ಕನ್ನಡಪ್ರಭ ವಾರ್ತೆ ಸಕಲೇಶಪುರ
ಪಟ್ಟಣದ ಸಕಲೇಶ್ವರಸ್ವಾಮಿ ದೇವಸ್ಥಾನಕ್ಕೆ ಬಂದ ಕನ್ನಡ ಜ್ಯೋತಿರಥವನ್ನು ತಾಲೂಕು ಆಡಳಿತ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ವಿವಿಧ ಸಂಘ ಸಂಸ್ಥೆಗಳು ಮತ್ತು ಕನ್ನಡ ಅಭಿಮಾನಿಗಳು ಸ್ವಾಗತಿಸಿ ಪೂರ್ಣಕುಂಭಗಳೊಂದಿಗೆ ಪುರಭವನದವರೆಗೆ ಮೆರವಣಿಗೆಯಲ್ಲಿ ಸಾಗಿ ನಂತರ ಬೇಲೂರು ತಾಲೂಕಿಗೆ ಕಳಿಸಿಕೊಡಲಾಯಿತು.
ಈ ಸಂದಭದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶಾರದಾ ಗುರುಮೂರ್ತಿ ಮಾತನಾಡಿ, ಡಿಸೆಂಬರ್ ತಿಂಗಳಲ್ಲಿ ಮಂಡ್ಯದಲ್ಲಿ ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಇಂದು ನಮ್ಮ ಸಕಲೇಶಪುರ ನಗರಕ್ಕೆ ತಾಯಿ ಭುವನೇಶ್ವರಿಯ ರಥವು ಆಗಮಿಸಿದ್ದು, ಕನ್ನಡದ ಮನಸ್ಸುಗಳು ಅದ್ಧೂರಿಯಾಗಿ ಸ್ವಾಗತಿಸಿ ಬೇಲೂರು ತಾಲೂಕಿಗೆ ಕಳಿಸಿಕೊಟ್ಟಿವೆ. ಇದೇ ರೀತಿ ಡಿಸೆಂಬರ್ ೧೩ನೇ ದಿನದಂದು ನಾಲ್ಕನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಸಕಲೇಶಪುರದ ಕನ್ನಡಪರ ಸಂಘಟನೆಗಳು ಹಾಗೂ ವಿವಿಧ ಸಂಘಟನೆಗಳು ಆಡಳಿತ ವರ್ಗ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.ಈ ಸಂದರ್ಭದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಹಾಗೂ ಕರವೇ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಕನ್ನಡ ಅಭಿಮಾನಿಗಳು ಇದ್ದರು. ಮಹಿಳಾ ಮತ್ತು ಮಕ್ಕಳ ಇಲಾಖೆಯ ಅಂಗನವಾಡಿ ಶಿಕ್ಷಕಿಯರು ಹಾಗೂ ಸಹಾಯಕಿಯರು ಪೂರ್ಣಕುಂಭ ಕಳಸದೊಂದಿಗೆ ಮೆರವಣಿಗೆಯಲ್ಲಿ ಸಾಗಿ ಮೆರವಣಿಗೆಗೆ ಮೆರುಗು ತಂದರು.