ಶಿವಮೊಗ್ಗ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಿಂದ ಜೆಎನ್ಎನ್ ಎಂಜಿನಿಯರಿಂಗ್ ಕಾಲೇಜಿನ ಸಹಯೋಗದಲ್ಲಿ ಮಾ.15 ರಿಂದ 18 ರವರೆಗೆ ಕಾಲೇಜಿನ ಆವರಣದಲ್ಲಿ 26ನೇ ರಾಜ್ಯಮಟ್ಟದ ಅಂತರ ಮಹಾವಿದ್ಯಾಲಯಗಳ ಅಥ್ಲೆಟಿಕ್ಸ್ ಕ್ರೀಡಾಕೂಟ ''ಸದೃಢ-2.0'' ಏರ್ಪಡಿಸಲಾಗಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ತಿಳಿಸಿದರು.
ಮಾ.18 ರಂದು ಮಧ್ಯಾಹ್ನ 3 ಗಂಟೆಗೆ ನಡೆಯುವ ಸಮಾರೋಪದಲ್ಲಿ ವಿಟಿಯು ಮೌಲ್ಯಮಾಪನ ಕುಲಸಚಿವ ಡಾ.ಟಿ.ಎನ್.ಶ್ರೀನಿವಾಸ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದು, ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಿದ್ದಾರೆ ಎಂದರು.
ಪ್ರಾಂಶುಪಾಲ ಡಾ.ವೈ.ವಿಜಯಕುಮಾರ್ ಮಾತನಾಡಿ, ರಾಜ್ಯದ ವಿವಿಧ 150 ಎಂಜಿನಿಯರಿಂಗ್ ಕಾಲೇಜುಗಳ ಸುಮಾರು 2 ಸಾವಿರ ವಿದ್ಯಾರ್ಥಿಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ನಾಲ್ಕು ದಿನಗಳ ಈ ಕ್ರೀಡಾಕೂಟದಲ್ಲಿ ಸುಮಾರು 44 ವಿವಿಧ ಅಥ್ಲೆಟಿಕ್ಸ್ ಕ್ರೀಡೆಗಳು ನಡೆಯಲಿದೆ. ಇಡಿಎಂ ಸಾಫ್ಟವೇರ್ ಮೂಲಕ ಆಧುನಿಕ ತಂತ್ರಜ್ಞಾನಗಳನ್ನು ಬಳಸಿ ತೀರ್ಪು ನೀಡುವ ವ್ಯವಸ್ಥೆ ಮಾಡಲಾಗಿದೆ. ಕ್ರೀಡಾಪಟುಗಳಿಗೆ ಕಾಲೇಜಿನಲ್ಲಿಯೆ ವಸತಿ ವ್ಯವಸ್ಥೆ ಮಾಡಲಾಗಿದೆ ಎಂದು ವಿವರಿಸಿದರು.ಪತ್ರಿಕಾಗೋಷ್ಠಿಯಲ್ಲಿ ಎನ್ಇಎಸ್ ಕಾರ್ಯದರ್ಶಿ ಎಸ್.ಎನ್.ನಾಗರಾಜ, ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್, ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್, ಎಂಬಿಎ ವಿಭಾಗದ ಮುಖ್ಯಸ್ಥರಾದ ಡಾ.ಶ್ರೀಕಾಂತ್, ದೈಹಿಕ ಶಿಕ್ಷಣ ನಿರ್ದೇಶಕ ಚೇತನ್, ಎನ್ಇಎಸ್ ಪಿ.ಆರ್.ಓ ಸಿ.ಎಂ.ನೃಪತುಂಗ ಉಪಸ್ಥಿತರಿದ್ದರು.