- ಜಿಲ್ಲಾ ಚುನಾವಣಾಧಿಕಾರಿ, ಡಿಸಿ ಡಾ.ವೆಂಕಟೇಶ ಮನವಿ । ಜಿಲ್ಲಾ ಕ್ರೀಡಾಂಗಣದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ - - - ಕನ್ನಡಪ್ರಭ ವಾರ್ತೆ, ದಾವಣಗೆರೆ ಯುವಜನರು ಮತದಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಬಲಿಷ್ಠ ಭಾರತ ಕಟ್ಟುವಲ್ಲಿ ತಮ್ಮ ಸುತ್ತಮುತ್ತಲಿನ ಜನರಿಗೂ ಮತದಾನದ ಮಹತ್ವ ತಿಳಿಸಿಕೊಡಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ ಹೇಳಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಸಂಜೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಿವಿಧ ಇಲಾಖೆ ಮತ್ತು ಸಿದ್ಧಗಂಗಾ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಮತದಾನ ಜಾಗೃತಿ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.ಭಾರತ ವಿಶ್ವದಲ್ಲೇ ದೊಡ್ಡ ಪ್ರಜಾಪ್ರಭುತ್ವ ಹೊಂದಿರುವ ದೇಶವಾಗಿದೆ. ಮತದಾನ ಪ್ರತಿಯೊಬ್ಬರ ಹಕ್ಕು, ಇದನ್ನು ಚಲಾಯಿಸುವುದು ನಮ್ಮ ಕರ್ತವ್ಯ, ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಿ. ನನ್ನ ಮತ ಮಾರಾಟಕ್ಕಿಲ್ಲ, ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತ ಚುನಾವಣೆಗೆ ಸಹಕರಿಸಿ. ನಮ್ಮ ಸಂವಿಧಾನ ನೀಡಿರುವಂತಹ ಹಕ್ಕನ್ನು ನಾವು ಪ್ರಬಲವಾಗಿ ಬಳಸಿಕೊಂಡರೆ ನಮಗೆ ಉಜ್ವಲ ಭವಿಷ್ಯವನ್ನು ನಮ್ಮ ದೇಶಕ್ಕೆ ನೀಡಬಹುದು ಎಂದರು.
ಚುನಾವಣೆ ಪ್ರಜಾಪ್ರಭುತ್ವದ ಭದ್ರ ಬುನಾದಿ. ಯಾವುದೇ ಆಸೆ ಆಮಿಷಗಳಿಗೆ ತುತ್ತಾಗದೇ ನಿರ್ಭೀತಿಯಿಂದ ಮತ ಚಲಾಯಿಸಬೇಕು. ಮತದಾರರ ಪಟ್ಟಿಯಲ್ಲಿ ಹೆಸರಿರುವುದನ್ನು ಖಚಿತ ಪಡಿಸಿಕೊಂಡು ಮತದಾನ ಮಾಡಿ ಮೇ 7ರಂದು ಕಡ್ಡಾಯವಾಗಿ ಮತದಾನ ಮಾಡಿ ಎಂದರು.ಕ್ಷೇತ್ರದಲ್ಲಿ 1946 ಮತಗಟ್ಟೆಗಳಿವೆ. ಜಿಲ್ಲೆಯಲ್ಲಿ 17,06,169ಕ್ಕೂ ಹೆಚ್ಚು ಮತದಾರರಿದ್ದಾರೆ. ಅದರಲ್ಲಿ 50,000ಕ್ಕಿಂತ ಹೆಚ್ಚು ಯುವ ಮತದಾರರಿದ್ದಾರೆ. ಈ ಬಾರಿಯ ಮತದಾರ ಚೀಟಿಯಲ್ಲಿ ಕ್ಯೂಆರ್ ಕೋಡ್ ನಮೂದಿಸಲಾಗಿದೆ. ಇದರಿಂದ ನಿಮ್ಮ ಮತಗಟ್ಟೆ ಇರುವ ಸ್ಥಳ, ಮತಗಟ್ಟೆ ಸಂಖ್ಯೆಯನ್ನು ತಿಳಿಸುತ್ತದೆ ಎಂದ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸ್ವೀಪ್ ಅಧ್ಯಕ್ಷ ಸುರೇಶ ಬಿ. ಇಟ್ನಾಳ್ ಮಾತನಾಡಿ, ಶೇ.85 ರಷ್ಟು ಮತದಾನ ಸಾಧನೆ ನಮ್ಮ ಗುರಿಯಾಗಿದೆ. ಚುನಾವಣೆಯಲ್ಲಿ ಹೆಚ್ಚು ಮತದಾನ ಆಗುವುದರಿಂದ ಅತ್ಯುತ್ತಮರ ಆಯ್ಕೆ ಸಾಧ್ಯ. ಈ ದಿಸೆಯಲ್ಲಿ ಸಂವಿಧಾನಾತ್ಮಕ ಹಕ್ಕು, ಮತದಾನ ಕಾರ್ಯದಲ್ಲಿ ತಪ್ಪದೇ ಪಾಲ್ಗೊಳಬೇಕು. 18 ವರ್ಷ ತುಂಬಿದ ಅರ್ಹ ಮತದಾರರು ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಮತದಾನ ಮಾಡುವ ಮೂಲಕ ದೇಶದ ಕರ್ತವ್ಯ ನಿಭಾಯಿಸಬೇಕು ಎಂದರು.ಕಾರ್ಯಕ್ರಮದಲ್ಲಿ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಯುವ ಮತದಾರರಿಂದ ಕೇಕ್ ಕತ್ತರಿಸಿ ಸಿಹಿ ಹಂಚಲಾಯಿತು.
ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಬೇಬಿ ಸುನೀತಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಿಕಿ ಜಯಲಕ್ಷ್ಮೀಬಾಯಿ ಹಾಗೂ ಸಿದ್ಧಗಂಗಾ ಸಂಸ್ಥೆ ಜಯಂತ್, ಕಾಲೇಜಿನ ವಿದ್ಯಾರ್ಥಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಸಿದ್ಧಗಂಗಾ ಶಾಲೆ ವಿದ್ಯಾರ್ಥಿಗಳು ಭಾರತ ಭೂಪಟ ಆಕಾರದಲ್ಲಿ ನಿಲ್ಲುವ ಮೂಲಕ ಮೇ 7ರಂದು ಮತದಾನ ಮಾಡಿ ಎಂಬ ಸಂದೇಶ ರವಾನಿಸಿದ್ದು ಗಮನ ಸೆಳೆಯಿತು.
- - --13ಕೆಡಿವಿಜಿ44ಃ:
ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ ಇತರರು ಇದ್ದರು.-13ಕೆಡಿವಿಜಿ45ಃ:
ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ಸಿದ್ಧಗಂಗಾ ಶಾಲೆ ವಿದ್ಯಾರ್ಥಿಗಳು ಭಾರತ ಭೂಪಟ ಆಕಾರದಲ್ಲಿ ನಿಲ್ಲುವ ಮೂಲಕ ಮೇ 7ರಂದು ಮತದಾನ ಮಾಡಿ ಎಂಬ ಸಂದೇಶ ಗಮನ ಸೆಳೆಯಿತು.