ಕನ್ನಡಪ್ರಭ ವಾರ್ತೆ ಮಲ್ಪೆ
ಪ್ರತಿಯೊಬ್ಬ ಮತದಾರರು ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಿ ಉತ್ತಮ ಜನಪ್ರತಿನಿಧಿಯನ್ನು ಆಯ್ಕೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಕೆ ಹೇಳಿದರು.ಅವರು ಮಲ್ಪೆಯ ಕಡಲ ಕಿನಾರೆಯಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಉಡುಪಿ ಇವರ ವತಿಯಿಂದ ಆಯೋಜಿಸಲಾದ ಜಲ ಕ್ರೀಡೆಯ ಮೂಲಕ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಪ್ರಜಾಪ್ರಭುತ್ವವನ್ನು ಬಲಪಡಿಸುವ ನಿರ್ಣಾಯಕ ಪಾತ್ರ ಮತದಾರರ ಮೇಲಿದೆ. ಮೌಲ್ಯಯುತವಾದ ಇಂತಹ ಹೊಣೆಗಾರಿಕೆಯನ್ನು ಪ್ರತಿಯೊಬ್ಬರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕು. ಮತದಾರರು ಯಾವುದೇ ಆಸೆ-ಆಮಿಷಗಳಿಗೆ ಬಲಿಯಾಗದೇ ನಿರ್ಭೀತರಾಗಿ ಮತವನ್ನು ಚಲಾಯಿಸಬೇಕು ಎಂದರು.ಪ್ಯಾರಾಸೈಯ್ಲಿಂಗ್ ಮೂಲಕ ಕಡಲ ತೀರದಲ್ಲಿದ್ದ ಸಾವಿರಾರು ಪ್ರವಾಸಿಗರ ಗಮನ ಸೆಳೆಯಲು ಆಯೋಜಿಸಲಾಗಿದ್ದ ಈ ವಿಭಿನ್ನ ವಿಶೇಷ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜೊತೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಎಸ್ಪಿ ಡಾ. ಅರುಣ್ ಕೆ., ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್. ಭಾಗವಹಿಸಿದ್ದರು.
ಕುಂದಾಪುರ ಉಪ ವಿಭಾಗಾಧಿಕಾರಿ ರಶ್ಮಿ ಎಸ್. ಅವರು ಮತದಾನ ಕುರಿತ ಪ್ರತಿಜ್ಞಾ ವಿಧಿ ಬೋಧಿಸಿದರು.ಫ್ಲೋಟಿಂಗ್ ಬ್ರಿಡ್ಜ್ ಮೇಲೆ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಿ, ಮತದಾನ ಮಾಡುವ ಕುರಿತು ಜಾಗೃತಿ ಘೋಷಣೆಗಳನ್ನು ಮೊಳಗಿಸುವ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.
ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಸಾರ್ವಜನಿಕರು ನೈತಿಕ ಮತದಾನ ಕುರಿತ ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು. ಸಾವಿರಾರು ಜನ ಪ್ರವಾಸಿಗರು ಅಭಿಯಾನದಲ್ಲಿ ಭಾಗವಹಿಸಿ, ಸಹಿ ಮಾಡಿದರು.ಬ್ರಹ್ಮಾವರ ಪಂಚಾಯಿತಿ ಸಿಬ್ಬಂದಿ ಗಣೇಶ್ ಹಾಗೂ ಶೇಖರ್ ರವರು ಮತದಾನ ಜಾಗೃತಿ ಯಕ್ಷಗಾನ ಪ್ರದರ್ಶಿಸಿದರು. ಬನ್ನಂಜೆಯ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳು ಹಾಗೂ ವೃತ್ತಿಪರ ನೃತ್ಯಗಾರರು ಮತದಾನ ಜಾಗೃತಿ ಕುರಿತು ವಿವಿಧ ನೃತ್ಯ ಪ್ರದರ್ಶನಗಳನ್ನು ಪ್ರದರ್ಶಿಸಿದರು.
ಕಾರ್ಯಕ್ರಮದಲ್ಲಿ ಜಿಪಂ ಉಪ ಕಾರ್ಯದರ್ಶಿ ರಾಧಾಕೃಷ್ಣ ಅಡಿಗ, ನಗರಸಭೆ ಪೌರಾಯುಕ್ತ ರಾಯಪ್ಪ, ಸಹಾಯಕ ಚುನಾವಣಾ ಅಧಿಕಾರಿ ಶಿವಪ್ರಸಾದ್ ಗಾಂವಕರ್, ಡಿಡಿಪಿಐ ಗಣಪತಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ದೇವರಾಜ್ ಮತ್ತು ಮೋಹನ್ ಕುಮಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.