ರಾಮನಗರ: ಚುನಾವಣೆಗಳಲ್ಲಿ ಯಾವುದೇ ಆಮಿಷಗಳಿಗೆ ಒಳಗಾಗದೇ ಸಂವಿಧಾನ ನೀಡಿರುವ ಮತದಾನದ ಹಕ್ಕನ್ನು ನಿಷ್ಪಕ್ಷಪಾತವಾಗಿ ಚಲಾಯಿಸುವಂತೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾ.ಎನ್.ಪಿ.ಅನಿತಾ ಕರೆ ನೀಡಿದರು.
ಚುನಾವಣೆಯಲ್ಲಿ ಸೂಕ್ತ ವ್ಯಕ್ತಿಯನ್ನು ಆಯ್ಕೆಮಾಡಿದಾಗ ಮಾತ್ರ ಉತ್ತಮವಾದ ಸಮಾಜ ನಿರ್ಮಾಣವಾಗಲು ಸಾಧ್ಯ, 18 ವರ್ಷ ಪೂರೈಸಿದ ಎಲ್ಲಾ ಅರ್ಹ ಯುವ ಮತದಾರರು ಮುಂಬರುವ ಚುನಾವಣೆಗಳಲ್ಲಿ ತಪ್ಪದೇ ಮತದಾನ ಮಾಡಿ, ಉತ್ತಮ ಜನಪ್ರತಿನಿಧಿಯನ್ನು ಆಯ್ಕೆ ಮಾಡುವಂತೆ ತಿಳಿಸಿದರು.
ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿ ಮತವೂ ಅತಿಮುಖ್ಯವಾದದ್ದು, ಅಧಿಕಾರಕ್ಕೆ ಯಾವ ಜನಪ್ರತಿನಿಧಿ ಉತ್ತಮವೆಂದುದನ್ನು ಅರಿತುಕೊಂಡು ನ್ಯಾಯ ರೀತಿಯಲ್ಲಿ ಮತದಾನ ಮಾಡಿ ಎಂದರು.ಪ್ರಜಾಪ್ರಭುತ್ವ ಬಲಪಡಿಸಲು 2011 ರಿಂದ ಜ. 25 ರಂದು ರಾಷ್ಟ್ರೀಯ ಮತದಾರರ ದಿನ ಎಂದು ಘೋಷಿಸಲಾಯಿತು. ಸಂವಿಧಾನದಲ್ಲಿ ಹಕ್ಕು ಮತ್ತು ಕರ್ತವ್ಯದ ಜೊತೆ ಕಡ್ಡಾಯ ಮತದಾನದ ಹಕ್ಕನ್ನು ನೀಡಿದೆ. ಸಂವಿಧಾನಾತ್ಮಕವಾಗಿ ಯಾವುದೇ ಜಾತಿ, ಧರ್ಮ, ಲಿಂಗ ತಾರತಮ್ಯ ಇಲ್ಲದೇ ಮತದಾನ ಮಾಡುವುದಾಗಿದೆ. ನಾವು ಮತದಾನ ಮಾಡದಿದ್ದರೆ ಪ್ರಜಾಪ್ರಭುತ್ವ ದಿಂದ ಹೊರಗೆ ಉಳಿಯುತ್ತೆವೆ. ಆದ್ದರಿಂದ ಎಲ್ಲರೂ ಕೂಡ ಮತದಾನ ಮಾಡಬೇಕು ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ ಅವರು ಮತದಾನದ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು.ಇದೇ ಸಂದರ್ಭದಲ್ಲಿ ಮತದಾನ ಜಾಗೃತಿ ಮೂಡಿಸಲು ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಜಿಪಂ ಸಿಇಒ ದಿಗ್ವಿಜಯ್ ಬೋಡ್ಕೆ, ಉಪವಿಭಾಗಾಧಿಕಾರಿ ಬಿನೋಯ್, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ರಾಮನಗರದ ಜಿಪಂ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಮತದಾನ ದಿನಾಚರಣೆ ಕಾರ್ಯಕ್ರಮವನ್ನು ನ್ಯಾ. ಅನಿತಾ ಉದ್ಘಾಟಿಸಿದರು.