ಜಿಲ್ಲೆಯಾದ್ಯಂತ ಮತದಾನದ ಜಾಗೃತಿ ಕಾರ್ಯಕ್ರಮಗಳು ಚುರುಕು

KannadaprabhaNewsNetwork |  
Published : Mar 27, 2024, 01:09 AM IST
ಸಿಕೆಬಿ-3 ತಾಲ್ಲೂಕಿನ ತಿಪ್ಪೇನಹಳ್ಳಿ ಗ್ರಾಮದಲ್ಲಿ ಮಹಿಳಾ ಸ್ವ-ಸಹಾಯ ಸಂಘದ ಪದಾಧಿಕಾರಿಗಳು , ಗ್ರಾಮ ಪಂಚಾಯತಿ ಸದಸ್ಯರು ಮತದಾನದ ಜಾಗೃತಿ ಜಾಥಾ ನಡೆಸಿದರು | Kannada Prabha

ಸಾರಾಂಶ

ನೀತಿ ಸಂಹಿತೆ ಜಾರಿಯಾದ ಬಳಿಕ ಸ್ವೀಪ್ ಕಾರ್ಯಕ್ರಮಗಳು ವೇಗ ಪಡೆದುಕೊಂಡಿದ್ದು, ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಮತ್ತು ತಾಲೂಕು ಸ್ವೀಪ್ ಸಮಿತಿಗಳು ವಿವಿಧ ಇಲಾಖೆಗಳ ಸಮನ್ವಯ ಮತ್ತು ಸಹಯೋಗದಲ್ಲಿ ಮತದಾನದ ಮಹತ್ವದ ಕುರಿತು ಪ್ರತಿಜ್ಞಾ ವಿಧಿಯನ್ನು ಬೋಧಿಸುವ ಕಾರ್ಯಗಳನ್ನು ಮಾಡಿದವು.

ಕನ್ನಡಪ್ರಭವಾರ್ತೆ ಚಿಕ್ಕಬಳ್ಳಾಪುರ

2024ರ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮತದಾನದ ಜಾಗೃತಿಯ ಸ್ವೀಪ್ ಕಾರ್ಯಕ್ರಮಗಳು ಚುರುಕುಗೊಂಡಿದ್ದು, ಮಂಗಳವಾರ ಅಧಿಕಾರಿಗಳು ಜಾತ್ರೆಗಳನ್ನು ಆಯ್ಕೆ ಮಾಡಿಕೊಂಡು ಅರಿವು ಮೂಡಿಸಲು ಯತ್ನಿಸಿದರು.

ಚುನಾವಣಾ ನೀತಿ ಸಂಹಿತೆ ಘೋಷಣೆಯಾಗುವ ಮುನ್ನವೇ ಸ್ವೀಪ್ ಕಾರ್ಯಕ್ರಮಗಳನ್ನು ಜಿಲ್ಲಾಡಳಿತ ಹಮ್ಮಿಕೊಂಡು ಜನರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ನಿರಂತರವಾಗಿ ಮಾಡುತ್ತಿದೆ. ನೀತಿ ಸಂಹಿತೆ ಜಾರಿಯಾದ ಬಳಿಕ ಸ್ವೀಪ್ ಕಾರ್ಯಕ್ರಮಗಳು ವೇಗ ಪಡೆದುಕೊಂಡಿದ್ದು, ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಮತ್ತು ತಾಲೂಕು ಸ್ವೀಪ್ ಸಮಿತಿಗಳು ವಿವಿಧ ಇಲಾಖೆಗಳ ಸಮನ್ವಯ ಮತ್ತು ಸಹಯೋಗದಲ್ಲಿ ಮತದಾನದ ಮಹತ್ವದ ಕುರಿತು ಪ್ರತಿಜ್ಞಾ ವಿಧಿಯನ್ನು ಬೋಧಿಸುವ ಕಾರ್ಯಗಳನ್ನು ಮಾಡಿದವು.

ಮನೆಯಿಂದಲೇ ಮತದಾನ ಮಾಡಲು ಅವಕಾಶ:

ಗೌರಿಬಿದನೂರು ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ಜಿ.ಕೆ.ಹೊನ್ನಯ್ಯ ಸ್ವೀಪ್ ತಂಡದೊಂದಿಗೆ ತರಿದಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಮೈಲಗಾನಹಳ್ಳಿ ಜಾತ್ರಾ ಮಹೋತ್ಸವದಲ್ಲಿ ಗ್ರಾಮಸ್ಥರಿಗೆ ಮತ್ತು ಸಾರ್ವಜನಿಕರಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸಿ ಮಾತನಾಡಿ, ಹಿರಿಯ ನಾಗರಿಕರಿಗೆ ಹಾಗೂ ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಇದೆ. ಇದನ್ನು ಸದ್ಬಳಕೆ ಮಾಡಿಕೊಂಡು ಮತದಾನ ಮಾಡಬೇಕು, ಜೊತೆಗೆ ಮತದಾನದ ದಿನದಂದು ಆಗಮಿಸುವ ಅಂಧ ಹಾಗೂ ವಿಕಲಚೇತನ ಮತದಾರರಿಗೆಂದು ಮನೆಯಿಂದ ಮತಗಟ್ಟೆವರೆಗೆ ಆಗಮಿಸಲು ವಾಹನ ಸೌಲಭ್ಯ ಕಲ್ಪಿಸಲಾಗುತ್ತದೆ. ಒಟ್ಟಾರೆ ಮತದಾರೆಲ್ಲರೂ ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೇ ಹಾಗೂ ಪ್ರಾಮಾಣಿಕತೆಯಿಂದ ಮತದಾನ ಮಾಡುವುದು ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಗೌರಿಬಿದನೂರು ನಗರದ ವಾರ್ಡ್ ನಂ-06ರ ಸಂತೆ ಮೈದಾನದಲ್ಲಿ ಮತ್ತು ವಾರ್ಡ್ -05ರ ವಿನಾಯಕ ನಗರದಲ್ಲಿ ಪ್ರತಿಯೊಬ್ಬರೂ ಮತದಾನ ಮಾಡಿ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಸ್ಥಳೀಯರಿಗೆ ತಿಳಿಸಿ ಅಧಿಕಾರಿಗಳು ಪ್ರತಿಜ್ಞಾ ವಿಧಿ ಬೋಧಿಸಿದರು.

ಚಿಕ್ಕಬಳ್ಳಾಪುರ ತಾಲೂಕಿನ ಅಂಗರೇಖನಹಳ್ಳಿ ವ್ಯಾಪ್ತಿಯ ಕಂದಕನಹಳ್ಳಿ ಗ್ರಾಮದ ಲಕ್ಷ್ಮೀನರಸಿಂಹ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಸಾರ್ವಜನಿಕರಿಗೆ ಮತದಾನದ ಮಹತ್ವ ಸಾರುವ ಕರಪತ್ರಗಳು ಮತ್ತು ಬಿತ್ತಿಪತ್ರಗಳನ್ನು ವಿತರಿಸಿ ಮತದಾನ ಬಗ್ಗೆ ತಾಲ್ಲೂಕು ಸ್ವೀಪ್ ಸಮಿತಿಯಿಂದ ಅರಿವು ಮೂಡಿಸಲಾಯಿತು. ತಿಪ್ಪೇನಹಳ್ಳಿ ಗ್ರಾಮದಲ್ಲಿ ಮಹಿಳಾ ಸ್ವ-ಸಹಾಯ ಸಂಘದ ಪದಾಧಿಕಾರಿಗಳು ,ಸದಸ್ಯರು ಮತದಾನದ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಜೊತೆಗೆ ‘ಚುನಾವಣಾ ಪರ್ವ ದೇಶದ ಗರ್ವ’ ಎಂಬ ಬ್ಯಾನರ್ ಪ್ರದರ್ಶಿಸಿ ಜನರಲ್ಲಿ ಜಾಗೃತಿ ಮೂಡಿಸುವ ಜಿಲ್ಲಾಡಳಿತ ಕಾರ್ಯಕ್ಕೆ ಕೈ ಜೋಡಿಸಿದರು.

ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿ ಕ್ರಾಸ್ ಬಳಿ ಇರುವ ಸಕ್ಲೇಜ ಆಗ್ರೋ ಆಯಿಲ್ ಕಂಪನಿ ನೌಕರರಿಗೆ ಚುನಾವಣಾ ಮಹತ್ವದ ಬಗ್ಗೆ ಅರಿವು ಮೂಡಿಸಲಾಯಿತು. ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮತ್ತು ಗುಡಿಬಂಡೆ ತಾಪಂ ಆಡಳಿತಾಧಿಕಾರಿ ಸಂತೋಷ್ ಕುಮಾರ್ ಪಾಟೀಲ್ ನೌಕರರಿಗೆ ಮತದಾನದ ಪ್ರತಿಜ್ಙಾ ವಿಧಿ ಬೋಧಿಸಿದರು. ನಂತರ ತಿರುಮಣಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮತಗಟ್ಟೆ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ಮೂಲಭೂತ ವ್ಯವಸ್ಥೆಗಳನ್ನು ಪರಿಶೀಲಿಸಿದರು.

ಇಂದಿನ ಸ್ವಿಪ್ ಚುಟುವಟಿಕೆಗಳಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮತ್ತು ಗುಡಿಬಂಡೆ ತಾಪಂ ಆಡಳಿತಾಧಿಕಾರಿ ಸಂತೋಷ್ ಕುಮಾರ್ ಪಾಟೀಲ್, ಗುಡಿಬಂಡೆ ತಹಸೀಲ್ದಾರ್ ಎನ್.ಮನಿಷ್, ಕಾರ್ಯನಿರ್ವಾಹಕ ಅಧಿಕಾರಿ ಆರ್.ಹೇಮಾವತಿ, ಗೌರಿಬಿದನೂರು ತಾಪಂ ಸಿಇಒ ಜಿ.ಕೆ ಹೊನ್ನಯ್ಯ, ಪಿಡಿಒ ಶ್ರೀನಿವಾಸ್ ಸೇರಿ ಸ್ಥಳೀಯ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಸ್ಥಳೀಯ ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವೈಯಕ್ತಿಕ ಕಾರಣದಿಂದ ಬೇಸತ್ತು ಕಿರುತೆರೆ ಯುವ ನಟಿ ಆತ್ಮ*ತ್ಯೆ
ಜ.6 ಇಲ್ಲವೇ 9ಕ್ಕೆ ಡಿಕೆಶಿ ಸಿಎಂ 200% ಕನ್ಫರ್ಮ್: ಇಕ್ಬಾಲ್