ವಿಘ್ನೇಶ್ ಎಂ. ಭೂತನಕಾಡುಕನ್ನಡಪ್ರಭ ವಾರ್ತೆ ಮಡಿಕೇರಿ
ಕುಶಾಲನಗರ ತಾಲೂಕಿನ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾದಪಟ್ಟಣ, ಬಸವನಹಳ್ಳಿ, ಗುಡ್ಡೆಹೊಸೂರು ಭಾಗದಲ್ಲಿ ನೀರಿಗೆ ಹೆಚ್ಚಿನ ಸಮಸ್ಯೆ ಉಂಟಾಗಿದ್ದು, ಕುಡಿಯುವ ನೀರಿಗೆ ಗ್ರಾಮದ ಜನರು ಪರಿತಪಿಸುವಂತಾಗಿದೆ.
ಮಾದಪಟ್ಟಣದಲ್ಲಿ 420, ಬಸವನಹಳ್ಳಿ 35 ಮನೆಗಳಲ್ಲಿ ಕುಡಿಯುವ ನೀರಿಗೆ ಹೆಚ್ಚು ಸಮಸ್ಯೆಯಾಗಿದೆ. ಇಲ್ಲಿನ ನಿವಾಸಿಗಳಿಗೆ ಕಾವೇರಿ ನದಿಯಿಂದ ಮೋಟಾರ್ ಪಂಪ್ ಸೆಟ್ಗಳ ಮೂಲಕ ನೀರನ್ನು ತೆಗೆದು ಸಂಸ್ಕರಣಾ ಘಟಕದ ಮೂಲಕ ಸಂಸ್ಕರಿಸಿ ನೀರನ್ನು ಗ್ರಾಮಸ್ಥರಿಗೆ ಸರಬರಾಜು ಮಾಡಲಾಗುತ್ತಿತ್ತು. ಆದರೆ ನೀರಿನ ಪ್ರಮಾಣ ಗಣನೀಯವಾಗಿ ಇಳಿಮುಖವಾದ ಹಿನ್ನೆಲೆಯಲ್ಲಿ ನೀರು ಇಲ್ಲದೆ ಜನರು ಸಂಕಷ್ಟಕ್ಕೀಡಾಗಿದ್ದಾರೆ.ನೀರು ಕಡಿಮೆಯಾದ ಹಿನ್ನೆಲೆಯಲ್ಲಿ ಮರಳಿನ ಮೂಟೆಯನ್ನು ನದಿಗೆ ಅಡ್ಡಲಾಗಿ ಹಾಕಿ ನೀರನ್ನು ತಡೆಹಿಡಿಯಲಾಗಿತ್ತಾದರೂ ಸದ್ಯ ನೀರು ಸಂಪೂರ್ಣ ಖಾಲಿಯಾಗಿದೆ. ಇದರಿಂದ ಮೋಟಾರ್ ಪಂಪ್ ಸೆಟ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿಯಿಂದ ಟ್ಯಾಂಕರ್ ಮೂಲಕ ನೀರನ್ನು ಗ್ರಾಮಸ್ಥರಿಗೆ ನೀಡುವ ಕೆಲಸ ಮಾಡಲಾಗುತ್ತಿದೆ.
* ಮಳೆ ಬಂದರೆ ಸಮಸ್ಯೆ ಪರಿಹಾರ: ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಪರಿಹಾರ ಆಗಬೇಕಾದರೆ ಆದಷ್ಟು ಬೇಗ ಮಳೆ ಅತ್ಯವಶ್ಯವಾಗಿದೆ. ಮಳೆ ಸುರಿದರೆ ಮಾತ್ರ ನೀರನ್ನು ಪಂಪ್ ಸೆಟ್ ಮೂಲಕ ತೆಗೆದು ಸಂಸ್ಕರಣೆ ಮಾಡಿ ಗ್ರಾಮಸ್ಥರಿಗೆ ವಿತರಿಸಲು ಅನುಕೂಲ ಆಗುತ್ತದೆ. ಈ ಭಾಗದಲ್ಲಿ ಕೃಷಿ ಚಟುವಟಿಕೆಗೂ ಕೂಡ ನೀರಿನ ಅಭಾವ ತೀರಾ ಕಾಡುತ್ತಿದೆ. ಕಾಫಿ, ಕಾಳು ಮೆಣಸು, ಶುಂಠಿ ಸೇರಿದಂತೆ ವಿವಿಧ ಕೃಷಿಗೆ ತೊಂದರೆಯಾಗಿದೆ. ಬೋರ್ವೆಲ್ಗಳಲ್ಲಿ ಅಂತರ್ಜಲಮಟ್ಟ ಕುಸಿದ ಪರಿಣಾಮ ನೀರಿಲ್ಲದೆ ಕೃಷಿ ಬೆಳೆಗಳು ಒಣಗುವಂತಹ ಪರಿಸ್ಥಿತಿ ಉಂಟಾಗಿದೆ. ಆದ್ದರಿಂದ ಈ ಭಾಗದ ಗ್ರಾಮಸ್ಥರು ವರುಣನಿಗಾಗಿ ಎದುರು ನೋಡುತ್ತಿದ್ದಾರೆ.------
। ಸುಮೇಶ್, ಪಿಡಿಒ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ