ತಾಲೂಕುಮಟ್ಟದ ಗ್ಯಾರಂಟಿ ಯೋಜನೆಗಳ ಸಮಾವೇಶ
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿಯ ಎಲ್ಲ ಐದೂ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದ್ದು, ನುಡಿದಂತೆ ನಡೆದಿದ್ದೇವೆ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಪಂ ಇವರ ಸಂಯುಕ್ತಾಶ್ರಯದಲ್ಲಿ ಇಲ್ಲಿನ ಹಳೆಯ ಬಸ್ ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ ಗ್ಯಾರಂಟಿ ಯೋಜನೆಗಳ ತಾಲೂಕು ಮಟ್ಟದ ಸಮಾವೇಶದಲ್ಲಿ ಸಚಿವರು ಮಾತನಾಡಿ, ಆರ್ಥಿಕವಾಗಿ, ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಎಲ್ಲ ಕುಟುಂಬಗಳೂ ಅಭಿವೃದ್ಧಿಯಾಗುವ ದೃಷ್ಟಿಯಿಂದ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ. ಪ್ರತಿ ಕುಟುಂಬದವರೂ ಈ ಯೋಜನೆಯ ಸೌಲಭ್ಯ ದೊರೆಯಬೇಕು, ಯೋಜನೆಯ ಸೌಲಭ್ಯ ಸಿಗದವರು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳನ್ನು ಸಂಪರ್ಕಿಸಿ ನೋಂದಾಯಿಸಿಕೊಳ್ಳಿ, ಮುಂದಿನ ದಿನಗಳಲ್ಲಿ ಹಲವು ಯೋಜನೆಗಳನ್ನು ಜಾರಿಗೆ ತರಲಿದ್ದೇವೆ ಎಂದು ಸಚಿವರು ತಿಳಿಸಿದರು.ದೇವನಹಳ್ಳಿ ತಾಲೂಕಿನಲ್ಲಿ ಐದು ಯೋಜನೆಗಳನ್ನು ಜಾರಿಗೆ ತರಲು ಸುಮಾರು 82 ಕೋಟಿ ರು. ವೆಚ್ಚ ಮಾಡಲಾಗಿದೆ ಎಂದು ಸಚಿವರು ಯೋಜನೆಗಳ ಅಂಕಿ ಅಂಶವನ್ನು ತಿಳಿಸಿದರು.
------ಹಳೆಯ ಬಸ್ ನಿಲ್ದಾಣದ ಬಳಿ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಸಮಾರಂಭದ ಉದ್ಘಾಟಿಸಿದ ಸಚಿವ ಕೆ. ಎಚ್. ಮುನಿಯಪ್ಪ. ಸಿ. ಜಗನ್ನಾಥ್, ಕೆ.ಸಿ. ಮಂಜುನಾಥ್ ಇದ್ದಾರೆ.