ಯುಕೆಪಿ ಕ್ಯಾಂಪಿನ ನೀಲಕಂಠೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ । ಬಿಜೆಪಿ ಪ್ರಚಾರಕ್ಕೆ ಚಾಲನೆ
ಸುರಪುರ ಮತಕ್ಷೇತ್ರದಲ್ಲಿ ಅಭಿವೃದ್ಧಿಗೆ ಆದ್ಯತೆ ನೀಡಿರುವ ಬಿಜೆಪಿ ಪಕ್ಷಕ್ಕೆ ಮತ ನೀಡಿ ಗೆಲ್ಲಿಸಬೇಕೆಂದು ಬಿಜೆಪಿ ಅಭ್ಯರ್ಥಿ ನರಸಿಂಹನಾಯಕ (ರಾಜೂಗೌಡ) ಅವರ ಪತ್ನಿ ಮೈತ್ರಾ ನರಸಿಂಹನಾಯಕ ಹೇಳಿದರು.
ಪಟ್ಟಣದ ಯುಕೆಪಿ ಕ್ಯಾಂಪಿನ ನೀಲಕಂಠೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಿಜೆಪಿ ಪ್ರಚಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಹಿಳೆಯರಿಗೆ ಕಾಂಗ್ರೆಸ್ ಸರಕಾರ ಗೃಹ ಲಕ್ಷ್ಮಿ ಯೋಜನೆ, ಉಚಿತ ಬಸ್ ಸೇವೆ ಸೇರಿದಂತೆ ಇನ್ನಿತರ ಗ್ಯಾರಂಟಿ ಯೋಜನೆಗಳ ಮೂಲಕ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಸುರಪುರ ಮತಕ್ಷೇತ್ರದ ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಮತ ನೀಡಿದರೆ ಗೃಹಲಕ್ಷ್ಮಿ 2 ಸಾವಿರ ಬರುವುದಿಲ್ಲ. ಅದಕ್ಕಾಗಿ ಯಾರು ಬಿಜೆಪಿ ಬೆಂಬಲಿಸಬೇಡಿ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಗೃಹ ಲಕ್ಷ್ಮಿ ಯೋಜನೆಯಡಿಯಲ್ಲಿ ಬರುವ 2 ಸಾವಿರ ರು.ಗಳು ಬಿಜೆಪಿಗೆ ಮತ ನೀಡುವುದರಿಂದ ದುಡ್ಡು ಬರುವುದು ನಿಲ್ಲುವುದಿಲ್ಲ. ಕಾಂಗ್ರೆಸ್ ಮುಖಂಡರು ಸುಳ್ಳು ಹೇಳಿ ಜನರನ್ನು ಯಾಮಾರಿಸುತ್ತಿದ್ದಾರೆ ಎಂದರು.ಸುರಪುರ ಮತಕ್ಷೇತ್ರದಲ್ಲಿ ರಾಜೂಗೌಡ ಅವರು ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಶಾಲಾ-ಕಾಲೇಜು, ರಸ್ತೆ, ಶುದ್ಧ ಕುಡಿವ ನೀರು ಸೇರಿದಂತೆ ಅನೇಕ ಕೆಲಸಗಳನ್ನು ಮಾಡಿದ್ದಾರೆ. ಅಭಿವೃದ್ಧಿ ಸುರಪುರ ಮತಕ್ಷೇತ್ರದ ಉಪ ಚುನಾವಣೆ ಅಭ್ಯರ್ಥಿ ರಾಜೂಗೌಡ ಹಾಗೂ ಲೋಕಸಭಾ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಅವರಿಗೆ ಮತ ನೀಡಿ ಬೆಂಬಲಿಸಬೇಕು ಎಂದು ಹೇಳಿದರು.