ಕನ್ನಡಪ್ರಭ ವಾರ್ತೆ ಬೆಳಗಾವಿ
2024, ಮಾ.20 ರಂದು ತಮ್ಮ ಗೃಹ ಕಚೇರಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಯಾವುದೇ ಅನುಮತಿ ಪಡೆಯದೇ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಗೂ ಆಶಾ ಕಾರ್ಯಕರ್ತೆಯರ ಸಭೆ ನಡೆಸಿದ್ದರು. ನೂರಾರು ಕಾರ್ಯಕರ್ತೆಯರನ್ನು ಸೇರಿಸಿ ತಮ್ಮ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆಂಬ ಆರೋಪ ಕೇಳಿಬಂದಿತ್ತು.
ಸಚಿವರು ತಮ್ಮಕಚೇರಿಯಲ್ಲಿ ಸಭೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಅರಿತ ಜಿಲ್ಲಾ ಚುನಾವಣಾಧಿಕಾರಿ ನಿತೇಶ ಪಾಟೀಲ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದರು. ಅಧಿಕಾರ ದುರುಪಯೋಗ ಮಾಡಿಕೊಂಡು ಅಂಗನವಾಡಿ ಕಾರ್ಯಕರ್ತೆಯರ ಸಭೆ ನಡೆಸಿ ಮಾದರಿ ನೀತಿಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಫ್ಲೈಯಿಂಗ್ ಸ್ಕ್ವಾಡ್ ಮುಖ್ಯಸ್ಥ ಮಹಾಂತೇಶ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಮತ್ತು ಉಮೇಶ ಮಲ್ಲಪ್ಪ ರಾಚಣ್ಣನವರ ವಿರುದ್ಧ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು. ನ್ಯಾಯಾಲಯವು ಸಚಿವೆ ಹೆಬ್ಬಾಳಕರ ಸೇರಿದಂತೆ ಇಬ್ಬರು ಆರೋಪಿಗಳಿಗೆ ಸಮನ್ಸ್ ಜಾರಿ ಮಾಡಿದ್ದು, ಈ ಕುರಿತು ಏ.30ರೊಳಗೆ ಉತ್ತರ ನೀಡುವಂತೆ ಸಮನ್ಸ್ನಲ್ಲಿ ಸೂಚನೆ ನೀಡಲಾಗಿದೆ.