ಸಿದ್ದರಾಮಯ್ಯ ವಾಲ್ಮೀಕಿ ಹಗರಣದ ಜವಾಬ್ದಾರಿ ಹೊರಬೇಕು

KannadaprabhaNewsNetwork |  
Published : Aug 03, 2024, 12:37 AM IST
15 | Kannada Prabha

ಸಾರಾಂಶ

ವಾಲ್ಮೀಕಿ ನಿಗಮದ ಹಣ ತೆಲಂಗಾಣದ ಚುನಾವಣೆಗೆ ಹೋಗಿದೆ. ತೆಲಂಗಾಣದ ಚುನಾವಣೆಗೆ ಹಣ ಕೊಡಲು ಸಿದ್ದರಾಮಯ್ಯ ಅವರಿಗೆ ಜವಾಬ್ದಾರಿ ನೀಡಿ ಹೈಕಮಾಂಡ್ ಸೂಚನೆ ನೀಡಿತ್ತು.

ಕನ್ನಡಪ್ರಭ ವಾರ್ತೆ ಮೈಸೂರು

ವಾಲ್ಮೀಕಿ ನಿಗಮದಲ್ಲಿ ಭ್ರಷ್ಟಾಚಾರ ಆಗಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಅಧಿವೇಶನದಲ್ಲಿ ಒಪ್ಪಿಕೊಂಡಿದ್ದಾರೆ. ಅಲ್ಲದೆ, ಅವರೇ ಹಣಕಾಸು ಸಚಿವರಾಗಿರುವುದರಿಂದ ಹಗರಣದ ಜವಾಬ್ದಾರಿ ಹೊರಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದರು.

ಕಡೆಯ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿಯ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ನಿಗಮದ ಹಣ ತೆಲಂಗಾಣದ ಚುನಾವಣೆಗೆ ಹೋಗಿದೆ. ತೆಲಂಗಾಣದ ಚುನಾವಣೆಗೆ ಹಣ ಕೊಡಲು ಸಿದ್ದರಾಮಯ್ಯ ಅವರಿಗೆ ಜವಾಬ್ದಾರಿ ನೀಡಿ ಹೈಕಮಾಂಡ್ ಸೂಚನೆ ನೀಡಿತ್ತು. ಇದು ರಾಜ್ಯದ ಬಡವರ, ತೆರಿಗೆ ಹಣ. ಇದರ ನೇರ ಹೊಣೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊರಬೇಕು. ಅವರೇ ಹಣಕಾಸು ಸಚಿವರು, ನಾಗೇಂದ್ರ ನೆಪ ಮಾತ್ರ. ನಾಗೇಂದ್ರ ಹಿಂದಿರುವ ಶಕ್ತಿ ಸಿದ್ದರಾಮಯ್ಯ ಎಂದು ಆರೋಪಿಸಿದರು.

ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಜನಾಂದೋಲನದ ಕುರಿತು ಪ್ರತಿಕ್ರಿಯಿಸಿದ ಅವರು, ಕೇಂದ್ರ ಬಜೆಟ್‌ ನಲ್ಲಿ ಬಿಜೆಪಿ ಸರ್ಕಾರ ಇಲ್ಲದ ರಾಜ್ಯಗಳಿಗೂ ಅನುದಾನ ನೀಡಿದೆ. ಹಾಗೆಯೇ ಕರ್ನಾಟಕದಲ್ಲಿ ರೈಲ್ವೆ, ಹೈವೇಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಸಾಕಷ್ಟು ಅನುದಾನ ನೀಡಿದೆ. ಅವರು ಅಂಕಿ ಅಂಶ ಇಟ್ಟುಕೊಂಡು ಮಾತನಾಡಲಿ. ನಾನು ಕೂಡ ಅಂಕಿ ಅಂಶಗಳ ಜೊತೆಗೆ ಉತ್ತರ ನೀಡುತ್ತೇನೆ ಎಂದು ತಿಳಿಸಿದರು.

ಎಂಡಿಎ ಹಗರಣದ ವಿರುದ್ಧ ಬಿಜೆಪಿ ಪಾದಯಾತ್ರೆ ಉದ್ಘಾಟನೆಯಲ್ಲಿ ಭಾಗಿಯಾಗಲಿದ್ದೇನೆ. ಜೊತೆಗೆ ಅಧಿವೇಶನ ಇರುವ ಕಾರಣ ಹಲವು ಬಿಲ್‌ ಗಳ ಮಂಡನೆ ಆಗಬೇಕಿದೆ. ಹೀಗಾಗಿ, ಪಾದಯಾತ್ರೆ ಸಮಾವೇಶದಲ್ಲಿ ಭಾಗಿಯಾಗುತ್ತೇವೆ ಎಂದು ಅವರು ಹೇಳಿದರು.

ಮೇಕೆದಾಟು ಯೋಜನೆ ಅನುಷ್ಠಾನ ಸಂಬಂಧ ಮೊದಲು ನ್ಯಾಯಾಲಯದಲ್ಲಿನ ಸಮಸ್ಯೆ ಇತ್ಯರ್ಥ ಮಾಡಿಕೊಂಡು, ನಂತರ ನಮ್ಮ ಬಳಿಗೆ ಬನ್ನಿ ಎಂದರು.

ಸಂಸತ್ ಅಧಿವೇಶನದ ನಡುವೆಯೂ ಅಧಿದೇವತೆ ಚಾಮುಂಡೇಶ್ವರಿ ದರ್ಶನ ಮಾಡಿದ್ದೇನೆ. ತಾಯಿ ಚಾಮುಂಡೇಶ್ವರಿ ನಾಡಿನ ಶಕ್ತಿ ದೇವತೆ. ಈಗಾಗಲೇ ರಾಜ್ಯದಲ್ಲಿ ಅತಿವೃಷ್ಟಿ ಉಂಟಾಗಿದೆ. ದೇಶದ ಹಲವೆಡೆ ಈಗಲೂ ಬರಗಾಲ ಇದೆ. ನಾಡಿಗೆ ಒಳಿತಾಗಲಿ, ರಾಜ್ಯ ಸುಭಿಕ್ಷವಾಗಿರಲಿ ಎಂದು ಪ್ರಾರ್ಥಿಸಿದ್ದೇನೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ