ಕನ್ನಡಪ್ರಭವಾರ್ತೆ ಪುತ್ತೂರುದೇಶದ ಸಂಸ್ಕೃತಿಯ ಪ್ರತೀಕವಾದ ಗೋವಿನ ರಕ್ಷಣೆ, ಹಿಂದೂ ಹೆಣ್ಣು ಮಕ್ಕಳ ರಕ್ಷೆಯಲ್ಲಿ ತೊಡಗಿಕೊಂಡಿರುವ ಬಜರಂಗದಳದ ಕಾರ್ಯಕರ್ತರನ್ನು ಗಡಿಪಾರಿಗೆ ಆದೇಶಿಸಿರುವುದು ಖಂಡನೀಯವಾಗಿದ್ದು, ಈ ಗಡಿಪಾರು ಆದೇಶ ಹಿಂಪಡೆಯದಿದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಂಯೋಜಕ ಸುನೀಲ್ ಕೆ.ಆರ್. ಎಚ್ಚರಿಸಿದರು.
ವಿಶ್ವ ಹಿಂದೂ ಪರಿಷತ್, ಬಜರಂಗದಳ ಸಂಘಟನೆಯು ಬಹುಸಂಖ್ಯಾತ ಹಿಂದೂಗಳು ಇರುವ ಭಾರತದಲ್ಲಿ ಅವರ ಸ್ವಾಭಿಮಾನದ ಬದುಕಿಗಾಗಿ ನಿರಂತರ ಜಾಗೃತಿ, ಸಂಘಟಿತ ಕೆಲಸಗಳನ್ನು ಮಾಡುತ್ತಿದೆ. ನಮ್ಮ ಸಂಘಟನೆ. ದೇಶದ ಪರವಾಗಿ ಕೆಲಸ ಮಾಡುತ್ತಿರುವ ನಮ್ಮ ಸಂಘಟನೆಗೆ ಬಹಿಷ್ಕಾರ ನೀಡುವ ಬದಲು ಜಿಹಾದಿ, ಭಯೋತ್ಪಾದನೆಯಂತಹ ರಾಷ್ಟ್ರದ್ರೋಹದ ಕೆಲಸ ಮಾಡುವವರನ್ನು ಗಡಿಪಾರು ಮಾಡಿ. ಜಿಹಾದಿಗಳಿಂದ ಹಿಂದೂ ಸಹೋದರಿಯನ್ನು ರಕ್ಷಿಸಿದವರ ಮೇಲೆ ಕೇಸು ದಾಖಲಿಸುವುದಲ್ಲ. ಸಹಾಯಕ ಆಯುಕ್ತರು ನಾಲ್ಕು ಗೋಡೆಗಳ ಮಧ್ಯೆ ಕಾರ್ಯನಿರ್ವಹಿಸುವ ಬದಲು ಹೊರಗೆ ಬಂದು ಸಂಘಟನೆಯ ಕಾರ್ಯಕರ್ತರ ಸೇವಾ ಕೆಲಸಗಳನ್ನು ಗಮನಿಸಲಿ. ಬಜರಂಗದಳ ಕಾರ್ಯಕರ್ತರನ್ನು ಈ ರೀತಿಯ ಶಿಕ್ಷೆಗೆ ಗುರಿಪಡಿಸಿದರೆ ಯಾವುದೇ ಹೋರಾಟಕ್ಕೆ ನಾವು ಸಿದ್ಧ. ತಕ್ಷಣ ಗಡಿಪಾರು ವಿಚಾರದ ಕುರಿತು ಮತ್ತೊಮ್ಮೆ ಚರ್ಚೆ ನಡೆಸಿ ಗಡಿಪಾರು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ದೇಶ, ಧರ್ಮ, ಗೋವು, ಸಹೋದರಿಯರ ರಕ್ಷಣೆಗಾಗಿ ನಾವು ರೌಡಿಗಳೇ. ಪುತ್ತೂರಿನಲ್ಲಿ ಬ್ಯಾನರ್ ಪ್ರಕರಣದಲ್ಲಿ ಎಫ್ಐಆರ್ ಆದ ಪೊಲೀಸರನ್ನು ಗಡಿಪಾರು ಮಾಡಬೇಕಿತ್ತು. ಓಟಿನ ಆಸೆಗಾಗಿ ತುಷ್ಟೀಕರಣ ನೀತಿಯನ್ನು ಸರ್ಕಾರ ನಡೆಸುವುದು ಬೇಡ. ಗಡಿಪಾರು ಯಾರನ್ನು ಮಾಡಬೇಕು ಎಂಬ ಪಟ್ಟಿಯನ್ನು ನಾವು ನೀಡುತ್ತೇವೆ. ಅವರನ್ನು ಗಡಿಪಾರು ಮಾಡಿ ಎಂದು ಆಗ್ರಹಿಸಿದರು.ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಮಾತನಾಡಿ, ಐದು ವರ್ಷದ ಹಿಂದೆ ಇದ್ದ ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರ ಈಗ ಅಧಿಕಾರಕ್ಕೆ ಬಂದು ಪುನರಪಿ ಅದನ್ನೇ ಮಾಡುತ್ತಿದೆ. ಸುಳ್ಳು ಮೊಕದ್ದಮೆಗಳನ್ನು ದಾಖಲಿಸಿ ಗಡಿಪಾರಿನಂತಹ ಶಿಕ್ಷೆ ವಿಧಿಸಿ ಹಿಂದೂಗಳ ಮನೋಸ್ಥೈರ್ಯವನ್ನು ಕುಸಿಯುವಂತಹ ಕೆಲಸ ಮಾಡುತ್ತಿದೆ. ಈ ಕುರಿತು ಸಂಸದರ ಬಳಿ ಮಾತನಾಡಿ, ಮುಂದಿನ ಅಧಿವೇಶನದಲ್ಲಿ ಪ್ರಸ್ತಾಪ ಮಾಡಿ ನ್ಯಾಯ ಒದಗಿಸುವ ಕೆಲಸ ಮಾಡಲಿದ್ದೇವೆ. ಬಿಜೆಪಿ ರಾಜ್ಯ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಗಮನಕ್ಕೂ ಈ ವಿಚಾರವನ್ನು ತರಲಾಗುವುದು. ಅಧಿಕಾರಿಗಳು ಮರು ಪರಿಶೀಲಿಸಿ ಗಡಿಪಾರಿನ ಆದೇಶ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.