ಪಾದಯಾತ್ರೆ ಮಾಡಲು ಬಿಜೆಪಿಗೆ ಯಾವ ನೈತಿಕತೆ ಇದೆ: ದಿನೇಶ್‌ ಗುಂಡೂರಾವ್‌

KannadaprabhaNewsNetwork |  
Published : Aug 03, 2024, 12:36 AM IST
11 | Kannada Prabha

ಸಾರಾಂಶ

ಬಿಜೆಪಿ ಮುಖಂಡ ಯಡಿಯೂರಪ್ಪ ಮೇಲೆ ಪೋಕ್ಸೊ ಕೇಸ್ ನಡೆಯುತ್ತಿದೆ. ವಿಜಯೇಂದ್ರ ಮೇಲೂ ಕೇಸ್ ಇದೆ, ಹೀಗಿರುವಾಗ ಅವರಿಗೆ ಪಾದಯಾತ್ರೆ ನಡೆಸಲು ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

ಮುಖ್ಯಮಂತ್ರಿ ವಿರುದ್ಧ ಪಾದಯಾತ್ರೆ ನಡೆಸಲು ಬಿಜೆಪಿಯವರಿಗೆ ಯಾವ ನೈತಿಕತೆ ಇದೆ? ಕಾನೂನಿನ ಅಡಿಯಲ್ಲಿ ಸಿದ್ದರಾಮಯ್ಯ ಏನು ತಪ್ಪು ಮಾಡಿದ್ದಾರೆ ಎನ್ನುವುದನ್ನು ತೋರಿಸಲಿ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸವಾಲು ಹಾಕಿದ್ದಾರೆ.

ಮಂಗಳೂರಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮುಖಂಡ ಯಡಿಯೂರಪ್ಪ ಮೇಲೆ ಪೋಕ್ಸೊ ಕೇಸ್ ನಡೆಯುತ್ತಿದೆ. ವಿಜಯೇಂದ್ರ ಮೇಲೂ ಕೇಸ್ ಇದೆ, ಹೀಗಿರುವಾಗ ಅವರಿಗೆ ಪಾದಯಾತ್ರೆ ನಡೆಸಲು ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ಅವರು ಕಳೆದುಕೊಂಡ ಭೂಮಿಯನ್ನು ವಾಪಸ್ ಪಡೆದಿದ್ದಾರೆ ಅಷ್ಟೇ. ಬಿಜೆಪಿ ಮತ್ತು ಜೆಡಿಎಸ್ ನಾಯಕರು ಕಾನೂನಿನಡಿ ತಪ್ಪು ತೋರಿಸಲಿ. ಅಧಿಕಾರ ದುರುಪಯೋಗದ ಬಗ್ಗೆ ತೋರಿಸಲಿ ನೋಡೋಣ ಎಂದರು.ಪಾದಯಾತ್ರೆ ಮಾಡಲು ಅಧಿಕೃತವಾಗಿ ಅನುಮತಿ ನೀಡಲು ಸಹಜವಾಗಿ ಆಗುವುದಿಲ್ಲ. ಆದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವರಿಗೆ ಅವಕಾಶ ಇದೆ. ಹಾಗಾಗಿ ನಿರ್ಬಂಧ ವಿಧಿಸಿ ಪಾದಯಾತ್ರೆಗೆ ಅವಕಾಶ ಕೊಡಲಾಗುತ್ತದೆ ಎಂದು ದಿನೇಶ್‌ ಗುಂಡೂರಾವ್‌ ತಿಳಿಸಿದರು.

ಕೇಂದ್ರ ಸರ್ಕಾರ ಐಟಿ, ಇಡಿ ಎಲ್ಲವನ್ನೂ ದುರುಪಯೋಗಪಡಿಸಿಕೊಳ್ಳುತ್ತಿದೆ. ಏನಾದರೂ ಮಾಡಿ ಸರ್ಕಾರ ಉರುಳಿಸಲು ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ. ಶೇ.95ರಷ್ಟು ಇಡಿ, ಐಟಿ ದಾಳಿಗಳು ವಿರೋಧ ಪಕ್ಷದ ಮೇಲೆಯೇ ಆಗಿವೆ. ಈಗ ಸಿಎಂ ಸಿದ್ದರಾಮಯ್ಯ ಅವರನ್ನು ಹೇಗಾದರೂ ಮಾಡಿ ಜೈಲಿಗೆ ಹಾಕಬೇಕೆಂದು ಇಷ್ಟೆಲ್ಲ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ರಾಜ್ಯಪಾಲರು ದೂರು ಪಡೆದ ಕೆಲವೇ ಗಂಟೆಗಳಲ್ಲಿ ನೋಟಿಸ್‌ ಜಾರಿ ಮಾಡಿದ್ದಾರೆ. ಅಬ್ರಹಾಂ ಹಿನ್ನೆಲೆ ಎಲ್ಲರಿಗೂ ಗೊತ್ತಿದೆ, ಅವರಿಗೆ ಸುಪ್ರೀಂ ಕೋರ್ಟ್ ಕೂಡ 20 ಲಕ್ಷ ರು. ದಂಡ ಹಾಕಿತ್ತು. ಯಾವುದೇ ಕಾನೂನು ತಜ್ಞರ ಜತೆಗೂ ರಾಜ್ಯಪಾಲರು ಚರ್ಚೆ ಮಾಡಿಲ್ಲ. ನೂರಾರು ಪುಟಗಳ ದೂರು ಪಡೆದು ಕೆಲವೇ ಗಂಟೆಗಳಲ್ಲಿ ನೋಟಿಸ್‌ ನೀಡಿದ್ದಾರೆ. ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ಅವರು ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.

ಮಳೆಹಾನಿ ಪರಿಹಾರ ವಿಚಾರದಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ದಿನೇಶ್‌ ಗುಂಡೂರಾವ್‌, ಅಶೋಕ್ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ರಾಜ್ಯ ಹಾಗೂ ಕೇಂದ್ರದ ಪರಿಹಾರ ಸೇರಿಸಿ ಹಾನಿಯಾದ ಮನೆಗಳಿಗೆ 50 ಸಾವಿರ ರು. ನೀಡುತ್ತಿದ್ದೇವೆ. ಬಿಜೆಪಿಯವರು ಹಿಂದೆ ಕೊಟ್ಟ 5 ಲಕ್ಷ ರು. ಯೋಜನೆಯಲ್ಲಿ ಭಾರೀ ಅವ್ಯವಹಾರ ಆಗಿದೆ. ಕೆಲವರು ಸಣ್ಣಪುಟ್ಟ ಹಾನಿಗೆ 5 ಲಕ್ಷ ರು. ಪರಿಹಾರ ಪಡೆದಿದ್ದಾರೆ. ನಮ್ಮ ಸರ್ಕಾರ ಆ ಯೋಜನೆ ತೆಗೆದು ಬೇರೆ ಯೋಜನೆ ತಂದಿದ್ದೇವೆ. ಆರ್.ಅಶೋಕ್ ಗೆ ಅದೆಲ್ಲಾ ಗೊತ್ತಿಲ್ಲ ಅನಿಸುತ್ತದೆ ಎಂದು ಲೇವಡಿ ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ