ಕನ್ನಡಪ್ರಭ ವಾರ್ತೆ, ಕಲಬುರಗಿ.ಮಹಾರಾಷ್ಟ್ರಕ್ಕೆ ಭೀಮಾ ನದಿಯಲ್ಲಿ ನ್ಯಾಯಸಮ್ಮತವಾಗಿ ಹಂಚಿಕೆಯಾದ ನೀರಿಗಿಂತ ಹೆಚ್ಚಿನ ನೀರನ್ನು ಹಿಡಿದಿಟ್ಟುಕೊಂಡು ನದಿಪಾತ್ರದಲ್ಲಿ ತನ್ನ ಅಧಿಪತ್ಯ ಸ್ಥಾಪಿಸಲು ಯಾವ ಕಾರಣಕ್ಕೂ ಬಿಡೋದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾಡಿದ್ದಾರೆ. ಬಚಾವತ್ ತೀರ್ಪಿನಂತೆ ನಮ್ಮ ಪಾಲಿನ ನೀರು ಪಡೆಯಲು ಕೇಂದ್ರ ಜಲ ಆಯೋಗ (ಸಿಡಬ್ಲ್ಯೂಸಿ)ದ ಮೊರೆ ಹೋಗುತ್ತೇವೆ, ಅಗತ್ಯ ಕಂಡಲ್ಲಿ ಕೋರ್ಟ್ ಬಾಗಿಲು ತಟ್ಟುತ್ತೇವೆ ಎಂದು ಘೋಷಿಸಿದ್ದಾರೆ.ಭೀಮಾ ತೀರದಲ್ಲಾಗಿರುವ ಪ್ರವಾಹ ಹಾನಿಯ ವೈಮಾನಿಕ ಸಮೀಕ್ಷೆ, ಅಧಿಕಾರಿಗಳ ಸಭೆಯ ನಂತರ ಕಲಬುರಗಿಯಲ್ಲಿ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಭೀಮೆಯ ಪಾಲಿನ ನೀರನ್ನು ನಾವು ಪಡೆಯೋದು ಶತಃಸಿದ್ಧ. ಅದಕ್ಕೆ ನಾವು ಶಾಸನ ಬದ್ಧ ವೇದಿಕೆಯಲ್ಲಿ ಪ್ರಶ್ನೆ ಮಾಡಲೂ ಸಿದ್ಧ ಎಂದು ಘಂಟಾಘೋಷವಾಗಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿಯೇ ಉಪಸ್ಥಿತರಿದ್ದ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಕೂಡಾ ಈ ಮಾತಿಗೆ ಸಹಮತ ವ್ಯಕ್ತಪಡಿಸಿದರು. ಭೀಮಾ ಪಾಲಿನ ನೀರನ್ನು ನಾವು ಯಾವ ಕಾರಣಕ್ಕೂ ಮಹಾರಾಷ್ಟ್ರಕ್ಕೆ ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ. ಅಗತ್ಯಬಿದ್ದರೆ ಸಿಡಬ್ಲ್ಯೂಸಿ ಮೊರೆ ಹೋಗುವುದು ನಿಶ್ಚಿತ ಎಂದು ಹೇಳಿದರು.