ನಿಗಮ-ಮಂಡಳಿಗೆ ಶಾಸಕರ ಪಟ್ಟಿ ಸಿದ್ಧ: ಸಿಎಂ ಸಿದ್ದರಾಮಯ್ಯ

KannadaprabhaNewsNetwork |  
Published : Jan 24, 2024, 02:02 AM ISTUpdated : Jan 24, 2024, 01:36 PM IST
ಸಿಎಂ ಡಿಸಿಎಂ | Kannada Prabha

ಸಾರಾಂಶ

ನಿಗಮ-ಮಂಡಳಿಗಳ ಅಧ್ಯಕ್ಷ ಹುದ್ದೆಗೆ ತಯಾರಿಸಿದ ಶಾಸಕರ ಪಟ್ಟಿ ಸಿದ್ಧವಿದೆ. ಕಾರ್ಯಕರ್ತರ ಪಟ್ಟಿ ಬಗ್ಗೆ ನಾನು ಹಾಗೂ ಕೆಪಿಸಿಸಿ ಅಧ್ಯಕ್ಷರು ಚರ್ಚೆ ನಡೆಸಿ ಹೈಕಮಾಂಡ್‌ಗೆ ಕಳುಹಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ನಿಗಮ-ಮಂಡಳಿಗಳ ಅಧ್ಯಕ್ಷ ಹುದ್ದೆಗೆ ತಯಾರಿಸಿದ ಶಾಸಕರ ಪಟ್ಟಿ ಸಿದ್ಧವಿದೆ. ಕಾರ್ಯಕರ್ತರ ಪಟ್ಟಿ ಬಗ್ಗೆ ನಾನು ಹಾಗೂ ಕೆಪಿಸಿಸಿ ಅಧ್ಯಕ್ಷರು ಚರ್ಚೆ ನಡೆಸಿ ಹೈಕಮಾಂಡ್‌ಗೆ ಕಳುಹಿಸಿದ್ದೇವೆ. 

ಅಂತಿಮ ಪಟ್ಟಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಅಂಕಿತ ಒಂದೇ ಬಾಕಿ ಇದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸೌಧದ ಆವರಣದಲ್ಲಿರುವ ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಅವರ ಜನ್ಮದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಶಾಸಕರ ನೇಮಕಾತಿ ಪಟ್ಟಿ ಪೂರ್ಣಗೊಂಡಿದೆ. ಆದರೆ ಪಕ್ಷದ ಕಾರ್ಯಕರ್ತರಿಗೂ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವ ಬಗ್ಗೆ ಗೊಂದಲವಿತ್ತು. 

ಈ ವಿಚಾರದ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಜೊತೆ ಚರ್ಚಿಸಿ ಅಂತಿಮ ಪಟ್ಟಿಯನ್ನು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಅವರಿಗೆ ಕಳುಹಿಸಿದ್ದೇವೆ. ಈ ಅಂತಿಮ ಪಟ್ಟಿಗೆ ಕೆ.ಸಿ. ವೇಣುಗೋಪಾಲ್‌ ಅಂಕಿತ ಹಾಕಬೇಕಿದೆ. ಬಳಿಕ ಹೈಕಮಾಂಡ್‌ ಪಟ್ಟಿ ಬಿಡುಗಡೆ ಮಾಡಬೇಕಿದೆ’ ಎಂದು ತಿಳಿಸಿದರು.

ನಮ್ಮ ಅನಿಸಿಕೆಯನ್ನೇ ಯಾರೂ ಕೇಳಿಲ್ಲ: ಗೃಹ ಸಚಿವ ಪರಂ ಅತೃಪ್ತಿ
ಬೆಂಗಳೂರು: ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ವಿಚಾರ ಕಾಂಗ್ರೆಸ್‌ನಲ್ಲಿ ದಿನಕ್ಕೊಂದು ಹೊಸ ಅವಾಂತರ ಸೃಷ್ಟಿಸುತ್ತಿದ್ದು, ಇದೀಗ ಈ ನೇಮಕಾತಿ ವಿಚಾರದಲ್ಲಿ ನಮ್ಮ ಅಭಿಪ್ರಾಯವನ್ನೇ ಕೇಳಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಳೆದ ಮೂರು ತಿಂಗಳಿನಿಂದ ನಿಗಮ ಮಂಡಳಿ ನೇಮಕಾತಿ ಪ್ರಕ್ರಿಯೆ ನಡೆದಿದ್ದರೂ ಈ ಬಗ್ಗೆ ಚಕಾರವೆತ್ತದ ಪರಮೇಶ್ವರ್‌ ಅವರು ಇನ್ನೇನೂ ಪಟ್ಟಿ ಅಂತಿಮಗೊಳ್ಳುತ್ತಿದೆ ಎನ್ನುವಾಗ ಅಪಸ್ವರ ಎತ್ತಿರುವುದು ಏಕೆ ಎಂಬ ಬಗ್ಗೆಯೂ ಕಾಂಗ್ರೆಸ್‌ ವಲಯದಲ್ಲಿ ಚರ್ಚೆ ಆರಂಭವಾಗಿದೆ.

ಎಲ್ಲರಿಂದ ಅಭಿಪ್ರಾಯ ಪಡೆಯಲಾಗಲ್ಲ: ಸಿಎಂ
ಪರಮೇಶ್ವರ್‌ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನೇಮಕಾತಿ ವಿಚಾರದಲ್ಲಿ ಎಲ್ಲರ ಅಭಿಪ್ರಾಯ ಪಡೆಯಲು ಆಗುವುದಿಲ್ಲ. ಈ ಬಗ್ಗೆ ಪರಮೇಶ್ವರ್‌ ಅವರೊಂದಿಗೆ ಮಾತನಾಡುತ್ತೇನೆ ಎಂದಿದ್ದಾರೆ.

ಎಲ್ಲರಿಂದ ಅಭಿಪ್ರಾಯ ಪಡೆದಿದ್ದೇವೆ: ಡಿಕೆಶಿ
ನಿಗಮ-ಮಂಡಳಿಗೆ ನೇಮಕಾತಿ ಮಾಡುವ ಬಗ್ಗೆ ಎಲ್ಲರ ಅಭಿಪ್ರಾಯ ಪಡೆದು, ಮಾರ್ಗಸೂಚಿ ನಿಗದಿ ಮಾಡಲಾಗಿದೆ. ಅದರಂತೆ ಎಲ್ಲರಿಗೂ ಅಧಿಕಾರ ಹಂಚಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೂಪಾ ಮೌದ್ಗಿಲ್‌ ಮಾನಹಾನಿ ಕೇಸ್‌: ರೋಹಿಣಿ ಅರ್ಜಿ ವಜಾ
ವಿರೋಧದ ನಡುವೆ ಮದುವೆ : ಸಿಟ್ಟಲ್ಲಿ ಅಳಿಯನ ಮನೆಗೆ ಮಾವನಿಂದ ಬೆಂಕಿ!