ರಾಮನಗರ: ಜಿಲ್ಲೆಯಲ್ಲಿ ಸೂರಿಲ್ಲದ ಕಡು ಬಡವರಿಗೆ ಮನೆ ನಿರ್ಮಿಸಿ ಕೊಡುವ ಮೂಲಕ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಕನಸನ್ನು ನನಸು ಮಾಡುತ್ತೇವೆ ಎಂದು ಪೌರಾಡಳಿತ ಸಚಿವ ಎಚ್.ಸಿ.ಬಾಲಕೃಷ್ಣ ಹೇಳಿದರು.
ಫಲಾನುಭವಿಗಳಿಗೆ ಸರ್ಕಾರದ ಜೊತೆಗೆ ಬ್ಯಾಂಕ್ ನಲ್ಲಿ ಒಂದು ಲಕ್ಷದರವೆಗೆ ಸಾಲ ಸೌಲಭ್ಯ ಕಲ್ಪಿಸಿ ಗುಣಮಟ್ಟದ ಮನೆ ನಿರ್ಮಿಸಲು ಸಹಕಾರ ಕೊಡಬೇಕಿದೆ. ಮುಖ್ಯಮಂತ್ರಿಗಳ ಆದೇಶದಂತೆ ಅಧಿಕಾರಿಗಳು ಪ್ರಾಮಾಣಿಕತೆ ತೋರುವ ಅಗತ್ಯವಿದೆ. ಮನೆಗಳ ನಿರ್ಮಾಣ ಕಾಮಗಾರಿಯಲ್ಲಿ ಗುಣಮಟ್ಟ ಕಾಪಾಡಬೇಕು ಎಂದು ಸೂಚನೆ ನೀಡಿದರು.
ಮನೆಗಳ ನಿರ್ಮಾಣ ಸಂಬಂಧ ನಾನು, ಶಾಸಕ ರೊಡಗೂಡಿ ಫಲಾನುಭವಿಗಳು, ಅಧಿಕಾರಿಗಳ ಸಭೆ ನಡೆಸುತ್ತೇವೆ. ಗುತ್ತಿಗೆದಾರರಿಂದ ನಾವು ಏನನ್ನೂ ಅಪೇಕ್ಷೆ ಪಡುವುದಿಲ್ಲ. ಮನೆ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಬೇಕು. ಯಾರಾದರು ಕಳ್ಳಾಟವಾಡಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವ ಜೊತೆಗೆ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.ಬಡವರಿಗಾಗಿ ನಿರ್ಮಿಸುತ್ತಿರುವ ಮನೆಗಳು ಗುಣಮಟ್ಟದಿಂದ ಕೂಡಿರಬೇಕು. ಇಲ್ಲಿ ಲಾಭದ ಮನಸ್ಸು ಯಾರಿಗೂ ಇರಬಾರದು, ಸ್ಲಂ ಬೋರ್ಡಿನಿಂದ ಮನೆಗಳು ನಿಗದಿತ ಸಮಯದಲ್ಲಿ ಪೂರ್ಣಗೊಂಡ ಉದಾಹರಣೆ ಇಲ್ಲ.
ನಮ್ಮಗಳ ಮೇಲೆ ವಿಶ್ವಾಸವಿಡಿ:
ರಾಮನಗರಕ್ಕೆ 500-600 ಕೋಟಿ ರುಪಾಯಿ ಅನುದಾನ ತಂದು, ರಸ್ತೆ, ಚರಂಡಿ ಸೇರಿದಂತೆ ಮೂಲಸೌಕರ್ಯ ಕಲ್ಪಿಸಲಾಗುವುದು. ಪ್ರತಿಯೊಬ್ಬ ಬಡವನಿಗೂ ಸೂರು ಕಲ್ಪಿಸುವುದು ನಮ್ಮೆಲ್ಲರ ಉದ್ದೇಶ. ಇದಕ್ಕಾಗಿ 250 ಎಕರೆ ಸರ್ಕಾರಿ ಜಮೀನು ಗುರುತಿಸುವ ಕೆಲಸ ನಡೆಯುತ್ತಿದೆ. ಈಗಾಗಲೇ ಸೂರಿಗಾಗಿ 13,800 ಅರ್ಜಿಗಳು ಬಂದಿದ್ದು, ಒಂದೂವರೆ ತಿಂಗಳಲ್ಲಿ ಅರ್ಹ ಬಡವರಿಗೆ ನಿವೇಶನ ಕಲ್ಪಿಸಲು ಕ್ರಮ ವಹಿಸುತ್ತೇವೆ ಎಂದು ಹೇಳಿದರು.
ಮಾಜಿ ಶಾಸಕ ಕೆ.ರಾಜು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎ.ಬಿ.ಚೇತನ್ಕುಮಾರ್, ತಾಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ವಿ.ಎಚ್.ರಾಜು, ನಗರಸಭೆ ಉಪಾಧ್ಯಕ್ಷೆ ಗಿರಿಜಮ್ಮ, ಪ್ರಾಧಿಕಾರದ ಮಾಜಿ ಅಧ್ಯಕ್ಷ ಸಿಎನ್ ಆರ್ ವೆಂಕಟೇಶ್, ಮುಖಂಡರಾದ ಅಮ್ಜದ್ ಸಾಹುಕಾರ್, ನಗರಸಭೆ ಆಯುಕ್ತ ಡಾ.ಜಯಣ್ಣ, ತಹಸೀಲ್ದಾರ್ ತೇಜಸ್ವಿನಿ, ಕೊಳಗೇರಿ ಅಭಿವೃದ್ಧಿ ಮಂಡಳಿ ಎಇ ಶಶಿಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ರಾಮನಗರ ನಗರಸಭೆ ವ್ಯಾಪ್ತಿಯ ಶಿಡ್ಲಕಲ್ಲುನಲ್ಲಿ 888 ಮನೆಗಳ ನಿರ್ಮಾಣ ಕಾರ್ಯದ ಭೂಮಿ ಪೂಜೆ ಸಮಾರಂಭವನ್ನು ಸಚಿವ ಬಾಲಕೃಷ್ಣ ಉದ್ಘಾಟಿಸಿದರು.