ಕನ್ನಡಪ್ರಭ ವಾರ್ತೆ ಚಾಮರಾಜನಗರ
ಜೆಎಸ್ಎಸ್ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ಜೆಎಸ್ಎಸ್ ಮಹಿಳಾ ಕಾಲೇಜು, ಹಿರಿಯ ವಿದ್ಯಾರ್ಥಿನಿಯರ ಸಂಘ, ದಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರೇಂಜರ್ಸ್ ಘಟಕ ಹಾಗೂ ಯುವ ರೆಡ್ ಕ್ರಾಸ್ ಘಟಕಗಳ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಹಿಳೆಯರಿಗೆ ಎಲ್ಲಾ ಸಮಾನ ಅವಕಾಶಗಳನ್ನು ನೀಡಿ, ಹಕ್ಕುಗಳನ್ನು ನೀಡಿದ್ದರೂ ದೌರ್ಜನ್ಯಗಳು ಕಡಿಮೆಯಾಗಿಲ್ಲ. ನಿರಂತರವಾಗಿ ದೌರ್ಜನ್ಯ ನಡೆಯುತ್ತಿದೆ. ಸಂಧಾನ ಮಾಡುವ ಮೂಲಕ ಅವರನ್ನು ದಾರಿ ತಪ್ಪಿಸುವ ಕೆಲಸ ಮಾಡಲಾಗುತ್ತಿದೆ. ಈ ಕ್ರೂರ ಪ್ರಪಂಚದಲ್ಲಿ ಸಂಕಷ್ಟಗಳನ್ನು ಸಹಿಸಿಕೊಂಡು ಮಹಿಳೆಯರು ಬದುಕು ಸಾಗಿಸುತ್ತಿದ್ದಾರೆ ಎಂದರು.
ಮಹಿಳೆಯರು ಮನೋಸ್ಥೈರ್ಯವನ್ನು ಬೆಳೆಸಿಕೊಳ್ಳಬೇಕು. ಅವರ ಮೇಲಾಗುವ ದೌರ್ಜನ್ಯಗಳ ವಿರುದ್ಧ ಸೆಟೆದು ನಿಲ್ಲಬೇಕಿದೆ. ಮಹಿಳೆಯರ ಹಕ್ಕು ಅಧಿಕಾರಗಳನ್ನು ಯಾರೂ ಕಿತ್ತುಕೊಳ್ಳಲು ಸಾಧ್ಯವಿಲ್ಲ, ಅದನ್ನು ನೀವೆ ಪಡೆದುಕೊಳ್ಳಬೇಕಿದೆ. ಮಹಿಳೆಯರು ಹೆಚ್ಚಿನ ಶಿಕ್ಷಣ ಪಡೆದುಕೊಂಡರೇ, ದೌರ್ಜನ್ಯಗಳ ವಿರುದ್ಧ ಹೋರಾಟ ಮಾಡಬಹುದಾಗಿದೆ. ತಮಿಳುನಾಡಿನಲ್ಲಿ ಶೇ.೭೦ ರಷ್ಟು ಮಹಿಳಾ ನ್ಯಾಯಾಧೀಶರು ಇದ್ದಾರೆ. ಇದು ನಮ್ಮ ರಾಜ್ಯದಲ್ಲೂ ಸ್ಫೂರ್ತಿಯಾಗಬೇಕು ಎಂದರು.ದಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರೇಂಜರ್ಸ್ ಘಟಕ ಸಂಚಾಲಕಿ ಡಾ.ಎ.ಆರ್.ಸುಷ್ಮ ಪ್ರಾಸ್ತಾವಿಕವಾಗಿ ಮಾತನಾಡಿ, ಮಹಿಳೆಯರಿಗೆ ಸಂವಿಧಾನದ ಅಡಿಯಲ್ಲಿ ಹಲವಾರು ಹಕ್ಕುಗಳನ್ನು ನೀಡಲಾಗಿದೆ. ವರದಕ್ಷಿಣೆ ನಿಷೇಧ, ಸತಿ ಸಹಗಮನ ಪದ್ಧತಿ ನಿಷೇಧ ಹಾಗೂ ಇನ್ನಿತರೆ ಕಾಯ್ದೆಗಳನ್ನು ರೂಪಿಸಲಾಗಿದೆ. ಅದಾಗ್ಯೂ ಮಹಿಳೆಯರು ಈ ಸಮಾಜದಲ್ಲಿ ಸುರಕ್ಷಿತರಾಗಿದ್ದಾರಾ ಎಂಬುದನ್ನು ಯೋಚನೆ ಮಾಡಬೇಕಿದೆ. ಈ ನಿಟ್ಟಿನಲ್ಲಿ ಮಹಿಳಾ ದಿನಾಚರಣೆ ಅತ್ಯಂತ ಅಗತ್ಯವಾಗಿದೆ ಎಂದು ತಿಳಿಸಿದರು.
ಹಿರಿಯ ವಿದ್ಯಾರ್ಥಿನಿಯರ ಸಂಘದ ಅಧ್ಯಕ್ಷೆ ಕೆ.ಎಸ್.ಸುಮ, ರಾಸಾಯನ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಎಂ.ಸೌಮ್ಯ, ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಜಮುನಾ ಹಾಗೂ ಇತರರು ಉಪಸ್ಥಿತರಿದ್ದರು.