ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ನಗರದ ಶ್ರೀ ಶಿವಶರಣ ಮಾದಾರ ಚೆನ್ನಯ್ಯ ಸಭಾ ಭವನದಲ್ಲಿ ಭಾನುವಾರ ಭಾರತ ಚುನಾವಣಾ ಆಯೋಗ ಹಾಗೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಸ್ವೀಪ್ ಸಮಿತಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮ ದೇಶದ ಆಡಳಿತ ಸುಭದ್ರವಾಗಿರಲು ಮತ್ತು ಉತ್ತಮ ಕಾನೂನುಗಳು ರೂಪಿತವಾಗಲು ಯೋಗ್ಯ ವ್ಯಕ್ತಿಗಳನ್ನು ಆರಿಸುವ ಜವಾಬ್ದಾರಿ ಮತದಾರರ ಮೇಲಿದೆ ಎಂದು ಹೇಳಿದರು.ಸಾಮಾನ್ಯವಾಗಿ ಮತದಾನದ ದಿನದಂದು ರಜೆ ಇರುತ್ತದೆ ಎಂಬ ಕಾರಣಕ್ಕೆ ಜನರು ಪ್ರವಾಸಕ್ಕೆ ಅಥವಾ ವೈಯಕ್ತಿಕ ಕೆಲಸಗಳಲ್ಲಿ ತೊಡಗಿಕೊಳ್ಳುತ್ತಾರೆ. ಇದು ಪ್ರಜಾಪ್ರಭುತ್ವದ ದೃಷ್ಟಿಯಿಂದ ಆರೋಗ್ಯಕರವಲ್ಲ. ಇತ್ತೀಚೆಗೆ ಬಿಹಾರದಲ್ಲಿ ನಡೆದ ಚುನಾವಣೆಯಲ್ಲಿ ಶೇ.65 ರಿಂದ ಶೇ.70ರಷ್ಟು ಮತದಾನವಾಗಿರುವುದು ಆಶಾದಾಯಕವಾದರೂ, ಉಳಿದ ಶೇ.30 ರಿಂದ ಶೇ.35 ರಷ್ಟು ಜನರು ಮತದಾನದಿಂದ ದೂರ ಉಳಿದಿರುವುದು ಕಳವಳಕಾರಿ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.
ನನ್ನ ಒಂದು ಮತದಿಂದ ಏನು ಬದಲಾವಣೆ ಸಾಧ್ಯ? ಎಂದು ಹಲವರು ಪ್ರಶ್ನಿಸುತ್ತಾರೆ. ಆದರೆ ಇತ್ತೀಚೆಗೆ ನಮ್ಮ ರಾಜ್ಯದಲ್ಲಿ ನಡೆದ ಚುನಾವಣೆಗಳಲ್ಲಿ ಅಭ್ಯರ್ಥಿಗಳು ಕೇವಲ ಒಂದು ಅಥವಾ ಎರಡು ಮತಗಳ ಅಂತರದಿಂದ ಗೆದ್ದಿರುವುದನ್ನು ನಾವು ಕಂಡಿದ್ದೇವೆ. ಹಾಗಾಗಿ ಪ್ರತಿ ಮತವೂ ಅಭ್ಯರ್ಥಿಯ ಭವಿಷ್ಯ ಮತ್ತು ದೇಶದ ಆಡಳಿತ ನಿರ್ಧರಿಸುವ ಶಕ್ತಿ ಹೊಂದಿದೆ ಎಂದು ತಿಳಿಸಿದ ಅವರು, ದೇಶದ ಅಭಿವೃದ್ಧಿಯಲ್ಲಿ ಯುವ ಜನತೆಯ ಪಾತ್ರ ನಿರ್ಣಾಯಕವಾಗಿದೆ. 18 ವರ್ಷದ ತುಂಬಿದ ಪ್ರತಿಯೊಬ್ಬರು ಮತದಾರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿಕೊಳ್ಳಬೇಕು ಮತ್ತು ತಮ್ಮ ಪೋಷಕರು ಹಾಗೂ ಹಿರಿಯರನ್ನು ಮತದಾನ ಮಾಡಲು ಪ್ರೇರೇಪಿಸಬೇಕು. ಮತದಾನದ ಹಕ್ಕು ಚಲಾಯಿಸದಿರುವುದು, ಬೇಜವಾಬ್ದಾರಿಯಿಂದ ವರ್ತಿಸುವುದು ದೇಶದ ಪ್ರಗತಿಗೆ ಮಾರಕ ಎಂದು ತಿಳಿಸಿದರು.ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿ, ಸದೃಢ ಭಾರತದ ನಿರ್ಮಾಣಕ್ಕಾಗಿ ಪ್ರತಿಯೊಬ್ಬ ಅರ್ಹ ಮತದಾರರೂ ಜವಾಬ್ದಾರಿಯಿಂದ ಮತ ಚಲಾಯಿಸಬೇಕು. ಯಾವುದೇ ಧರ್ಮ, ಜಾತಿ, ಹಣ ಅಥವಾ ಆಮಿಷಗಳಿಗೆ ಬಲಿಯಾಗದೇ ನೈತಿಕವಾಗಿ ಮತದಾನ ಮಾಡಬೇಕು. ನಿಮ್ಮ ಒಂದು ಮತ ದೇಶದ ಭವಿಷ್ಯವನ್ನು ಬದಲಿಸಬಲ್ಲದು ಎಂದು ಹೇಳಿದರು.
ಜಿಲ್ಲೆಯಲ್ಲಿ ಸುಮಾರು 14.43 ಲಕ್ಷ ಅರ್ಹ ಮತದಾರರಿದ್ದಾರೆ. ಕಳದೆ ಚುನಾವಣೆಯಲ್ಲಿ ಶೇ.72ರಷ್ಟು ಮಾತ್ರ ಮತದಾನವಾಗಿದೆ. ಸುಮಾರು 3.5 ಲಕ್ಷ ಮತದಾರರು ತಮ್ಮ ಹಕ್ಕನ್ನು ಚಲಾಯಿಸಿಲ್ಲ ಎಂದು ತಿಳಿಸಿದ ಅವರು, ಶೇ.100ರಷ್ಟು ಮತದಾನ ಗುರಿ ತಲುಪಲು ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು.ಜಿಪಂ ಸಿಇಒ ಡಾ.ಎಸ್.ಆಕಾಶ್ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅತಿದೊಡ್ಡ ಶಕ್ತಿಯೇ ಮತದಾನ. ಮತದಾನ ಎನ್ನುವುದು ಕೇವಲ ಹಕ್ಕಲ್ಲ. ಅದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ. ಯುವ ಮತದಾರರು ಯಾವುದೇ ಉದಾಸೀನತೆ ತೋರದೆ ಕಡ್ಡಾಯವಾಗಿ ಮತಗಟ್ಟೆಗೆ ಬಂದು ತಮ್ಮ ಹಕ್ಕನ್ನು ಚಲಾಯಿಸಬೇಕು ಎಂದರು.
ನನಗೆ ಮತದಾನದ ಹಕ್ಕು ಲಭಿಸಿದ ದಿನದಿಂದ ಈವರೆಗೆ ನಡೆದ ಯಾವುದೇ ಹಂತದ ಚುನಾವಣೆಯಲ್ಲೂ ನಾನು ಮತದಾನ ಮಾಡುವುದನ್ನು ಬಿಟ್ಟಿಲ್ಲ. ಕೆಲಸದ ನಿಮಿತ್ತ ಹೊರಗಿದ್ದ ಸಂದರ್ಭಗಳಲ್ಲಿಯೂ ಅಂಚೆ ಮತಪತ್ರದ ಸೌಲಭ್ಯ ಬಳಸಿ ನನ್ನ ಜವಾಬ್ದಾರಿ ನಿಭಾಯಿಸಿದ್ದೇನೆ ಎಂದು ತಿಳಿಸಿದ ಜಿಪಂ ಸಿಇಒ ಡಾ.ಆಕಾಶ್ ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ತಿಳಿಸಿದರು.ಉಪ ವಿಭಾಗಾಧಿಕಾರಿ ವೆಂಕಟೇಶ್ ನಾಯ್ಕ್ ಅವರು, ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು. ಮತದಾರ ದಿನಾಚರಣೆ ನಿಮಿತ್ತ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಕಾರ್ಯಕ್ರಮದಲ್ಲಿ ಪ್ರಮಾಣ ಪತ್ರ ಹಾಗೂ ಬಹುಮಾನ ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಸಾಂಕೇತಿಕವಾಗಿ ಹೊಸ ಮತದಾರರಿಗೆ ಭಾವಚಿತ್ರವಿರುವ ಗುರುತಿನ ಚೀಟಿ ವಿತರಿಸಲಾಯಿತು.
*ಮತದಾರ ಜಾಗೃತಿ ಜಾಥಾಕ್ಕೆ ಚಾಲನೆ: ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ನಗರದ ಒನಕೆ ಓಬವ್ವ ವೃತ್ತದಲ್ಲಿ ಮತದಾರ ಜಾಗೃತಿ ಜಾಥಾಕ್ಕೆ ಉಪವಿಭಾಗಾಧಿಕಾರಿ ವೆಂಕಟೇಶ್ ನಾಯ್ಕ್ ಹಾಗೂ ತಹಶೀಲ್ದಾರ್ ಬಿ.ಎಂ.ಗೋವಿಂದರಾಜ್ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.ಒನಕೆ ಓಬವ್ವ ವೃತ್ತದಿಂದ ಆರಂಭವಾದ ಜಾಗೃತಿ ಜಾಥಾವು ಅಂಬೇಡ್ಕರ್ ವೃತ್ತದ ಮೂಲಕ ನಗರದ ಶ್ರೀ ಶಿವಶರಣ ಮಾದಾರ ಚೆನ್ನಯ್ಯ ಸಭಾಭವನದವರೆಗೂ ನಡೆಯಿತು.
ಕಾರ್ಯಕ್ರಮದಲ್ಲಿ ಪೊಲೀಸ್ ಉಪಾಧೀಕ್ಷಕ ಪಿ.ಕೆ.ದಿನಕರ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್, ತಹಶೀಲ್ದಾರ್ ಬಿ.ಎಂ.ಗೋವಿಂದರಾಜ್, ಚುನಾವಣಾ ಶಿರಸ್ತೆದಾರ್ ಮಲ್ಲಿಕಾರ್ಜುನ ನಾಯಕ, ಶಾಲಾ ಶಿಕ್ಷಣ ಇಲಾಖೆಯ ಇಂಗ್ಲಿಷ್ ವಿಷಯ ಪರಿವೀಕ್ಷಕ ಎನ್.ರಾಘವೇಂದ್ರ, ಶಿಕ್ಷಕಿ ಕೆ.ಎಸ್.ಶಶಿಕಲಾ ಸೇರಿದಂತೆ ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು ಇದ್ದರು.ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಸನ್ಮಾನ:
16ನೇ ರಾಷ್ಟ್ರೀಯ ಮತದಾರರ ದಿನಾಚರಣೆ-2026ರ ಸಂಬಂಧ ಉತ್ತಮವಾಗಿ ಕಾರ್ಯನಿರ್ವಹಿಸಿದ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಸನ್ಮಾನಿಸಲಾಯಿತು. ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಯಾದಲಗಟ್ಟ ಗೊಲ್ಲರಹಟ್ಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಅಧಿಕಾರಿ ಟಿ.ರಾಜು, ಚಳ್ಳಕೆರೆ ಕ್ಷೇತ್ರದ ತುರುವನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಗಟ್ಟೆ ಅಧಿಕಾರಿ ಸಿ.ಎನ್.ರೂಪ, ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕಾಸವರಟ್ಟಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಅಧಿಕಾರಿ ಹೆಚ್.ಸುರೇಶ್ ರೆಡ್ಡಿ ಹಾಗೂ ಚಿತ್ರದುರ್ಗ ನಗರದ ಹೊಳಲ್ಕೆರೆ ರಸ್ತೆಯ ಹಳೇಸಂತೇಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಅಧಿಕಾರಿ ತಬಸ್ಸುಮ್ ಬಾನು, ಹಿರಿಯೂರು ಕ್ಷೇತ್ರದ ಆದಿವಾಲ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಅಧಿಕಾರಿ ಲಲಿತ, ಹೊಸದುರ್ಗ ಕ್ಷೇತ್ರದ ಹೊಸದುರ್ಗ ತಾಲೂಕು ಪಂಚಾಯಿತಿಯ ಮತಗಟ್ಟೆ ಅಧಿಕಾರಿ ಎನ್.ಬಿ.ಗೀತಾ, ಹೊಳಲ್ಕೆರೆ ಕ್ಷೇತ್ರದ ಗುಂಡಸಮುದ್ರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಅಧಿಕಾರಿ ಜಿ.ಎಸ್.ಪ್ರಶಾಂತ ಅವರನ್ನು ಸನ್ಮಾನಿಸಲಾಯಿತು.