ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ
ದುರ್ವ್ಯಸನಗಳು ಹಾಗೂ ದುಶ್ಚಟಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ, ಮನಸ್ಸು ಪರಿವರ್ತಿಸಿ, ಜನರ ದುಶ್ಚಟಗಳನ್ನು ತಮ್ಮ ಜೋಳಿಗೆಯಲ್ಲಿ ಸಂಗ್ರಹಿಸಿ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು ಡಾ.ಮಹಾಂತ ಶಿವಯೋಗಿಗಳು ಎಂದು ಅಥಣಿ ಮೋಟಗಿಮಠದ ಪ್ರಭು ಚನ್ನಬಸವ ಸ್ವಾಮೀಜಿ ಹೇಳಿದರು.ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಇಳಕಲ್ಲ ಮಹಾಂತ ಶಿವಯೋಗಿಗಳ ಜಯಂತಿಯ ಪ್ರಯುಕ್ತ ತಾಲೂಕಾಡಳಿತ ಶುಕ್ರವಾರ ಹಮ್ಮಿಕೊಂಡಿದ್ದ ವ್ಯಸನ ಮುಕ್ತ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಾಗಲಕೋಟೆಯ ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದಲ್ಲಿ ಜನಿಸಿದ ಮಹಾಂತ ಶ್ರೀಗಳು 10 ನೇ ವಯಸ್ಸಿನಲ್ಲಿ ಸನ್ಯಾಸತ್ವ ಸ್ವೀಕರಿಸಿದರು. ವ್ಯಸನ ಮುಕ್ತ ಸಮಾಜದ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಮತ್ತು ಯುವಕರು ಮುಂದಾಗಬೇಕು. ಕುತೂಹಲಕ್ಕಾಗಿ ಯಾರೊಬ್ಬರೂ ಮಾದಕ ದ್ರವ್ಯ ಬಳಸಬಾರದು. ಮಾನಸಿಕ ಅಸ್ವಸ್ಥರನ್ನು ಗುರುತಿಸಿ ಚಿಕಿತ್ಸೆ ನೀಡಿ ಸಮಾಜದ ಮುಖ್ಯವಾಹಿನಿಗೆ ತರುವಂತೆ ಮಾಡುವುದು ನಾಗರಿಕ ಸಮಾಜದ ಕರ್ತವ್ಯ. ಖಿನ್ನತೆಯಿಂದ ಮಾನಸಿಕ ದುಃಖ ಉಂಟಾಗಿ ವ್ಯಕ್ತಿಯ ಸಾಮರ್ಥ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುವ ಸಾಧ್ಯತೆ ಇದೆ ಎಂದರು.
ರಾಷ್ಟ್ರೀಯ ಬಸವಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಮಾತನಾಡಿ, ಮಹಾಂತ ಶಿವಯೋಗಿಗಳು ಅನ್ನ ದಾಸೋಹ, ವಚನ ಮಾಂಗಲ್ಯ, ದೇವದಾಸಿ ವಿಮೋಚನಾ ಸಂಸ್ಥೆ, ದೇವದಾಸಿಯರ ಮಕ್ಕಳಿಗೆ ಟ್ರಸ್ಟ್ ಸ್ಥಾಪನೆ, ನಿರುದ್ಯೋಗಿಗಳಿಗೆ ಮತ್ತು ವಿಧವೆಯರಿಗೆ ಕಾಯಕ ಸಂಜೀವಿನಿ ಸಂಸ್ಥೆ ಸ್ಥಾಪನೆ, ನಿಸರ್ಗ ಚಿಕಿತ್ಸೆ, ಯೋಗ ಕೇಂದ್ರ ಸ್ಥಾಪನೆ, ಶಾಖಾ ಮಠಗಳಿಗೆ ಪ.ಜಾತಿ ಮತ್ತು ಪಂಗಡಗಳ ಯುವಕರಿಗೆ ಧರ್ಮ ಸಂಸ್ಕಾರ ನೀಡಿ ಪಟ್ಟಾಭಿಷೇಕ ಮಾಡಿದ್ದು, ಮಹಿಳಾ ಸಾಧಕಿಯರಿಗೆ ಜಂಗಮ ದೀಕ್ಷೆ ನೀಡಿ ಮಠಾಧಿಕಾರಿಯನ್ನಾಗಿ ಮಾಡಿದ್ದು, ಮಠದ ಭೂಮಿಯನ್ನು ಆಯಾ ಗ್ರಾಮಗಳ ರೈತರಿಗೆ ನೀಡಿದ್ದು ಮುಂತಾದ ಹಲವು ಸಮಾಜಮುಖಿ ಕಾರ್ಯಗಳನ್ನು ಮಾಡಿದವರು. ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ನಡೆಯಬೇಕು ಎಂದು ಹೇಳಿದರುತಹಸೀಲ್ದಾರ್ ವೈ.ಎಸ್.ಸೋಮನಕಟ್ಟಿ, ತಾಲೂಕು ಸರ್ಕಾರಿ ನೌಕರರ ಅಧ್ಯಕ್ಷ ಶಿವಾನಂದ ಮಂಗಾನವರ, ಆರೋಗ್ಯ ಇಲಾಖೆಯ ಶಿಕ್ಷಣಾಧಿಕಾರಿ ಎಸ್.ಎಸ್.ಮೇಟಿ ಮಾತನಾಡಿದರು. ಈ ಸಂದರ್ಭದಲ್ಲಿ ಡಿವೈಎಸ್ಪಿ ಬಲ್ಲಪ್ಪ ನಂದಗಾವಿ, ಪಿಐ ಗುರುಶಾಂತ ದಾಶ್ಯಾಳ, ಬಸವರಾಜ ಹಾರಿವಾಳ, ಪುರಸಭೆ ಅಧ್ಯಕ್ಷೆ ಜಗದೇವಿ ಗುಂಡಳ್ಳಿ, ಮುಖಂಡರಾದ ರವಿ ರಾಠೋಡ, ಸಂಗಮೇಶ ಜಾಲಗೇರಿ, ಬಸವರಾಜ ಅಳ್ಳಗಿ, ವಿವಿಧ ಇಲಾಖೆ ಅಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು ಇದ್ದರು. ಕಾರ್ಯಕ್ರಮಕ್ಕೂ ಬಸವೇಶ್ವರ ಪಪೂ ಕಾಲೇಜಿನಿಂದ ವ್ಯಸನ ಮುಕ್ತ ಜಾಗೃತಿ ಜಾಥಾ ಆರಂಭಗೊಂಡು ಪ್ರಮುಖ ಬೀದಿಗಳಲ್ಲಿ ಜಾಥಾ ಜರುಗಿತು.