ಕೃಷಿ, ಜನಜಾನುವಾರುಗಳಿಗೆ ಮಾತ್ರ ನೀರು ಬಿಡುಗಡೆ

KannadaprabhaNewsNetwork |  
Published : Aug 17, 2026, 03:15 AM IST
ಚಂದರಗಿಯಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಸಚಿವ ಸತೀಶ ಜಾರಕಿಹೋಳಿ ಮಾತನಾಡಿದರು. | Kannada Prabha

ಸಾರಾಂಶ

ಮಲಪ್ರಭಾ ಜಲಾಶಯದಲ್ಲಿ ಲಭ್ಯವಿರುವ ನೀರಿನ ಪ್ರಮಾಣವನ್ನು ಗಮನದಲ್ಲಿಟ್ಟುಕೊಂಡು ರೈತರ ಕೃಷಿ ಚಟುವಟಿಕೆಗಳಿಗೆ ಹಾಗೂ ಜನ-ಜಾನುವಾರುಗಳ ಕುಡಿಯುವ ನೀರಿನ ಅಗತ್ಯವನ್ನು ಪೂರೈಸುವ ನಿಟ್ಟಿನಲ್ಲಿ ಸಮರ್ಪಕವಾಗಿ ನೀರು ಬಿಡುಗಡೆ ಮಾಡಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಕನ್ನಡಪ್ರಭ ವಾರ್ತೆ ರಾಮದುರ್ಗ

ಮಲಪ್ರಭಾ ಜಲಾಶಯದಲ್ಲಿ ಲಭ್ಯವಿರುವ ನೀರಿನ ಪ್ರಮಾಣವನ್ನು ಗಮನದಲ್ಲಿಟ್ಟುಕೊಂಡು ರೈತರ ಕೃಷಿ ಚಟುವಟಿಕೆಗಳಿಗೆ ಹಾಗೂ ಜನ-ಜಾನುವಾರುಗಳ ಕುಡಿಯುವ ನೀರಿನ ಅಗತ್ಯವನ್ನು ಪೂರೈಸುವ ನಿಟ್ಟಿನಲ್ಲಿ ಸಮರ್ಪಕವಾಗಿ ನೀರು ಬಿಡುಗಡೆ ಮಾಡಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ತಾಲೂಕಿನ ಚಂದರಗಿ ಕ್ರೀಡಾ ಶಾಲೆಯ ಸಭಾಂಗಣದಲ್ಲಿ ಭಾನುವಾರ ನಡೆದ ಮಲಪ್ರಭಾ ಯೋಜನೆ 2026-27ನೇ ಸಾಲಿನ ನೀರಾವರಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ನೀರಿನ ಲಭ್ಯತೆ, ಜಲಾಶಯದ ನೀರಿನ ಸಂಗ್ರಹ ಮಟ್ಟ ಹಾಗೂ ಹವಾಮಾನ ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸಬೇಕು. ಮಳೆಯ ಪ್ರಮಾಣದಲ್ಲಿ ಏರಿಳಿತ ಉಂಟಾದಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ನೀರು ಬಿಡುಗಡೆ ಕುರಿತು ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.ರೈತರು ಲಭ್ಯವಿರುವ ನೀರನ್ನು ಮಿತವಾಗಿ ಹಾಗೂ ವೈಜ್ಞಾನಿಕವಾಗಿ ಬಳಸಿಕೊಂಡು ನೀರಿನ ಸಂರಕ್ಷಣೆಗೆ ಸಹಕರಿಸಬೇಕು. ಮಳೆ ಕೊರತೆಯಾದಲ್ಲಿ ನೀರಿನ ಸಮರ್ಪಕ ಬಳಕೆ, ಪರ್ಯಾಯ ನೀರಿನ ಮೂಲಗಳ ಸದ್ಬಳಕೆ ಹಾಗೂ ಅಗತ್ಯವಿರುವ ಪ್ರದೇಶಗಳಿಗೆ ಆದ್ಯತೆ ಮೇರೆಗೆ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.ರೈತ ಮುಖಂಡ ಶಿವಾನಂದ ಮೇಟಿ ಮಾತನಾಡಿ, ರೈತರ ಕೃಷಿಗೆ ಮತ್ತು ಕುಡಿಯುವ ನೀರಿಗಾಗಿ ಆಣೆಕಟ್ಟು ನಿರ್ಮಾಣ ಮಾಡಿದೆ ಮೊದಲು ಕೃಷಿ ಮತ್ತು ಕುಡಿಯುವ ನೀರು ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ನಂತರ ಕೈಗಾರಿಕಾ ಪ್ರದೇಶಕ್ಕೆ ನೀರು ಬಿಡುಗಡೆಗೆಮುಂದಾಗಬೇಕೆಂದು ಹೇಳಿದರಲ್ಲದೆ ಇನ್ನಷ್ಟು ಹೊಸ ನೀರಾವರಿ ಯೋಜನೆಗಳನ್ನು ಜಾರಿಗೆ ತಂದು ರೈತರ ಕೃಷಿ ಚಟುವಟಿಗೆಗಳಿಗೆ ಸಹಕಾರ ನೀಡಬೇಕು ಎಂದು ವಿನಂತಿಸಿದರು. ಕರ್ನಾಟಕ ರೈತ ಸೇನೆಯ ರಾಜ್ಯಾಧ್ಯಕ್ಷ ಶಂಕರ ಅಂಬಲಿ ಹನಿ ನೀರಾವರಿ ಯೋಜನೆಯಡಿ ರೈತರಿಗೆ ಅನುಕೂಲ ಮಾಡಿಕೊಡಬೇಕು. ನೈಸರ್ಗಿಕವಾಗಿ ಕೆರೆಗಳನ್ನು ತುಂಬುವ ಕೆಲಸಕ್ಕೆ ಸಂಬಂಧಿಸಿದ ಇಲಾಖೆ ಮಾಡಬೇಕು. ಈ ವರ್ಷ ವಾಡಿಕೆಯಷ್ಟು ಮಳೆಯಾಗದೆ ಇರುವ ಕಾರಣ ಕೃಷಿಗೆ ನೀರು ಮತ್ತು ಸಮರ್ಪಕವಾಗಿ ಕುಡಿಯುವ ನೀರು ಪೂರೈಸಿ ರೈತಾಪಿ ವರ್ಗದ ಕೈ ಹಿಡಿಯಬೇಕು ಎಂದು ಮನವಿ ಮಾಡಿಕೊಂಡರು. ಸರ್ಕಾರದ ಮುಖ್ಯ ಸಚೇತಕರಾದ ಅಶೋಕ ಪಟ್ಟಣ, ಸವದತ್ತಿ ಶಾಸಕ ವಿಶ್ವಾಸ ವೈದ್ಯ, ನವಲಗುಂದ ಶಾಸಕ ಎಚ್.ಎಸ್.ಕೋನರೆಡ್ಡಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ರಾಹುಲ್ ಶಿಂಧೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಲಹಾ ಸಮಿತಿ ಸದಸ್ಯರು ಸಭೆಯಲ್ಲಿ ಉಪಸ್ಥಿತಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಭಿವೃದ್ಧಿ ಫಲ ಕಡೆಯ ವ್ಯಕ್ತಿಗೂ ಸಿಗಲಿ: ಪ್ರೊ.ವಿಜಯಾ
ರೈತರ ಸಂಕಷ್ಟಕ್ಕೆ ಸಹಕಾರಿ ಬ್ಯಾಂಕ್‌ಗಳೇ ವರದಾನ