ಗದಗ: ಅಕ್ರಮ ಗಣಿ ಪ್ರಕರಣಗಳ ಕುರಿತು ಸರ್ಕಾರದ ಕ್ರಮದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಕಾನೂನು ಸಚಿವ ಎಚ್.ಕೆ. ಪಾಟೀಲ ಬರೆದಿರುವ ಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯವೇನು ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್.ಕೆ. ಪಾಟೀಲ ಅವರು ಗಣಿ ಅಕ್ರಮದಲ್ಲಿ ನೋಂದಾಗಿರುವ ಕೇಸ್ಗಳ ಬಗ್ಗೆ ಶೇ. 90 ಕೇಸ್ಗಳು ಇತ್ಯರ್ಥವಾಗಿಲ್ಲ ಎಂದು ಅತ್ಯಂತ ಮಹತ್ವದ ವಿಚಾರ ಪ್ರಸ್ತಾಪಿಸಿದ್ದಾರೆ.
ಅವರದೇ ಸಚಿವ ಸಂಪುಟದ ಸದಸ್ಯರು ಎತ್ತಿರುವ ಪ್ರಕರಣಕ್ಕೆ ಮುಖ್ಯಮಂತ್ರಿ ಹೇಗೆ ಸ್ಪಂದಿಸುತ್ತಾರೆ ಎನ್ನುವುದು ರಾಜ್ಯದ ಜನರ ಪ್ರಶ್ನೆಯಾಗಿದೆ.ಎಚ್.ಕೆ. ಪಾಟೀಲ ಅವರು ಈ ಕುರಿತು ವಿಶೇಷ ನ್ಯಾಯಾಲಯ ಆರಂಭಿಸಬೇಕು, ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಹೇಳಿದ್ದಾರೆ.
ಈಗಾಗಲೇ ಹಲವಾರು ಕೇಸುಗಳು ನೋಂದಣಿಯಾಗಿ ಎಸ್ಐಟಿ ರಚನೆ ಆಗಿವೆ. ಸಿಬಿಐ ತನಿಖೆ ನಡೆಯುತ್ತಿವೆ. ಎಸ್ಐಟಿ ಮುಖ್ಯಸ್ಥರ ಮೇಲೆ ಹಲವಾರು ಆರೋಪಗಳು ಕೇಳಿ ಬಂದಿವೆ. ಎಚ್.ಕೆ. ಪಾಟೀಲ ಅವರು 2017-18ರ ಪೂರ್ವದ ಪ್ರಕರಣಗಳ ಬಗ್ಗೆ ಮಾತನಾಡಿದ್ದಾರೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಇದ್ದಾಗ ಇಡಿ ದೇಶದಲ್ಲಿ ಗಣಿಗಳನ್ನು ಇ-ಹರಾಜು ಮಾಡಬೇಕು ಎಂದು ಕೇಂದ್ರ ಸರ್ಕಾರ ಕಾನೂನು ಜಾರಿ ಮಾಡಿತು.
ಕೇಂದ್ರ ಸರ್ಕಾರ ಕಾನೂನು ಜಾರಿ ಮಾಡುವ ಹಿಂದಿನ ದಿನ ಕರ್ನಾಟಕ ಸರ್ಕಾರ ತನಗೆ ಬೇಕಾದವರಿಗೆ ಹಲವಾರು ಗಣಿ ಗುತ್ತಿಗೆ ನವೀಕರಣ ಮಾಡಿತ್ತು. ಅವುಗಳ ಬಗ್ಗೆಯೂ ತನಿಖೆ ಮಾಡಲು ಎಚ್.ಕೆ. ಪಾಟೀಲ ಒಪ್ಪುತ್ತಾರಾ ಎಂದು ಪ್ರಶ್ನಿಸಿದರು.
ಇದೇ ವೇಳೆ ಆಳಂದ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ ಅವರು, ಸರ್ಕಾರಿ ಮನೆ ಹಂಚಿಕೆಯಲ್ಲಿ ಭ್ರಷ್ಟಾಚಾರವಾಗುತ್ತಿರುವ ಬಗ್ಗೆ ನೀಡಿರುವ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು. ಬಿ.ಆರ್. ಪಾಟೀಲ ಹಲವಾರು ವಿಚಾರ ಎತ್ತುತ್ತಾರೆ. ಅವರ ಮಾತಿಗೆ ಕಾಂಗ್ರೆಸ್ನವರು ಯಾರೂ ಮರ್ಯಾದೆ ಕೊಡುತ್ತಿಲ್ಲ. ಭ್ರಷ್ಟಾಚಾರದ ವಿರುದ್ಧ ಮಾತನಾಡುವವರಿಗೆ ಕಾಂಗ್ರೆಸ್ನಲ್ಲಿ ಮರ್ಯಾದೆ ಇಲ್ಲ ಎನ್ನುವುದು ಬಹಳ ಸ್ಪಷ್ಟವಾಗಿದೆ ಎಂದು ಹೇಳಿದರು.