ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು
ನಗರದ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಶನಿವಾರ ನಡೆದ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿ, ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯನ್ನು ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿನ ಕರಕುಶಲ ಮತ್ತು ಕುಶಲ ಕರ್ಮಿಗಳನ್ನು ಆರ್ಥಿಕವಾಗಿ ಬಲಪಡಿಸಿ, ಅವರ ಸ್ವ ಉದ್ಯೋಗಕ್ಕೆ ಪ್ರೋತ್ಸಾಹ ನೀಡಿ, ನಿರುದ್ಯೋಗ ಸಮಸ್ಯೆ ಹೋಗಲಾಡಿಸುವ ಉದ್ದೇಶದಿಂದ ಜಾರಿಗೆ ತರಲಾಗಿದೆ. ಈ ಯೋಜನೆ ಫಲವನ್ನು ಪ್ರತಿಯೊಬ್ಬ ಅರ್ಹ ಫಲಾನುಭವಿಗಳು ಪಡೆದುಕೊಳ್ಳುವಂತೆ ಕ್ರಮವಹಿಸಬೇಕು ಎಂದರು.
ಯೋಜನೆಯಡಿ ಅರ್ಜಿ ಸಲ್ಲಿಸಿದ ಬಡಗಿಗಳು, ಶಿಲ್ಪಿಗಳು, ಕಮ್ಮಾರರು, ಮರಗೆಲಸಗಾರರು, ಕುಂಬಾರಿಕೆ, ಮಾಲಾಕಾರರು, ಮೇಸ್ತ್ರಿಗಳು ಸೇರಿದಂತೆ ವಿವಿಧ ಕುಶಲಕರ್ಮಿಗಳಿಗೆ ಗುಣಮಟ್ಟದ ತರಬೇತಿ ನೀಡಬೇಕು. ತರಬೇತಿ ಸಮಯದಲ್ಲಿ ದಿನಕ್ಕೆ ₹500 ನಂತೆ ಸ್ಟೇಪಂಡ್ ಹಾಗೂ ತರಬೇತಿ ನಂತರದಲ್ಲಿ ₹15 ಸಾವಿರ ಉಚಿತ ಟೂಲ್ ಕಿಟ್ ಒದಗಿಸಿ ಸಾಲದ ಅವಶ್ಯಕತೆ ಇರುವ ಅರ್ಹ ಅಭ್ಯರ್ಥಿಗಳಿಗೆ ಸಾಲ ಮಂಜೂರು ಮಾಡಿ ಅವರ ಸ್ವ ಉದ್ಯೋಗಕ್ಕೆ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.ಜಿಲ್ಲೆಯಲ್ಲಿ ಇನ್ನೂ ಒಂದು ವಾರದೊಳಗಾಗಿ ತರಬೇತಿ ಕೇಂದ್ರ ತೆರೆಯಲು ಅಗತ್ಯ ಕ್ರಮವಹಿಸಬೇಕು. ಈಗಾಗಲೇ ತರಬೇತಿ ಪಡೆದಿರುವ ಅಭ್ಯರ್ಥಿಗಳಿಗೆ ಶೀಘ್ರವಾಗಿ ಟೂಲ್ ಕಿಟ್ ನೀಡಬೇಕು ಎಂದ ಅವರು, ಯೋಜನೆ ಫಲವನ್ನು ಪ್ರತಿಯೊಬ್ಬರು ಪಡೆದುಕೊಳ್ಳುವಂತೆ ತಿಳಿಸಿದರು.
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ, ಜಿಲ್ಲಾ ಕೈಗಾರಿಕಾ ಕೇಂದ್ರ ಉಪ ನಿರ್ದೇಶಕ ಚಂದ್ರಶೇಖರ್, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಸುರೇಶ್, ವಿಶ್ವ ಕರ್ಮ ಯೋಜನೆ ಸಲಹಾ ಸಮಿತಿ ಸದಸ್ಯರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.