ಗದಗ: ಅರ್ಹ ಮತದಾರರು ಮತದಾನ ಮಾಡುವ ಪ್ರಕ್ರಿಯೆಯ ಕುರಿತು ವಿದ್ಯುನ್ಮಾನ ಮತಯಂತ್ರದ ಪ್ರಾತ್ಯಕ್ಷಿಕೆ ಅರಿಯಬೇಕು. ಮತದಾನದ ದಿನ ಸರಿಯಾಗಿ ಮತ ಚಲಾಯಿಸುವ ಮೂಲಕ ಸುಭದ್ರ ಸರ್ಕಾರ ನಿರ್ಮಾಣಕ್ಕೆ ಕೈಜೋಡಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ವೈಶಾಲಿ ಎಂ.ಎಲ್. ಕರೆ ನೀಡಿದರು.
ಅವರು ಜಿಲ್ಲಾಡಳಿತ, ಜಿಪಂ ಹಾಗೂ ಸ್ವೀಪ್ ಸಮಿತಿಯಿಂದ ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯಾದ್ಯಂತ ವಿದ್ಯುನ್ಮಾನ ಮತಯಂತ್ರ ಪ್ರಾತ್ಯಕ್ಷಿಕೆ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಶುಕ್ರವಾರ ಜಿಲ್ಲಾಡಳಿತ ಭವನದಲ್ಲಿ ಚಾಲನೆ ನೀಡಿ ಮಾತನಾಡಿದರು. ವಿದ್ಯುನ್ಮಾನ ಮತಯಂತ್ರದಲ್ಲಿ ಮತದಾನ ಮಾಡಿದ ನಂತರ ಮತ ಚಲಾಯಿಸಿದ ಪಕ್ಷ ಅಥವಾ ವ್ಯಕ್ತಿಗೆ ದಾಖಲಾದ ಬಗ್ಗೆ ಖಾತರಿಪಡಿಸಿಕೊಳ್ಳಲು ವಿವಿ ಪ್ಯಾಟ್ ಯಂತ್ರ ಸಹಕಾರಿಯಾಗಿದೆ. ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿಪ್ಯಾಟ್ ಮತಯಂತ್ರ ಮತದಾನ ಪ್ರಕ್ರಿಯೆಯಲ್ಲಿ ವಿಶ್ವಾಸಾರ್ಹತೆ ಮೂಡಿಸಲಿವೆ. ಯಾವುದೇ ಅಂಜಿಕೆ, ಭಯ, ನಿಷ್ಕಾಳಜಿ ತೋರದೇ ಪ್ರತಿ ಅರ್ಹ ಮತದಾರ ತನ್ನ ಹಕ್ಕನ್ನು ಮತಗಟ್ಟೆಗೆ ಆಗಮಿಸಿ ಚಲಾಯಿಸಬೇಕು ಎಂದರು.ಮುಂಬರುವ ಲೋಕಸಭಾ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರದ ಮೂಲಕ ಮತ ಚಲಾಯಿಸಲು ಅನುಕೂಲವಾಗುವಂತೆ ಜನರಿಗೆ ಪ್ರಾತ್ಯಕ್ಷಿಕೆ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ವಿದ್ಯುನ್ಮಾನ ಮತಯಂತ್ರದ ಬಳಕೆಯ ಪ್ರತಿ ಹಂತ ವಿವರಿಸಿ ಪ್ರಾತ್ಯಕ್ಷಿಕೆ ಸಾದರಪಡಿಸಿದರು. ಮತಯಂತ್ರ, ಕಂಟ್ರೋಲಿಂಗ ಯುನಿಟ್ ಹಾಗೂ ವಿವಿ ಪ್ಯಾಟ್ ಕಾರ್ಯ ಹಾಗೂ ಮತ ಚಲಾಯಿಸುವ ಪ್ರಕ್ರಿಯೆ ನ್ನು ಸಾರ್ವಜನಿಕರು ವೀಕ್ಷಿಸಿದರು. ಮಾಸ್ಟರ್ ಟ್ರೇನರ್ ಬಸವರಾಜ ಗಿರಿತಿಮ್ಮಣ್ಣವರ ಮಾತನಾಡಿ, ಚುನಾವಣೆ ಹಿನ್ನೆಲೆ ಪ್ರತಿ ಮತಗಟ್ಟೆಯಲ್ಲಿ ವಿದ್ಯುನ್ಮಾನ ಮತಯಂತ್ರ (ಇವಿಎಂ) ಹಾಗೂ ವಿವಿ ಪ್ಯಾಟ್ ಪೆಟ್ಟಿಗೆ ಇಡಲಾಗುತ್ತದೆ. ಮತದಾರ ಮತಗಟ್ಟೆಗೆ ಮತ ಚಲಾಯಿಸಲು ಬಂದಾಗ ಮತಯಂತ್ರದಲ್ಲಿ ಹಸಿರು ದೀಪ ಉರಿಯುತ್ತಿರುವುದನ್ನು ಖಚಿತಪಡಿಸಿಕೊಂಡು ಬ್ಯಾಲೇಟ್ ಯುನಿಟ್ನಲ್ಲಿ ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರು, ಚಿಹ್ನೆಯ ಎದುರು ಇರುವ ನೀಲಿ ಗುಂಡಿ ಒತ್ತುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕು. ನಂತರ ಕೆಂಪು ದೀಪ ಹಾಗೂ ಬೀಪ್ ಸದ್ದು ಮತದಾನವಾಗಿರುವುದನ್ನು ಖಚಿತಪಡಿಸುತ್ತದೆ. ಬಳಿಕ ಪಕ್ಕದಲ್ಲಿರುವ ವಿ.ವಿ. ಪ್ಯಾಟ್ ಯಂತ್ರದಲ್ಲಿ ತಾವು ಮತ ಚಲಾಯಿಸಿದ ಅಭ್ಯರ್ಥಿಯ ಕ್ರಮ ಸಂಖ್ಯೆ, ಹೆಸರು ಹಾಗೂ ಚಿಹ್ನೆ ಒಳಗೊಂಡಿರುವ ಚೀಟಿಯನ್ನು ಏಳು ಸೆಕೆಂಡ ವರೆಗೆ ಮತದಾರ ನೋಡಿ ಮತದಾನ ಖಚಿತಪಡಿಸಿಕೊಳ್ಳಬಹುದಾಗಿದೆ ಎಂದು ವಿವರಿಸಿದರು.ಈ ವೇಳೆ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಸೇರಿದಂತೆ ಜಿಲ್ಲಾಧಿಕಾರಿಗಳ ಕಚೇರಿಯ ಶಿರಸ್ತೇದಾರರು, ಸಿಬ್ಬಂದಿ, ಕಾಲೇಜು ಪ್ರಾಂಶುಪಾಲರು, ಸಾರ್ವಜನಿಕರು ಹಾಜರಿದ್ದರು.