ಕನ್ನಡಪ್ರಭ ವಾರ್ತೆ ಬೆಳಗಾವಿಅನ್ನ ಕಿತ್ತುಕೊಳ್ಳುವ ಪಕ್ಷಕ್ಕೆ ಮತ ಹಾಕುವುದಕ್ಕಿಂತ ಅನ್ನ ಕೊಡುವ ಪಕ್ಷಕ್ಕೆ ವೋಟ್ ಕೊಡಿ ಎಂದು ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಮನವಿ ಮಾಡಿದರು.
ಕಾಂಗ್ರೆಸ್ ಸದಾ ಬಡವರ ಪರವಾಗಿದ್ದು, ಚುನಾವಣೆಗೂ ಮುನ್ನ ಘೋಷಿಸಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ನುಡಿದಂತೆ ನಡೆದಿದೆ. ಸದ್ಯ ರಾಜ್ಯದಲ್ಲಿ ಪಕ್ಷದ ಪರ ಅಲೆಯಿದ್ದು, ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಲು ಒಂದು ಬಾರಿ ಅವಕಾಶ ನೀಡಿ ಎಂದು ಮತದಾರರಲ್ಲಿ ಮನವಿ ಮಾಡಿದರು.
ಕಳೆದ 15 ವರ್ಷದಿಂದ ರಾಜಕೀಯದಲ್ಲಿ ಸಕ್ರಿಯರಾಗಿರುವ ತಂದೆ ಸತೀಶ ಜಾರಕಿಹೊಳಿ ಅವರು ತಮ್ಮ ಮತಕ್ಷೇತ್ರದ ಗ್ರಾಮಗಳಲ್ಲಿ ಬೇಡಿಕೆಗೆ ಅನುಗುಣವಾಗಿ ಶಾಲಾ ಕಾಲೇಜುಗಳನ್ನು ನಿರ್ಮಿಸಿ ಶೈಕ್ಷಣಿಕ ಪ್ರಗತಿಗೆ ಶ್ರಮಿಸಿದ್ದಾರೆ. ನನಗೂ ಇದೇ ರೀತಿಯಲ್ಲಿ ಜನರ ಸೇವೆ ಮಾಡುವ ಬಯಕೆಯಿದೆ. ಕಾಂಗ್ರೆಸ್ ಪಕ್ಷ ದೇಶದಲ್ಲಿ ಸ್ವಚ್ಛ ಆಡಳಿತ ನೀಡಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದವರು ಕಾಂಗ್ರೆಸ್ ಪಕ್ಷದವರು. ಹೀಗಾಗಿ ದೇಶದ ಅಭಿವೃದ್ಧಿಗೆ ನಿಜವಾಗಿ ಶ್ರಮಿಸಿದವರು ಕಾಂಗ್ರೆಸ್ ಪಕ್ಷದವರು. ಕ್ಷೇತ್ರದಲ್ಲಿ ನನ್ನ ಗೆಲುವಿಗೆ ಶ್ರಮಿಸುವ ಮೂಲಕ ಕಾಂಗ್ರೆಸ್ ಕೈ ಬಲಪಡಿಸಬೇಕು. ಇದಕ್ಕಾಗಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಗೆಲುವಿಗೆ ಪಣತೊಡಬೇಕು ಎಂದು ಕೋರಿದರು.ಕಳೆದ ವಿಧಾನಸಭೆಯ ಚುನಾವಣೆಯಲ್ಲಿ ಕೊಟ್ಟ ಎಲ್ಲ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಈ ಬಾರಿ ಚಿಕ್ಕೋಡಿ ಸಮಗ್ರ ಅಭಿವೃದ್ಧಿಗೆ ನನಗೆ ಬೆಂಬಲಿ ನೀಡಿ, ನಮ್ಮ ತಂದೆಯವರಾದ ಸತೀಶ್ ಜಾರಕಿಹೊಳಿ ಅವರ ಕೈ ಬಲಪಡಿಸಬೇಕು ಎಂದು ವಿನಂತಿಸಿದರು.
ಕೋಟ್...ರಾಜಕಾರಣದ ಮೂಲಕ ಸಮಾಜ ಸೇವೆ ಮಾಡುವುದರ ಜೊತೆಗೆ ಶಿಕ್ಷಣ, ಕ್ರೀಡೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಾಧನೆಗೈಯಲು ಬಯಸುವ ಯುವಕರಿಗೆ ತಮ್ಮ ಫೌಂಡೇಶನ್ ಮೂಲಕ ಸಹಾಯ ಸಹಕಾರ ನೀಡುವ ನಮ್ಮ ತಂದೆ ಸತೀಶ ಜಾರಕಿಹೊಳಿ ಅವರು ನನಗೆ ಆದರ್ಶ. ಅವರ ದಾರಿಯಲ್ಲೇ ನಡೆದು ಮತಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತೇನೆ. ನಿಮ್ಮ ಮನೆಯ ಮಗಳಾದ ನನಗೂ ಸಹ ನಮ್ಮ ತಂದೆಯವರಿಗೆ ನೀಡಿದ ಬೆಂಬಲ, ಅಭಿಮಾನ ನೀಡಿ.-ಪ್ರಿಯಂಕಾ ಜಾರಕಿಹೊಳಿ, ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ.