ಕನ್ನಡ ಭಾಷೆ ಉಳಿಸುವ ಸಲುವಾಗಿ ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ

KannadaprabhaNewsNetwork |  
Published : Mar 20, 2025, 01:20 AM IST
19ಎಚ್ಎಸ್ಎನ್18 : | Kannada Prabha

ಸಾರಾಂಶ

ಹಿಂದಿಯ ವಿರುದ್ಧದ ಹೋರಾಟದಲ್ಲಿ ಇಂಗ್ಲಿಷ್ ಭಾಷೆಯಿಂದ ದೇಶದ ಭಾಷೆಗಳಿಗೆ ಆಗುತ್ತಿರುವ ಹಾನಿಯ ಬಗ್ಗೆ ನಾವು ಎಚ್ಚರ ತಪ್ಪಬಾರದು. ಮಾತೃಭಾಷೆಯಲ್ಲಿ ಉನ್ನತ ಶಿಕ್ಷಣವನ್ನು ಕಡ್ಡಾಯ ಮಾಡಿ, ಕನ್ನಡ ಭಾಷೆ ಉಳಿವಿಗಾಗಿ ಗಂಭೀರವಾದ ಚಿಂತನೆ ಅಗತ್ಯವಿದ್ದು, ಇಲ್ಲವಾದರೆ ತಮಿಳುನಾಡಿಗೆ ಆದ ಗತಿ ಕರ್ನಾಟಕಕ್ಕೆ ಬರಬಹುದು. ಈ ಸವಾಲನ್ನು ಸ್ವೀಕಾರ ಮಾಡೋಣ ಎಂದು ಸಾಮಾಜಿಕ ಹೋರಾಟಗಾರ ಆರ್‌.ಪಿ. ವೆಂಕಟೇಶ್ ಮೂರ್ತಿ ಎಚ್ಚರಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ಹಿಂದಿಯ ವಿರುದ್ಧದ ಹೋರಾಟದಲ್ಲಿ ಇಂಗ್ಲಿಷ್ ಭಾಷೆಯಿಂದ ದೇಶದ ಭಾಷೆಗಳಿಗೆ ಆಗುತ್ತಿರುವ ಹಾನಿಯ ಬಗ್ಗೆ ನಾವು ಎಚ್ಚರ ತಪ್ಪಬಾರದು. ಮಾತೃಭಾಷೆಯಲ್ಲಿ ಉನ್ನತ ಶಿಕ್ಷಣವನ್ನು ಕಡ್ಡಾಯ ಮಾಡಿ, ಕನ್ನಡ ಭಾಷೆ ಉಳಿವಿಗಾಗಿ ಗಂಭೀರವಾದ ಚಿಂತನೆ ಅಗತ್ಯವಿದ್ದು, ಇಲ್ಲವಾದರೆ ತಮಿಳುನಾಡಿಗೆ ಆದ ಗತಿ ಕರ್ನಾಟಕಕ್ಕೆ ಬರಬಹುದು. ಈ ಸವಾಲನ್ನು ಸ್ವೀಕಾರ ಮಾಡೋಣ ಎಂದು ಸಾಮಾಜಿಕ ಹೋರಾಟಗಾರ ಆರ್‌.ಪಿ. ವೆಂಕಟೇಶ್ ಮೂರ್ತಿ ಎಚ್ಚರಿಸಿದರು. ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿ, ತಮಿಳುನಾಡು ಸರ್ಕಾರಕ್ಕೆ ತಾಕತ್ತಿದ್ದರೆ ವೈದ್ಯಕೀಯ ಹಾಗೂ ಎಂಜಿನಿಯರಿಂಗ್ ವಿದ್ಯಾಭ್ಯಾಸವನ್ನು ತಮಿಳು ಮಾಧ್ಯಮದಲ್ಲಿ ಮಾಡಿಸಲಿ ಎಂದು ಕೇಂದ್ರದ ಗೃಹ ಸಚಿವ ಅಮಿತ್ ಶಾ ಸವಾಲು ಹಾಕಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿಯ ಕೆಲವು ಅಂಶಗಳ ವಿರುದ್ಧ ಹಾಗೂ ತ್ರಿಭಾಷಾ ನೀತಿಯ ವಿರುದ್ಧ ಧ್ವನಿ ಎತ್ತಿರುವ ತಮಿಳುನಾಡು ಸರ್ಕಾರಕ್ಕೆ ಹಾಕಿರುವ ಈ ಸವಾಲನ್ನು ಎಲ್ಲ ಹಿಂದಿಯೇತರ ಭಾಷಿಕರೂ ಸ್ವೀಕರಿಸಲೇಬೇಕು. ದ್ವಿಭಾಷಾ ನೀತಿಯ ಪರವಾಗಿ ಕರ್ನಾಟಕದಲ್ಲಿ ಕೂಡ ಸಾಕಷ್ಟು ಚರ್ಚೆ ಆರಂಭವಾಗಿದ್ದು, ಹಿಂದಿಯ ವಿರುದ್ಧದ ಹೋರಾಟದಲ್ಲಿ ಇಂಗ್ಲಿಷ್ ಭಾಷೆಯಿಂದ ದೇಶದ ಭಾಷೆಗಳಿಗೆ ಆಗುತ್ತಿರುವ ಹಾನಿಯ ಬಗ್ಗೆ ನಾವು ಎಚ್ಚರ ತಪ್ಪಬಾರದು ಎಂದರು.

ಕನಿಷ್ಠ ಪ್ರಾಥಮಿಕ ಶಿಕ್ಷಣವಾದರೂ ಮಾತೃ ಭಾಷೆ ಅಥವಾ ಪ್ರಾದೇಶಿಕ ಭಾಷೆಯಲ್ಲಿ ಆಗಬೇಕೆಂದು ಎಷ್ಟೇ ಹೋರಾಟಗಳು ನಡೆದರೂ, ಸಾಹಿತ್ಯ ಸಮ್ಮೇಳನಗಳಲ್ಲಿ ನಿರ್ಣಯಗಳು ಆಗುತ್ತಿದ್ದರೂ, ಇಂಗ್ಲಿಷ್ ಮಾಧ್ಯಮದ ಪ್ರವಾಹದಲ್ಲಿ ದೇಶದ ಭಾಷೆಗಳು ಕೊಚ್ಚಿ ಹೋಗುತ್ತಿರುವುದನ್ನು ಕಂಡು ನಾವೆಲ್ಲ ಅಸಹಾಯಕರಾಗಿ ನೋಡುತ್ತಾ ನಿಲ್ಲುವ ಪರಿಸ್ಥಿತಿ ಬಂದಿದೆ. ಪರಿಸ್ಥಿತಿ ಹೀಗೇ ಮುಂದುವರಿದರೆ ತನ್ನ ಮಗುವನ್ನು ಕೆಲವೇ ವರ್ಷಗಳಲ್ಲಿ ಕನ್ನಡ ಮಾಧ್ಯಮ ಶಾಲೆಗಳಿಗೆ ಸೇರಿಸುವ ಒಬ್ಬನೇ ಪೋಷಕ ಕೂಡ ಸಿಗಲಾರ. ಕನ್ನಡ ಮಾಧ್ಯಮದ ಪರವಾಗಿ ಹೋರಾಟ ಇರಬೇಕು. ಮಾತನಾಡುವವರನ್ನು ಕೂಡ ಅಪಹಾಸ್ಯ ಮಾಡುವ ಸ್ಥಿತಿ ಈಗಾಗಲೇ ನಿರ್ಮಾಣ ಆಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ವೈದ್ಯಕೀಯ ಹಾಗೂ ಎಂಜಿನಿಯರಿಂಗ್ ಮಾತ್ರವಲ್ಲದೆ, ಕೃಷಿ, ತೋಟಗಾರಿಕೆ, ಪಶು ವೈದ್ಯಕೀಯ, ಕಾನೂನು, ವಾಣಿಜ್ಯಶಾಸ್ತ್ರ ಹೀಗೆ ಬಹುತೇಕ ಎಲ್ಲ ಉನ್ನತ ವ್ಯಾಸಂಗ ವ್ಯವಸ್ಥೆ ಇಂಗ್ಲಿಷ್ ನಲ್ಲಿ ಇರುವುದರಿಂದ, ಸಹಜವಾಗಿ ಪೋಷಕರು ಭವಿಷ್ಯದಲ್ಲಿ ತಮ್ಮ ಮಕ್ಕಳು ಕಷ್ಟಕ್ಕೆ ಸಿಲುಕಬಾರದೆಂದು ಪ್ರಾಥಮಿಕ ಹಂತದಲ್ಲಿಯೇ ಇಂಗ್ಲಿಷ್ ಮಾಧ್ಯಮದ ಶಾಲೆಗಳಿಗೆ ಸೇರಿಸುವ ನಿರ್ಧಾರಕ್ಕೆ ಬರುವುದು ತಪ್ಪೆಂದು ಹೇಳಲು ಸಾಧ್ಯವೇ ಇಲ್ಲ. ಇಂತಹ ಸನ್ನಿವೇಶದಲ್ಲಿ ಪ್ರಾಥಮಿಕ ಹಂತದಲ್ಲಿ ಕನ್ನಡ ಮಾಧ್ಯಮ ಇರಬೇಕೆಂದು ಹೇಳುವುದು ಕೇವಲ ಭಾವನಾತ್ಮಕ ಸಂಗತಿ ಆಗುತ್ತದೆಯೇ ಹೊರತು ವಾಸ್ತವಕ್ಕೆ ಹತ್ತಿರ ಅನಿಸುವುದಿಲ್ಲ. ಹಾಗಾಗಿ ಕನ್ನಡ ಸೇರಿದಂತೆ ದೇಶದ ಭಾಷೆಗಳು ಉಳಿಯಬೇಕಿದ್ದರೆ, ಉನ್ನತ ಶಿಕ್ಷಣ ದೇಶದ ಪ್ರಾದೇಶಿಕ ಭಾಷೆಗಳಲ್ಲಿ ಆಗಲೇಬೇಕು. ಈ ಹಿನ್ನೆಲೆಯಲ್ಲಿ ಅಮಿತ್ ಶಾ ಅವರ ಹೇಳಿಕೆಯನ್ನು ನಮ್ಮ ರಾಜ್ಯ ಸರ್ಕಾರ, ಕನ್ನಡಪರ ಹೋರಾಟಗಾರರು ಹಾಗೂ ಕನ್ನಡದ ಸಾಹಿತಿಗಳು ಸಕಾರಾತ್ಮಕವಾಗಿ ಸ್ವೀಕರಿಸಲೇಬೇಕು. ಉನ್ನತ ಶಿಕ್ಷಣವನ್ನು ದೇಶದ ಭಾಷೆಗಳಲ್ಲಿ ನೀಡಲು ಸಾಧ್ಯ ಇಲ್ಲ ಎನ್ನುವುದಾದರೆ, ಪ್ರಾಥಮಿಕ ಹಂತದಲ್ಲಿ ಕನ್ನಡ ಮಾಧ್ಯಮ ಇರಬೇಕೆಂದು ಭಾಷಣ ಮಾಡುವುದು ಹಾಗೂ ಸಮ್ಮೇಳನಗಳಲ್ಲಿ ಠರಾವು ಮಾಡುವುದರಲ್ಲಿ ಯಾವ ಅರ್ಥವೂ ಇಲ್ಲ ಎಂದರು.

ಪತ್ರಿಕಾಗೋಷ್ಠಿಯಲ್ಲಿ ವಿಶ್ವಪಥ ಬಳಗದ ಪಿ. ಪುರುಷೋತ್ತಮ್, ತಿರುಪತಿಹಳ್ಳಿ ಶಿವಶಂಕರಪ್ಪ, ಪರಮಶಿವಯ್ಯ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''