ಕನ್ನಡಪ್ರಭ ವಾರ್ತೆ ಬೆಂಗಳೂರು
ಇದೇ 26 ರಂದು ರಾಜ್ಯದ ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಮತದಾನ ಮುಕ್ತಾಯಗೊಳ್ಳುವ 48 ಗಂಟೆಗಳ ಮುಂಚೆ ಬಹಿರಂಗ ಪ್ರಚಾರ ಅಂತ್ಯಗೊಳಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಬುಧವಾರ ಸಂಜೆ 6ಕ್ಕೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಆದರೆ ಅಭ್ಯರ್ಥಿಗಳು ಮಾತ್ರ ಮನೆ ಮನೆ ಪ್ರಚಾರ ಮಾಡಬಹುದಾಗಿದೆ. ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಮತದಾರರ ಮನವೊಲಿಕೆಗೆ ಅಂತಿಮ ಕಸರತ್ತು ನಡೆಸಲಿದ್ದಾರೆ.
ಮನೆ ಮನೆ ಪ್ರಚಾರಕ್ಕೆ ಹಲವು ಷರತ್ತು:ಮನೆ ಮನೆ ಮತಯಾಚನೆ ವೇಳೆ 10 ಜನಕ್ಕಿಂತ ಹೆಚ್ಚಿನ ಜನರು ಇರುವಂತಿಲ್ಲ. ಅಭ್ಯರ್ಥಿ ಅಥವಾ ಅಭ್ಯರ್ಥಿ ಪರವಾಗಿ ಏಜೆಂಟ್ ಮೂರು ವಾಹನಗಳ ಬಳಸುವುದಕ್ಕೆ ಮಾತ್ರ ಅವಕಾಶವಿದೆ. ಈ ಮೂರು ವಾಹನಗಳಿಗೆ ಕಡ್ಡಾಯವಾಗಿ ಅನುಮತಿಯನ್ನು ಮೊದಲೇ ಪಡೆದಿರಬೇಕು. ಒಂದು ವಾಹನದಲ್ಲಿ ವಾಹನ ಚಾಲಕರು ಸೇರಿದಂತೆ 4 ಜನರಿಗಿಂತ ಹೆಚ್ಚು ಜನರು ಇರುವಂತಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗವು ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಮೊದಲ ಹಂತದ ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ನ ವರಿಷ್ಠರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ತಮ್ಮ ತಮ್ಮ ಪಕ್ಷದ ಅಭ್ಯರ್ಥಿಗಳ ಬಿರುಸಿನ ಮತ ಪ್ರಚಾರ ಕೈಗೊಂಡರು.
ಬಹಿರಂಗ ಪ್ರಚಾರ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಎಲ್ಲಾ ಘಟಾನುಘಟಿ ನಾಯಕರು ಕ್ಷೇತ್ರದಿಂದ ಹೊರಗೆ ತೆರಳಿದ್ದಾರೆ. ಒಂದು ವೇಳೆ ಚುನಾವಣಾ ಸಿಬ್ಬಂದಿ ಕ್ಷೇತ್ರಕ್ಕೆ ಸಂಬಂಧಪಡದವರು ಕಂಡು ಬಂದರೆ ಸೂಕ್ತ ಕ್ರಮ ಜರುಗಿಸಲಿದ್ದಾರೆ. ಹೊಟೇಲ್, ಬಾರ್ ಆ್ಯಂಡ್ ರೆಸ್ಟೊರೆಂಟ್ ಸೇರಿದಂತೆ ಇತರೆ ತಂಗುದಾಣಗಳ ಸ್ಥಳಗಳ ಮೇಲೆ ನಿಗಾವಹಿಸಲಿದ್ದು, ತಪಾಸಣೆ ಕಾರ್ಯ ನಡೆಸಲಿದ್ದಾರೆ. ಅಭ್ಯರ್ಥಿಗಳು ಮನೆಮನೆಗೆ ತೆರಳಿ ಮತಯಾಚಿಸಿ ಮತದಾರರ ಮನವೊಲಿಕೆಗೆ ಪ್ರಯತ್ನಿಸಲಿದ್ದಾರೆ. ಅಲ್ಲದೇ, ಪೊಲೀಸರು, ಅಬಕಾರಿ ಇಲಾಖೆ ಅಧಿಕಾರಿಗಳು ಸೇರಿದಂತೆ ಇತರೆ ವಿವಿಧ ತನಿಖಾ ತಂಡದ ಅಧಿಕಾರಿಗಳು ಸಹ ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯದಲ್ಲಿ ತೊಡಗಲಿದ್ದಾರೆ.