ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ
ವಿಶ್ವಕರ್ಮ ಸಮುದಾಯದವರು ದೈವದತ್ತವಾಗಿ ಪಂಚ ವಿದ್ಯೆಗಳನ್ನು ಕರಗತ ಮಾಡಿಕೊಂಡು, ದೇಶದ ಕಲೆ, ಸಂಸ್ಕೃತಿ ಹಾಗೂ ವಾಸ್ತುಶಿಲ್ಪ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಎಸ್.ವಿ. ಸಂಕನೂರ ಹೇಳಿದರು.
ನಗರದ ಜಿಲ್ಲಾಡಳಿತ ಭವನದ ಅಡಿಟೋರಿಯಂ ಸಭಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಡೆದ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಬಡಗಿತನ, ಕಮ್ಮಾರಿಕೆ, ಶಿಲ್ಪಕಲೆ ಸೇರಿದಂತೆ ವಿವಿಧ ಕಲೆಗಳಲ್ಲಿ ವಿಶ್ವಕರ್ಮ ಸಮುದಾಯದವರು ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿದ್ದಾರೆ. ದೇವತೆಗಳ ಅರಮನೆ, ಪಾಂಡವರ ಅರಗಿನ ಮನೆ ಹಾಗೂ ದೇಶದ ಅನೇಕ ಭವ್ಯ ದೇವಾಲಯಗಳ ನಿರ್ಮಾಣ ಮತ್ತು ಶಿಲ್ಪಕಲೆಯಲ್ಲಿ ವಿಶ್ವಕರ್ಮ ಸಮುದಾಯದ ಕೊಡುಗೆ ಸ್ಮರಣೀಯವಾಗಿದೆ ಎಂದರು.ಸಮುದಾಯದ ಬಹುತೇಕ ಕುಟುಂಬಗಳು ಆರ್ಥಿಕವಾಗಿ ಮಧ್ಯಮ ಹಾಗೂ ಕೆಳವರ್ಗದಲ್ಲಿದ್ದು, ಮಕ್ಕಳ ಭವಿಷ್ಯ ಉಜ್ವಲವಾಗಬೇಕಾದರೆ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಪ್ರತಿಯೊಬ್ಬರೂ ಸಂಘಟಿತರಾಗಿ ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.
ದೇಶದ ಶಿಲ್ಪಕಲೆ ಹಾಗೂ ವಾಸ್ತುಶಿಲ್ಪದ ಇತಿಹಾಸದಲ್ಲಿ ವಿಶ್ವಕರ್ಮ ಸಮುದಾಯದ ಕೊಡುಗೆ ವಿಶೇಷವಾಗಿದೆ. ಐಹೊಳೆ, ಬಾದಾಮಿ, ಬೇಲೂರು ಹಾಗೂ ಹಳೆಬೀಡು ಸೇರಿದಂತೆ ಕರ್ನಾಟಕದ ಹಲವು ಐತಿಹಾಸಿಕ ತಾಣಗಳಲ್ಲಿರುವ ಭವ್ಯ ದೇವಾಲಯಗಳು ಹಾಗೂ ಶಿಲ್ಪಕೃತಿಗಳು ಶಿಲ್ಪಿಗಳ ಅಪೂರ್ವ ಕಲಾ ನೈಪುಣ್ಯಕ್ಕೆ ಸಾಕ್ಷಿಯಾಗಿವೆ ಎಂದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ವಸಂತ ಮಡ್ಲೂರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಬಸವರಾಜ ಬಳ್ಳಾರಿ ಸೇರಿ ಸಮುದಾಯದ ಮುಖಂಡರು ಇದ್ದರು.