ಕನ್ನಡಪ್ರಭ ವಾರ್ತೆ ದಾವಣಗೆರೆ/ಹರಿಹರ
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು, ಅಧಿಕಾರಕ್ಕೆ ಬಂದಾಗ ಮತಗಳ್ಳತನ ಇರಲಿವೆ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕುಟುಕಿದ್ದಾರೆ.ದಾವಣಗೆರೆಯಲ್ಲಿ ಮಾಜಿ ಶಾಸಕ, ಪಕ್ಷದ ಹಿರಿಯ ನಾಯಕ ಎಚ್.ಎಸ್.ಶಿವಶಂಕರ ನಿವಾಸದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ವಿಧಾನಸಭಾ ಚುನಾವಣೆ ವೇಳೆ ಇಲ್ಲದ ಮತಗಳ್ಳತನದ ಆರೋಪವನ್ನು ಈಗ ಲೋಕಸಭೆ ಚುನಾವಣೆಯಲ್ಲಿ ತಮಗೆ ಹಿನ್ನಡೆಯಾದ ನಂತರ, ಎರಡು ವರ್ಷಗಳ ಬಳಿಕ ಕಾಂಗ್ರೆಸ್ಸಿಗರು ಮಾತನಾಡುತ್ತಿದ್ದಾರೆ ಎಂದು ಟೀಕಿಸಿದರು.
ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಕೆ:ಮುಂಬರುವ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ಪಾಲಿಕೆ, ನಗರಸಭೆ ಸೇರಿ ಯಾವುದೇ ಚುನಾವಣೆಗಳು ನಡೆದರೂ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಪಕ್ಷಗಳ ಮೈತ್ರಿ ಮುಂದುವರಿಯಲಿದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಎಸ್ಐಟಿ ತನಿಖೆ ನಂತರ ಪ್ರತಿಕ್ರಿಯಿಸುವೆ:ಅನಾಮಿಕ ವ್ಯಕ್ತಿಯ ದೂರಿನ ಮೇರೆಗೆ ಧರ್ಮಸ್ಥಳದಲ್ಲಿ ಎಸ್ಐಟಿ ಸ್ಥಳ ಪರಿಶೀಲಿಸುತ್ತಿರುವುದನ್ನು ನೋಡುತ್ತಿದ್ದೇವೆ. ಎಸ್ಐಟಿ ತನಿಖೆ ನಂತರ ಔಟ್ ಕಮ್ ಏನು ಬರುತ್ತೆ, ಆ ನಂತರ ಚರ್ಚೆ ಮಾಡುವುದು ಸೂಕ್ತ. ಇದು ಅತ್ಯಂತ ಸೂಕ್ಷ್ಮವಾದ ವಿಚಾರವಾಗಿದ್ದು, ಯಾವುದೇ ಊಹಾಪೋಹಗಳ ಬಗ್ಗೆ ನಾನು ಏನನ್ನೂ ಮಾತನಾಡುವುದಿಲ್ಲ. ಎಸ್ಐಟಿ ತನಿಖೆ ಪೂರ್ಣಗೊಂಡ ಬಳಿಕವಷ್ಟೇ ಇದರ ಬಗ್ಗೆ ಪ್ರತಿಕ್ರಿಯಿಸುವುದು ಒಳ್ಳೆಯದು ಎಂದು ಪ್ರಶ್ನೆಯೊಂದಕ್ಕೆ ನಿಖಿಲ್ ಪ್ರತಿಕ್ರಿಯಿಸಿದರು.
ನಿಖಿಲ್ಗೆ ಅದ್ಧೂರಿ ಸ್ವಾಗತಜೆಡಿಎಸ್ ಸಮಾವೇಶದಲ್ಲಿ ಪಾಲ್ಗೊಳ್ಳಲು ಮಧ್ಯಾಹ್ನ 1ಕ್ಕೆ ಹರಿಹರಕ್ಕೆ ಆಗಮಿಸಿದ ನಿಖಿಲ್, ಕ್ಷೇತ್ರನಾಥ ಶ್ರೀ ಹರಿಹರೇಶ್ವರ ಸ್ವಾಮಿ ದೇವಾಲಯಕ್ಕೆ ತೆರಳಿದರು. ಅಲ್ಲಿ ಪೂಜೆ ಸಲ್ಲಿಸಿದ ನಂತರ, ತೆರೆದ ವಾಹನದಲ್ಲಿ ಬೃಹತ್ ಮೆರವಣಿಗೆ ಮೂಲಕ ನಗರದ ಭಾಗೀರಥಿ ಕನ್ವೆನ್ನನ್ ಹಾಲ್ ನಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮಕ್ಕೆ ತೆರಳಿದರು. ಈ ವೇಳೆ, ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಜೆಸಿಬಿ ಮೂಲಕ ಅವರಿಗೆ ಪುಷ್ಪಾರ್ಚನೆ ನಡೆಸಲಾಯಿತು.
ಬಳಿಕ, ಸಂಜೆ ಮಲೇಬೆನ್ನೂರು ಸಮೀಪದ ಕುಂಬಳೂರು ಹೊರವಲಯದಲ್ಲಿನ ನೂತನ ವೀರಭದ್ರೇಶ್ವರ ದೇವಾಲಯಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.ಬೆಂಗಳೂರಿನಲ್ಲಿ ಕನ್ನಡ ಚಿತ್ರರಂಗದ ಮೇರು ನಟ ಡಾ.ವಿಷ್ಣುವರ್ಧನ್ ಅವರ ಸಮಾಧಿ ನೆಲಸಮಗೊಳಿಸಿದ ಘಟನೆ ತೀವ್ರ ನೋವುಂಟು ಮಾಡಿದೆ. ಇಂತಹ ಬೆಳವಣಿಗೆಯೇ ಆಗಬಾರದಿತ್ತು. ವಿಷ್ಣುವರ್ಧನ್ ಅವರ ಸಮಾಧಿ ವಿಚಾರವಾಗಿ ನಾನು ಏನು ಮಾಡುತ್ತೇನೆ ಎಂಬ ಬಗ್ಗೆ ಶೀಘ್ರ ಮಾಹಿತಿ ನೀಡುತ್ತೇನೆ.
-ನಿಖಿಲ್ ಕುಮಾರಸ್ವಾಮಿ, ರಾಜ್ಯಾಧ್ಯಕ್ಷ, ಜೆಡಿಎಸ್ ರಾಜ್ಯ ಯುವ ಘಟಕ.