ರಾಜಕೀಯದಲ್ಲೂ ಮಹಿಳೆಯರಿಗೆ ಮೀಸಲು ನೀಡುವ ಮೂಲಕ ಪ್ರಾತಿನಿಧ್ಯ
ಗೋಕರ್ಣ:
ಮಹಿಳೆಯರ ಸಬಲೀಕರಣಕ್ಕೆ ಒತ್ತು ನೀಡಿ ಸ್ವಾವಲಂಬಿ ಬದುಕು ನಡೆಸಲು ಸ್ವ-ಸಹಾಯ ಸಂಘಗಳ ಮೂಲಕ ಮಾರ್ಗ ತೋರಿದ ಡಾ. ವೀರೇಂದ್ರ ಹೆಗ್ಗಡೆ ಅವರ ಕಾರ್ಯ ಮಾದರಿಯಾಗಿದೆ ಎಂದು ಶಾಸಕ ದಿನಕರ ಶೆಟ್ಟಿ ಹೇಳಿದರು.ಅವರು ಇಲ್ಲಿನ ನೆಲಗುಣಿಯ ಶ್ರೀಗಂಗಾ ವಿಶ್ವೇಶ್ವರ ಸಭಾಭವನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಅಂಕೋಲಾ, ಗೋಕರ್ಣ ವಲಯದ ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿಯಿಂದ ನೆರವೇರಿದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಸಾಧನಾ ಸಮಾವೇಶ ಉದ್ಘಾಟಿಸಿ ಮಾತನಾಡಿದರು.ನಮ್ಮ ಧರ್ಮ ಹಾಗೂ ಸಂಸ್ಕೃತಿಯ ರಕ್ಷಣೆಯ ಕಾರ್ಯವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ವೀರೇಂದ್ರ ಹೆಗ್ಗಡೆ ಅವರು ನಿರ್ವಹಿಸುತ್ತಾ ಬಂದಿದ್ದಾರೆ. ಮಹಿಳೆಯರಲ್ಲಿ ಸಂಘಟನಾ ಮನೋಭಾವ ಬೆಳೆಸುವ ಜತೆಗೆ ಅವರನ್ನು ಆರ್ಥಿಕವಾಗಿ ಸ್ವಾವಲಂಬಿಯಾಗಿಸುವಲ್ಲಿ ಇವರ ಪಾತ್ರ ಮಹತ್ವದ್ದು. ಸ್ವ ಉದ್ಯೋಗಕ್ಕೆ ಪೂರಕವಾಗಿ ಸಾಲಸೌಲಭ್ಯ ಒದಗಿಸುವುದು, ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಮದ್ಯವರ್ಜನಾ ಶಿಬಿರದಂತಹ ಕಾರ್ಯಕ್ರಮ ಸಂಘಟಿಸುವುದು, ಲೋಕ ಕಲ್ಯಾಣಕ್ಕಾಗಿ ಸಾಮೂಹಿಕ ಸತ್ಯನಾರಾಯಣ ಪೂಜೆಯಂತಹ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳುವುದು ಸೇರಿದಂತೆ ಹಲವು ಬಗೆಯ ಒಳ್ಳೆಯ ಕಾರ್ಯಗಳನ್ನು ನಿರಂತರವಾಗಿ ನಡೆಸುತ್ತಿರುವ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯು ಸ್ತುತ್ಯಾರ್ಹವಾದುದು ಎಂದು ಹೇಳಿದರು.ಕೇಂದ್ರ ಸರ್ಕಾರ ಸಹ ಮಹಿಳೆಯರಿಗಾಗಿ ಹಲವು ಯೋಜನೆ ಜಾರಿಗೆ ತಂದಿದೆ. ರಾಜಕೀಯದಲ್ಲೂ ಮಹಿಳೆಯರಿಗೆ ಮೀಸಲು ನೀಡುವ ಮೂಲಕ ಪ್ರಾತಿನಿಧ್ಯ ನೀಡಿದೆ ಎಂದರು.ಕಾರ್ಯಕ್ರಮದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿಯ ವಲಯದ ಅಧ್ಯಕ್ಷ ಮಹೇಶ ಜಿ. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ ನಿವೃತ್ತ ಆರೋಗ್ಯಾಧಿಕಾರಿ ಸಿ.ಡಿ. ನಾಯ್ಕ, ಹನೇಹಳ್ಳಿ ಗ್ರಾಪಂ ಅಧ್ಯಕ್ಷ ಸಣ್ಣು ಗೌಡ, ಮಾಜಿ ಅಧ್ಯಕ್ಷೆ ಭಾರತಿ ಗೌಡ, ಗ್ರಾಪಂ ಸದಸ್ಯರಾದ ರಮೇಶ ಪ್ರಸಾದ, ದಯಾ ಮೆಹೆತಾ, ರಾಜೇಶ ನಾಯಕ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉಡುಪಿ ವಿಭಾಗದ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ, ನಿರ್ದೇಶಕ ಮಹೇಶ್ ಎಂ. ಡಿ., ಯೋಜನಾಧಿಕಾರಿ ಶಶಿರೇಖಾ , ರಮಾನಂದ ನಾಯ್ಕ, ಗೋಕರ್ಣ ವಲಯ ವ್ಯಾಪ್ತಿಯ ಪ್ರಗತಿ ಬಂಧು ಸ್ವ-ಸಹಾಯ ಸಂಘದ ಸದಸ್ಯರು ಪಾಲ್ಗೊಂಡಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.