ಸಿದ್ದರಾಮಯ್ಯ ಇನ್ನು ಮೇಲಾದರೂ ಅರ್ಥ ಮಾಡಿಕೊಂಡು ರಾಜೀನಾಮೆ ನೀಡಬೇಕು : ಜಗದೀಶ ಶೆಟ್ಟರ್

KannadaprabhaNewsNetwork |  
Published : Oct 01, 2024, 01:37 AM ISTUpdated : Oct 01, 2024, 12:26 PM IST
Jagadish shettar

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಆಗ್ರಹಿಸಿದ್ದಾರೆ. ಲೋಕಾಯುಕ್ತ ಅಧಿಕಾರಿಯ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಅಧಿಕಾರಿಗಳು ರಾಜಕಾರಣಿಗಳಂತೆ ವರ್ತಿಸಬಾರದು ಎಂದು ಹೇಳಿದರು.

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಭಂಡತನದಿಂದ ದಸರಾ ಉದ್ಘಾಟನೆಗೆ ಹೋಗುತ್ತೇನೆ ಎಂದರೆ ಯಾರೂ ಏನು ಮಾಡಲು ಸಾಧ್ಯ. ಈಗಲಾದರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಟ್ಟರೆ ಅವರ ವ್ಯಕ್ತಿತ್ವಕ್ಕೆ ಒಳ್ಳೆಯದು ಎಂದು ಸಂಸದ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜವಾದಿ ಹಿನ್ನೆಲೆಯಿಂದ ಬಂದಿದ್ದೇನೆ ಎನ್ನುವ, ನೈತಿಕತೆ ಬಗ್ಗೆ ಮಾತನಾಡುತ್ತಿದ್ದ ಸಿದ್ದರಾಮಯ್ಯ ಇನ್ನು ಮೇಲಾದರೂ ಅರ್ಥ ಮಾಡಿಕೊಳ್ಳಬೇಕು. ಹಿಂದೆ ಯಡಿಯೂರಪ್ಪ ಅವರ ಮೇಲೆ ಪ್ರಕರಣ ದಾಖಲಾದ ವೇಳೆ ಇದೇ ಸಿದ್ದರಾಮಯ್ಯ ಅವರು ಪ್ರಕರಣದ ವಿಚಾರಣೆ ನಡೆಯುವಾಗ ಅವರ ಕೆಳಗಿನ ಎಲ್ಲ ಅಧಿಕಾರಿಗಳು ಪ್ರಾಮಾಣಿಕವಾಗಿ ಹೇಗೆ ತನಿಖೆ ಮಾಡುವುದಕ್ಕೆ ಸಾಧ್ಯ. ಅದಕ್ಕೆ ರಾಜೀನಾಮೆ ಕೊಡಬೇಕು ಎಂದಿದ್ದರು. ಆದರೆ, ತಮ್ಮ ಮೇಲೆ ಆರೋಪ, ಪ್ರಕರಣ ದಾಖಲಾಗಿದ್ದರೂ ಈಗೇಕೆ ರಾಜೀನಾಮೆ ನೀಡುತ್ತಿಲ್ಲ? ಎಂದು ಪ್ರಶ್ನಿಸಿದರು.

ದ್ವೇಷದ ರಾಜಕಾರಣ

ಕೇಂದ್ರ‌ ಸಚಿವ ಎಚ್.ಡಿ. ಕುಮಾರಸ್ವಾಮಿ ಕುರಿತು ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಶೆಟ್ಟರ್‌, ಅಧಿಕಾರಿಗಳು ರಾಜಕಾರಣಿಗಳಂತೆ ವರ್ತಿಸಬಾರದು. ಕುಮಾರಸ್ವಾಮಿ ಕೇಂದ್ರದ ಸಚಿವರು.‌ ಪ್ರಧಾನಿ ನರೇಂದ್ರ ಮೋದಿ ಕ್ಯಾಬಿನೆಟ್‌ನಲ್ಲಿ ಪ್ರಮುಖ ಹುದ್ದೆಯಲ್ಲಿದ್ದಾರೆ. ಅವರು ಈಗಾಗಲೇ ಕೇಂದ್ರಕ್ಕೆ ಈ ಬಗ್ಗೆ ದೂರು ನೀಡಿದ್ದಾರೆ. ಆಗ ಪೊಲೀಸ್ ಅಧಿಕಾರಿ ಮೇಲೆ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ. ಲೋಕಾಯುಕ್ತದವರು ಕುಮಾರಸ್ವಾಮಿ, ಯಡಿಯೂರಪ್ಪ ಅವರನ್ನು ಕರೆಯಿಸಿದ್ದಾಗ ವಿಚಾರಣೆಗೆ ಹಾಜರಾಗಿದ್ದಾರೆ. ಅದನ್ನು ಬಿಟ್ಟು ಬೇಕಾಬಿಟ್ಟಿ ಮಾತನಾಡಿ ಕಾಂಗ್ರೆಸ್ ಸರ್ಕಾರಕ್ಕೆ ಬೆಂಬಲ ನೀಡುತ್ತಿದ್ದಾರೆ ಎಂದು ಹರಿಹಾಯ್ದರು.

ಕಾಂಗ್ರೆಸ್‌ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಹಿಂದಿನ ಯಾವುದೋ ಪ್ರಕರಣದ ಎಫ್ಐಆರ್ ಇಟ್ಟುಕೊಂಡು ದ್ವೇಷದ ರಾಜಕಾರಣ ಮಾಡುತ್ತಿದೆ.‌ ಎಲ್ಲರ ಮೇಲೂ ಎಫ್ಐಆರ್ ಮಾಡಿಸಿ ತೊಂದರೆ ಕೊಡುವುದು ಆರಂಭವಾಗಿದೆ. ಆ ಮೂಲಕ ಮುಡಾ ಹಗರಣದಲ್ಲಿ ಜನರ ಮನಸ್ಸು ಬೇರೆಡೆ ತಿರುಗಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.

ಯಾರೂ ದೂರು ಕೊಟ್ಟಿಲ್ಲ

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮೇಲೆ ನ್ಯಾಯಾಧೀಶರ ಸೂಚನೆ ಮೇಲೆ ಎಫ್ಐಆರ್ ಮಾಡಿದ್ದಾರೆ. ಆ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಆದರೆ, ಪೊಲೀಸರು ಸತ್ಯ ಪರಿಶೀಲನೆ ಮಾಡದೆ ಎಫ್ಐಆರ್ ದಾಖಲಿಸಿದ್ದಾರೆ. ಕೇಂದ್ರ ಸಚಿವರ ಮೇಲೆ ಕ್ರಮ ಕೈಗೊಳ್ಳಬೇಕಾದರೆ ಪ್ರಾಸಿಕ್ಯೂಷನ್ ಅಗತ್ಯವಲ್ಲವೇ? ಎಲೆಕ್ಟ್ರೋಲ್‌ ಬಾಂಡ್ ದುಡ್ಡು ಕೊಟ್ಟವರು ಯಾರೂ ದೂರು ಕೊಟ್ಟಿಲ್ಲ. ಅವರೇನಾದರೂ ಕೇಂದ್ರ ಸರ್ಕಾರದಿಂದ ಅನ್ಯಾಯವಾಗಿದೆ ಎಂದು ದೂರು ನೀಡಿದ್ದಾರೆಯೇ? ಎಲೆಕ್ಟ್ರೋಲ್ ಬಾಂಡ್ ಮೂಲಕ ಕಾಂಗ್ರೆಸ್ ಹಾಗೂ ಬೇರೆ ಬೇರೆ ಪಕ್ಷಗಳಿಗೂ ಹಣ ಹೋಗಿದೆ ಎಂದರು.

ಇಡಿ ಬಳಸಿ ಬ್ಲಾಕ್ ಮೇಲ್ ಮಾಡಿ ಹಣ ಪಡೆದಿದ್ದಾರೆ ಅನ್ನುವ ಆರೋಪಕ್ಕೆ ಉತ್ತರಿಸಿದ ಶೆಟ್ಟರ, ಇಡಿಯಿಂದ ದಾಳಿ ಮಾಡಿಸಿಕೊಂಡವರು ಈ ಬಗ್ಗೆ ಹೇಳಬೇಕಲ್ಲ. ರಾಹುಲ್ ಗಾಂಧಿ ನಿರ್ದೇಶನ ಇಲ್ಲದೇ ಇದೆಲ್ಲ ನಡೆಯಲು ಸಾಧ್ಯವಿಲ್ಲ ಎಂದರು.

ವೈಯಕ್ತಿಕ ಹೇಳಿಕೆ

ಮುಖ್ಯಮಂತ್ರಿ ಆಗಲು ಮಹಾನ್ ನಾಯಕ ಸಾವಿರ ಕೋಟಿ ರುಪಾಯಿ ತೆಗೆದಿಟ್ಟಿದ್ದಾರೆ ಎನ್ನುವುದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ವೈಯಕ್ತಿಕ ಹೇಳಿಕೆ. ಆ ಬಗ್ಗೆ ಮತ್ತು ಅವರು ಪ್ರತ್ಯೇಕ ಸಭೆ ಮಾಡಿದ್ದರ ಬಗ್ಗೆಯೂ ಪ್ರತಿಕ್ರಿಯಿಸಲ್ಲ. ಈ ನಿಟ್ಟಿನಲ್ಲಿ ಪಕ್ಷ ಅಗತ್ಯ ಕ್ರಮ ಕೈಗೊಳ್ಳುತ್ತದೆ. ಅವರ ಹೇಳಿಕೆ ಅವರಿಗೆ ಸೀಮಿತ ಎಂದರು.

ವಿಭಾಗಿಸುವುದು ಒಳ್ಳೆಯದು

ಬೆಳಗಾವಿ ಜಿಲ್ಲೆಯನ್ನು ವಿಭಜಿಸುವುದು ಒಳ್ಳೆಯದು. ಆದರೆ, ಅದನ್ನು ವೈಜ್ಞಾನಿಕವಾಗಿ ಮಾಡಬೇಕು. ಆಡಳಿತ ಯಂತ್ರ ಸರಿಯಾಗಿ ಇರಬೇಕೆಂದರೆ ಜಿಲ್ಲೆಗಳು, ತಾಲೂಕು ಚಿಕ್ಕ ಚಿಕ್ಕದಾಗಿರಬೇಕು. ಬೆಳಗಾವಿ ಜಿಲ್ಲೆಯು ಇಬ್ಭಾಗವಾಗಿ ಪ್ರತ್ಯೇಕ ಜಿಲ್ಲೆಗಳಾಗಬೇಕು. ಇದಕ್ಕೆ ನಮ್ಮದೇನು ಅಭ್ಯಂತರವಿಲ್ಲ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌