ಕೃಷಿ ಇಲಾಖೆಯ ಅಧಿಕಾರಿಗಳು ಕಚೇರಿ ಕೆಲಸಗಳೊಂದಿಗೆ ರೈತರ ಜಮೀನಿಗೆ ತೆರಳಿ, ರೈತರಿಗೆ ಸೂಕ್ತ ಮಾಹಿತಿ ನೀಡಬೇಕು.
ಕೃಷಿ ಇಲಾಖೆಯ ದ್ವೈಮಾಸಿಕ ಕಾರ್ಯಾಗಾರದಲ್ಲಿ ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ
ಕನ್ನಡಪ್ರಭ ವಾರ್ತೆ ಕುಷ್ಟಗಿ
ಕೃಷಿ ಇಲಾಖೆಯ ಅಧಿಕಾರಿಗಳು ಕಚೇರಿ ಕೆಲಸಗಳೊಂದಿಗೆ ರೈತರ ಜಮೀನಿಗೆ ತೆರಳಿ, ರೈತರಿಗೆ ಸೂಕ್ತ ಮಾಹಿತಿ ನೀಡಬೇಕು ಎಂದು ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ಹೇಳಿದರು.
ತಾಲೂಕಿನ ಮದಲಗಟ್ಟಿ ಗ್ರಾಮದ ಜಮೀನೊಂದರಲ್ಲಿ ಕೃಷಿ ಇಲಾಖೆಯಿಂದ ನಡೆದ ದ್ವೈಮಾಸಿಕ ಕಾರ್ಯಾಗಾರದಲ್ಲಿ ಮಾತನಾಡಿದರು. ತಾಲೂಕಿನಲ್ಲಿ ಕೆಲಸ ಮಾಡುವಂತಹ ಕೃಷಿ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ರೈತರ ಹೊಲಗಳಿಗೆ ಭೇಟಿ ನೀಡುವ ಮೂಲಕ ರೈತರಿಗೆ ಸರಿಯಾದ ಮಾಹಿತಿ ನೀಡುವಂತಹ ಕೆಲಸ ಮಾಡಬೇಕು ಎಂದರು.
ಕೃಷಿ ವಿಶ್ವವಿದ್ಯಾಲಯ ರಾಯಚೂರಿನ ಸಹ ವಿಸ್ತರಣಾ ನಿರ್ದೇಶಕ ಡಾ. ಎ.ಆರ್. ಕುರುಬರ ಮಾತನಾಡಿ, ಅಧಿಕಾರಿಗಳು ರೈತರೊಂದಿಗೆ ನಿಕಟ ಸಂಪರ್ಕ ಇರಿಸಿಕೊಂಡು ಸೂಕ್ತ ಮಾರ್ಗದರ್ಶನ ನೀಡುವುದರೊಂದಿಗೆ ಅನುಭವಿ ರೈತರಿಂದ ಹೊಸದನ್ನು ಕಲಿಯಬೇಕೆಂದು ತಿಳಿಸಿದರು. ಪ್ರಸ್ತುತ ಕೃಷಿ ಬೆಳೆಗಳ ಸಮಗ್ರ ಮಾಹಿತಿ, ಕೀಟ ಮತ್ತು ರೋಗಗಳ ನಿಯಂತ್ರಣ ಮತ್ತು ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭ ಕೊಪ್ಪಳ ಜಿಲ್ಲೆಯ ಉಪ ಕೃಷಿ ನಿರ್ದೇಶಕ ಸಹದೇವ ಯರಗೊಪ್ಪ, ಕೃಷಿ ವಿಸ್ತರಣಾ ಘಟಕದ ಮುಖ್ಯಸ್ಥರಾದ ಡಾ. ಎಂ.ವಿ. ರವಿ, ಡಾ. ರಾಘವೇಂದ್ರ ಎಲಿಗಾರ್, ರೈತ ಮುಖಂಡ ದೇವೇಂದ್ರಪ್ಪ ಬಳೂಟಗಿ, ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರು, ಕೃಷಿ ಅಧಿಕಾರಿಗಳು ಸಹಾಯಕ ಕೃಷಿ ಅಧಿಕಾರಿಗಳು, ಆತ್ಮ ಯೋಜನೆಯ ತಾಂತ್ರಿಕ ವ್ಯವಸ್ಥಾಪಕರು ಮತ್ತು ಕೃಷಿ ಸಂಜೀವಿನಿಯ ತಾಂತ್ರಿಕ ಸಹಾಯಕರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.