ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಕಾವೇರಿ ನೀರಾವರಿ ನಿಗಮದ ಕಚೇರಿ ಬಳಿ ಸೇರಿದ ಕಾರ್ಯಕರ್ತರು ಕೆಆರ್ಎಸ್ ಅಚ್ಚುಕಟ್ಟು ಪ್ರದೇಶದ ನಾಲೆಗಳಿಗೆ ಕಟ್ಟು ಪದ್ಧತಿಯಲ್ಲಿ ನೀರು ಹರಿಸುವ ಅವೈಜ್ಞಾನಿಕ ಕ್ರಮವನ್ನು ಕೈಬಿಡಬೇಕು. ನೀರಿನ ಲಭ್ಯತೆ ಆಧರಿಸಿ ಅವಶ್ಯಕತೆ ಇದ್ದರೆ ಮಾತ್ರ ಬೇಸಿಗೆಯಲ್ಲಿ ಕಟ್ಟು ಪದ್ಧತಿ ನೀರು ಕೊಡಿ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕೆಆರ್ಎಸ್ ಅಚ್ಚುಕಟ್ಟು ಪ್ರದೇಶದ ರೈತರು ಮುಂಗಾರು ಬೆಳೆ ಬೆಳೆಯಲು ಜಲಾಶಯದಿಂದ ನಾಲೆಗಳಿಗೆ ನಿರಂತರ ನೀರು ಹರಿಸಬೇಕು. ಈ ಹಿಂದೆ ಕೆಆರ್ಎಸ್ ಅಣೆಕಟ್ಟೆ ತುಂಬಿದ ಸಂದರ್ಭದಲ್ಲಿ ನಾಲೆಗಳಲ್ಲಿ ನಿರಂತರ ನೀರು ಹರಿಯುವ ಪದ್ಥತಿ ವಾಡಿಕೆಯಾಗಿದೆ, ಆದರೆ ಜಿಲ್ಲಾ ಉಸ್ತುವಾರಿ ಸಚಿವ ಸೇರಿದಂತೆ ಶಾಸಕರು ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಹೇಳಿಕೆ ನೀಡಬೇಕು ಎಂದು ಆಗ್ರಹಿಸಿದರು.ನಮ್ಮ ರೈತರು ಕಳೆದ ಎರಡು ವರ್ಷದಿಂದ ಭೀಕರ ಬರ ಪರಿಸ್ಥಿತಿ ಎದುರಿಸಿದ ಪರಿಣಾಮ ಬೆಳೆ ಬೆಳೆಯಲು ಸಾಧ್ಯವಾಗಲಿಲ್ಲ. ಬರದಿಂದ ತತ್ತರಿಸಿದ್ದ ಜಿಲ್ಲೆಯ ಜನರಿಗೆ ಅಣೆಕಟ್ಟೆಯಲ್ಲಿ ನೀರು ಸಂಪೂರ್ಣ ಭರ್ತಿಯಾಗಿರುವುದು ಸಂತಸ ತಂದಿದೆ. ಜಲಾಶಯ ಭರ್ತಿಯಾಗಿದ್ದರೂ ಸಹ ಕಟ್ಟು ಪದ್ಧತಿಯಲ್ಲಿ ನೀರು ಹರಿಸಲು ಮುಂದಾಗಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಖ್ಯ ನಾಲೆಗಳಿಂದ ಉಪನಾಲೆಗಳಿಗೆ ನೀರು ಸಮರ್ಪಕವಾಗಿ ಹರಿಯದೆ ರೈತರ ಜಮೀನುಗಳಿಗೆ ನೀರು ತಲುಪಿಲ್ಲ. ನಾಲೆಗಳಲ್ಲಿ ತುಂಬಿರುವ ಹೂಳು, ಗಿಡ-ಗಂಟೆಗಳನ್ನು ಸ್ವಚ್ಛಗೊಳಿಸಬೇಕು. ಜಿಲ್ಲಾ ವ್ಯಾಪ್ತಿಯ ಸಕ್ಕರೆ ಕಾರ್ಖಾನೆಗಳಿಗೆ ನೀರಿನ ಕೊರತೆ ಉಂಟಾಗಿ ನಿರಂತರ ಕಬ್ಬು ಅರೆಯುವಿಕೆ ಸಾಧ್ಯವಾಗುತ್ತಿಲ್ಲ. ಹಾಗಾಗಿ ಕಾರ್ಖಾನೆಗಳಿಗೆ ನೀರು ಪೂರೈಸುವಂತೆ ಆಗ್ರಹಿಸಿದರು.
ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಇಂಡುವಾಳು ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿ ಎಸ್.ಮಂಜೇಶ್ಗೌಡ, ಮುಖಂಡರಾದ ಬೋರಲಿಂಗೇಗೌಡ, ವೆಂಕಟೇಶ್ ಪಣ್ಣೆದೊಡ್ಡಿ, ಸೋ.ಸಿ ಪ್ರಕಾಶ್, ಆರ್,ಕಾಂತಯ್ಯ, ಡಿ.ಎಸ್.ಚಂದ್ರಣ್ಣ, ಶಿವಲಿಂಗೇಗೌಡ, ಕಾಂತರಾಜು, ಪಿ.ಕೆ.ರಮೇಶ್, ಉಮೇಶ, ಸಿದ್ದರಾಜು, ಚನ್ನಪ್ಪ ಡಿ.ಎ.ಕೆರೆ, ಬಸವಯ್ಯ, ನಾಗರಾಜು, ಗಂಗಾಧರ, ಮರಿಯಪ್ಪ, ಮಹೇಂದ್ರ ಭಾಗವಹಿಸಿದ್ದರು.