ವಕ್ಫ್ ಆಸ್ತಿ ವಿವಾದ- ರೈತರಿಗೆ ನೋಟಿಸ್ ವಿರೋಧಿಸಿ ಪ್ರತಿಭಟನೆ

KannadaprabhaNewsNetwork | Published : Nov 5, 2024 12:52 AM

ಪ್ರಾಣ ಕೊಟ್ಟೆವು ಭೂಮಿ ಬಿಡೆವು, ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ, ಕರ್ನಾಟಕವನ್ನು ಪಾಕಿಸ್ತಾನ ಮಾಡಲು ಹೊರಟ ಸಿದ್ದರಾಮಯ್ಯಗೆ ಧಿಕ್ಕಾರ ಎಂದು ಘೋಷಣೆ

ಕನ್ನಡಪ್ರಭ ವಾರ್ತೆ ಮೈಸೂರುವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಸರ್ಕಾರ ರೈತರಿಗೆ ನೋಟಿಸ್ ನೀಡುತ್ತಿರುವುದನ್ನು ಖಂಡಿಸಿ ಬಿಜೆಪಿ ನಗರ ಮತ್ತು ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟಿಸಿದರು.ಮೈಮುಲ್ ಹಳೆಯ ಕಚೇರಿ ಬಳಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆಯಲ್ಲಿ ಸಾಗಿದ ನೂರಾರು ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಬಳಿ ಸಮಾವೇಶಗೊಂಡು ಪ್ರತಿಭಟಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವಕ್ಫ್‌ ಸಚಿವ ಜಮೀರ್ ಅಹಮದ್ ಗೆ ಧಿಕ್ಕಾರ, ಕಾಂಗ್ರೆಸ್ ತೊಲಗಲಿ, ರೈತರ ಜಮೀನು ಕಬಳಿಸಿದ ವಕ್ಫ್ ಗೂಂಡಾಗಿರಿಗೆ ಧಿಕ್ಕಾರ, ಕಾಂಗ್ರೆಸ್ ಲ್ಯಾಂಡ್ ಜಿಹಾದ್ ಗೆ ಧಿಕ್ಕಾರ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಪ್ರಾಣ ಕೊಟ್ಟೆವು ಭೂಮಿ ಬಿಡೆವು, ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ, ಕರ್ನಾಟಕವನ್ನು ಪಾಕಿಸ್ತಾನ ಮಾಡಲು ಹೊರಟ ಸಿದ್ದರಾಮಯ್ಯಗೆ ಧಿಕ್ಕಾರ ಎಂದು ಘೋಷಣೆ ಕೂಗಿದರು.ಸರ್ಕಾರವು ಒಂದು ಸಮುದಾಯವನ್ನು ಓಲೈಕೆ ಮಾಡುವ ಉದ್ದೇಶದಿಂದ ದೀನ- ದಲಿತರು, ಬಡವರ ಜಮೀನಿಗೆ ನೋಟಿಸ್ ನೀಡಿ ಅವರಿಂದ ಭೂಮಿ ಕಿತ್ತುಕೊಳ್ಳುತ್ತಿದೆ. ಹಲವು ದಶಕಗಳಿಂದ ಭೂ ಒಡೆತನ ಹೊಂದಿರುವ ರೈತರಿಗೆ ನೋಟಿಸ್ ನೀಡಿ ವಕ್ಫ್ ಆಸ್ತಿ ಎಂದು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದರು.ಸರ್ಕಾರದ ಈ ನಡೆಯನ್ನು ಬಿಜೆಪಿ ಉಗ್ರವಾಗಿ ಪ್ರತಿಭಟಿಸಿದ ಪರಿಣಾಮ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರಿಗೆ ನೀಡಿರುವ ನೋಟಿಸ್ ಹಿಂದಕ್ಕೆ ಪಡೆಯುವುದಾಗಿ ಹೇಳಿದ್ದಾರೆ. ಈ ಹೇಳಿಕೆ ಕೇವಲ ಬಾಯಿ ಮಾತನಲ್ಲಿ ಆಗದೇ, ಕೃತಿ ರೂಪದಲ್ಲಿ ಆಗಬೇಕು. ಆದಷ್ಟು ಬೇಗ ಸಂಬಂಧಿಸಿದ ಅಧಿಕಾರಿಗಳಿಗೆ ಸರ್ಕಾರದ ಆದೇಶದ ಮೂಲಕ ಸೂಚಿಸಬೇಕು ಎಂದು ಅವರು ಆಗ್ರಹಿಸಿದರು.ಈ ವೇಳೆ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯಾಧ್ಯಕ್ಷ ರಘು ಕೌಟಿಲ್ಯ ಮಾತನಾಡಿ, ತಲತಲಾಂತರದಿಂದ ಉಳುಮೆ ಮಾಡುವ ರೈತರ ಜಮೀನಿನ ಆರ್.ಟಿ.ಸಿಯಲ್ಲಿ ವಕ್ಫ್ ಹೆಸರು ನಮೂದಿಸಿ ರೈತರ ಬದುಕಿಗೆ ಕೊಳ್ಳಿ ಇಡಲಾಗುತ್ತಿದೆ. ರಾಜ್ಯದಲ್ಲಿ ಪಿತೂರಿ ನಡೆಯುತ್ತಿದ್ದು, ವಕ್ಫ್ ಎನ್ನುವ ಭೂತ ಬಿಟ್ಟು ರೈತರ ಜಮೀನು ಕಬಳಿಸಲಾಗುತ್ತಿದೆ ಎಂದು ದೂರಿದರು.ಇದನ್ನು ನೋಡಿದರೆ ಘಜನಿ ಮಹಮ್ಮದ್ ಘೋರಿ ನೆನಪಾಗುತ್ತಿದ್ದು, ರಾಜ್ಯದಲ್ಲಿ ಸುಲ್ತಾನರ ಸಂಸ್ಕೃತಿ ಶುರುವಾಗಿದೆ ಎಂದು ಅವರು ಕಿಡಿಕಾರಿದರು. ಕೂಡಲೇ ವಕ್ಫ್ ಎಂದು ನಮೂದು ಮಾಡಿರುವ ಎಲ್ಲಾ ನೋಟಿಸ್ ಹಿಂದಕ್ಕೆ ಪಡೆದು, ಸರ್ಕಾರದ ರಾಜ್ಯ ಪತ್ರದಲ್ಲಿ ವಾಪಸ್ ಪಡೆದಿದ್ದೇವೆ ಎಂದು ಪ್ರಕಟಿಸಬೇಕು. ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ಅಹಮದ್ ಖಾನ್ ಬೇಷರತ್ ಕ್ಷಮೆಯಾಚಿಸಬೇಕು ಎಂದು ಅವರು ಆಗ್ರಹಿಸಿದರು.ಪ್ರತಿಭಟನೆಯಲ್ಲಿ ಬಿಜೆಪಿ ನಗರಾಧ್ಯಕ್ಷ ಎಲ್. ನಾಗೇಂದ್ರ, ಜಿಲ್ಲಾಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ, ಮಾಜಿ ಅಧ್ಯಕ್ಷರಾದ ಹೇಮಂತಕುಮಾರ್ ಗೌಡ, ಮಂಗಳಾ ಸೋಮಶೇಖರ್, ಅಲ್ಪಸಂಖ್ಯಾತ ಮೋರ್ಚಾ ರಾಜ್ಯಾಧ್ಯಕ್ಷ ಡಾ. ಅನಿಲ್ ಥಾಮಸ್, ಮಾಜಿ ಮೇಯರ್ ಶಿವಕುಮಾರ್, ವಸ್ತು ಪ್ರದರ್ಶನ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಿರ್ಲೆ ಶ್ರೀನಿವಾಸ ಗೌಡ, ಪ್ರಧಾನ ಕಾರ್ಯದರ್ಶಿಗಳಾದ ಬಿ.ಎಂ. ರಘು, ಕೇಬಲ್ ಮಹೇಶ್, ನಗರ ಉಪಾಧ್ಯಕ್ಷ ಜೋಗಿ ಮಂಜು, ರಮೇಶ್, ಹೇಮಾ ನಂದೀಶ್ ಮತ್ತಿತರರು ಭಾಗವಹಿಸಿದ್ದರು.