ಕಡಹಿನಬೈಲು ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಅಶ್ವಿನಿ ಅವಿರೋದ ಆಯ್ಕೆ
ಕಡಹಿನಬೈಲು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಅಶ್ವಿನಿ ಅವಿರೋಧವಾಗಿ ಆಯ್ಕೆಯಾದರು.
ಕಡಹಿನಬೈಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೈಲಾ ಮಹೇಶ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ತೆರವಾದ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಅಶ್ವಿನಿ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ಚುನಾವಣಾ ಅಧಿಕಾರಿಯಾಗಿದ್ದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿಸ್ತರಣಾಧಿಕಾರಿ ರಮೇಶ್ ಕಡಹಿನಬೈಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅಶ್ವಿನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು.ನಂತರ ನಡೆದ ಸಮಾರಂಭದಲ್ಲಿ ಶಿವಮೊಗ್ಗ ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಅಭಿನಂದಿಸಿ ಮಾತನಾಡಿ, ಜನರ ಮುಖಾಂತರ ಅಧಿಕಾರ ಸಿಕ್ಕಾಗ ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಬೇಕು. ಅಧಿಕಾರ ಎಂದೂ ಶಾಶ್ವತವಲ್ಲ. ಸಿಕ್ಕಿರುವ ಅಧಿಕಾರಾವಧಿಯಲ್ಲಿ ಜನರು ಮೆಚ್ಚುವಂತಹ ಹಾಗೂ ಅವರಿಗೆ ಉಪಯೋಗವಾಗುವಂತಹ ಕೆಲಸ ಮಾಡಬೇಕು. ಜನರನ್ನು ಪ್ರೀತಿ, ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಕಾರ್ಯ ಮಾಡಬೇಕು. ಮೂಲಭೂತ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕೆಂದು ಕರೆ ನೀಡಿದರು.ತಾಪಂ ಮಾಜಿ ಅಧ್ಯಕ್ಷ ಎಸ್.ಡಿ.ರಾಜೇಂದ್ರ ಮಾತನಾಡಿ, ಹಿಂದಿನಿಂದಲೂ ಕಡಹಿನಬೈಲು ರಾಜಕೀಯ ಕ್ಷೇತ್ರದ ಕೇಂದ್ರ ಬಿಂದುವಾಗಿದೆ. ಇಲ್ಲಿನ ಅನೇಕರು ವಿವಿಧ ಸೊಸೈಟಿಗಳಲ್ಲಿ ನಿರ್ದೇಶಕರಾಗಿ, ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಗ್ರಾಮ ಪಂಚಾಯಿತಿಗೆ ಬರುವ ಅನುದಾನವನ್ನು ಎಲ್ಲಾ ಸದಸ್ಯರು ಮೂಲಭೂತ ಸೌಕರ್ಯ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಸದ್ಬಳಕೆ ಮಾಡಿಕೊಳ್ಳಬೇಕೆಂದರು.ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೇರ್ಬೈಲ್ ನಟರಾಜ್ ಮಾತನಾಡಿ, ಅಧ್ಯಕ್ಷರಾದವರು ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಗ್ಗೂಡಿ ಅಭಿವೃದ್ಧಿ ಕಾರ್ಯ ಮಾಡಬೇಕೆಂದರು.ಪಿಡಿಒ ವಿಂದ್ಯಾ ಹಾಗೂ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.