಶನ್ ಪುಟ್ಟಣ್ಣಯ್ಯ, ಶಾಸಕರು, ಮೇಲುಕೋಟೆ ಕ್ಷೇತ್ರನಾಲ್ಕು ವರ್ಷಗಳಿಂದ ಕೊಠಡಿಗಳನ್ನು ದುರಸ್ತಿಪಡಿಸಿಕೊಡುವಂತೆ ಎಲ್ಲರಿಗೂ ಮನವಿ ಮಾಡುತ್ತಲೇ ಬಂದಿದ್ದೇನೆ. ಯಾರೊಬ್ಬರೂ ಇದಕ್ಕೆ ಸ್ಪಂದಿಸುತ್ತಿಲ್ಲ. ಶಾಸಕರಿಗೂ ಈ ಕುರಿತು ಹಲವು ಬಾರಿ ಮನವಿ ಕೊಟ್ಟಿದ್ದರೂ ಪ್ರಯೋಜನವಾಗಿಲ್ಲ. ಕೊಠಡಿಗಳು ಬೀಳುವ ಸ್ಥಿತಿಯಲ್ಲಿರುವುದರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸುವುದಕ್ಕೆ ಹೆದರುತ್ತಿದ್ದಾರೆ. ಕಂಪ್ಯೂಟರ್ ಕೊಠಡಿ ಸಂಪೂರ್ಣ ಹಾಳಾಗಿದೆ. ಈಗಲಾದರೂ ಶಾಲಾ ಕೊಠಡಿಗಳ ದುರಸ್ತಿ ಮಾಡಿಕೊಡಲು ಮುಂದಾಗಲಿ.