ನಿರಂತರ ಹೋರಾಟದ ನಡುವೆ ನಾಯಕನ ಆಯ್ಕೆಗೆ ಸಜ್ಜು । 3 ವರ್ಷದ ಅವಧಿಗೆ ಮತದಾನ
ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಗುತ್ತಿಗೆ ಕಾರ್ಮಿಕ ಸಂಘದ (ವಿಐಎಸ್ಪಿ ಕಾಂಟ್ರ್ಯಾಕ್ಟ್ ವರ್ಕರ್ಸ್ ಯೂನಿಯನ್) ೩ ವರ್ಷಗಳ ಅವಧಿಗೆ ಮೇ ೨೫ರಂದು ಚುನಾವಣೆ ನಡೆಯುತ್ತಿದ್ದು, ಹಲವು ಸಂಕಷ್ಟಗಳ ನಡುವೆ ಗುತ್ತಿಗೆ ಕಾರ್ಮಿಕರು ಬಲಿಷ್ಠ ಸಂಘಟನೆಗಾಗಿ ತಮ್ಮ ನಾಯಕರ ಆಯ್ಕೆಯಲ್ಲಿ ತೊಡಗಿರುವುದು ಗಮನ ಸೆಳೆಯುತ್ತಿದೆ.
ಸುಮಾರು ೩೦ ತಿಂಗಳಿನಿಂದ ಕಾರ್ಖಾನೆ ಮುಚ್ಚುವ ಪ್ರಕ್ರಿಯೆ ಹಿಂಪಡೆಯುವಂತೆ, ಅಗತ್ಯವಿರುವ ಬಂಡವಾಳ ತೊಡಗಿಸುವಂತೆ, ಗುತ್ತಿಗೆ ಕಾರ್ಮಿಕರಿಗೆ ಪೂರ್ಣಾವಧಿ ಉದ್ಯೋಗ ಕಲ್ಪಿಸಿಕೊಡುವಂತೆ ಹಾಗು ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಖಾನೆ ಮುಂಭಾಗದಲ್ಲಿ ನಿರಂತರವಾಗಿ ಹೋರಾಟದಲ್ಲಿ ತೊಡಗಿರುವ ಗುತ್ತಿಗೆ ಕಾರ್ಮಿಕರು ಇದೀಗ ತಮ್ಮ ಹೊಸ ನಾಯಕರನ್ನು ಆಯ್ಕೆ ಮಾಡಿಕೊಳ್ಳುವ ಕಾರ್ಯದಲ್ಲಿ ನಿರತರಾಗಿದ್ದಾರೆ.ಒಟ್ಟು ಕಾರ್ಖಾನೆಯಲ್ಲಿ ೧೩೦೦ಕ್ಕೂ ಅಧಿಕ ಗುತ್ತಿಗೆ ಕಾರ್ಮಿಕರಿದ್ದು, ಈ ಪೈಕಿ ಸಂಘದಲ್ಲಿ ೧೦೪೪ ಮಂದಿ ಸದಸ್ಯರಿದ್ದಾರೆ. ಉಳಿದಂತೆ ಗುತ್ತಿಗೆ ಕಾರ್ಮಿಕರು ಎಐಟಿಯುಸಿ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದಾರೆ. ಪ್ರಸ್ತುತ ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ತಮ್ಮ ೩ ವರ್ಷಗಳ ಅಧಿಕಾರಾವಧಿಯಲ್ಲಿ ಬಹುತೇಕ ಅವಧಿ ಹೋರಾಟದಲ್ಲಿಯೇ ಕಳೆದಿದ್ದಾರೆ.
ಈ ಬಾರಿ ಅಧ್ಯಕ್ಷ ಸ್ಥಾನಕ್ಕೆ ಸುರೇಶ್ ಮತ್ತು ಸುನಿಲ್ ಕುಮಾರ್ ಸ್ಪರ್ಧಿಸಿದ್ದು, ೨ ಉಪಾಧ್ಯಕ್ಷ ಸ್ಥಾನಕ್ಕೆ ವಿನೋದ್ ಕುಮಾರ್, ಮಂಜುನಾಥ್, ಶ್ರೀನಿವಾಸ್, ಶ್ರೀಧರ್, ನವೀನ್ ಕುಮಾರ್, ಸಂಪತ್ ಕುಮಾರ್, ವೆಂಕಟೇಶ್ ಮತ್ತು ವಿಕ್ಟರ್ ಸೇರಿದಂತೆ ಒಟ್ಟು ೮ ಜನ ಹಾಗು ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಕೇಶ್ ಮತ್ತು ಸತೀಶ್ ಸ್ಪರ್ಧಿಸಿದ್ದಾರೆ.