ತಾಲೂಕು ಸ್ವೀಪ್ ಸಮಿತಿ ವತಿಯಿಂದ ನಡೆದ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ರಾಹುಲ್ ರತ್ನಂ ಪಾಂಡೆ
ಕೊಪ್ಪಳ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಕುಷ್ಟಗಿ ಕ್ಷೇತ್ರದಲ್ಲಿ ಕಡಿಮೆ ಮತದಾನವಾಗುತ್ತಿದ್ದು, ಈ ಲೋಕಸಭಾ ಚುನಾವಣೆಯಲ್ಲಿ ಶೇ. 80ಕ್ಕಿಂತಲೂ ಅಧಿಕ ಮತದಾನ ಆಗಬೇಕು. ಯಾರು ಮತದಾನದಿಂದ ದೂರ ಉಳಿಯಬಾರದು ಎಂದು ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆ ಹೇಳಿದರು.
ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಯುವ ಮತದಾರರ ನೋಂದಣಿ ಹಾಗೂ ಭಾಗವಹಿಸುವಿಕೆ ಪ್ರಮಾಣ ಹೆಚ್ಚಿಸಲು ಹಾಗೂ ಮತದಾನ ಜಾಗೃತಿಯ ಸಲುವಾಗಿ ತಾಲೂಕು ಸ್ವೀಪ್ ಸಮಿತಿ ವತಿಯಿಂದ ನಡೆದ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.ಕುಷ್ಟಗಿ ತಾಲೂಕಿನಲ್ಲಿ ಯಾರು ಮತದಾನದಿಂದ ದೂರ ಉಳಿಯಯಬಾರದು. ಅರ್ಹ ಮತದಾರರು ಎಲ್ಲರೂ ಕಡ್ಡಾಯವಾಗಿ ಮೇ 7ರಂದು ಮತ ಚಲಾಯಿಸಬೇಕು ಎಂದು ತಿಳಿಸಿದರು.ದೇಶದ ಅಭಿವೃದ್ಧಿಗಾಗಿ 18 ವರ್ಷದ ಮೇಲ್ಪಟ್ಟ ಎಲ್ಲ ಯುವಕರು ಮತದಾರರ ಪಟ್ಟಿಯಲ್ಲಿ ಹೆಸರನ್ನು ಸೇರ್ಪಡೆ ಮಾಡಿಸುವ ಮೂಲಕ ಕಡ್ಡಾಯವಾಗಿ ಮತದಾನ ಮಾಡಬೇಕು. ಅಂಗವಿಕಲರಿಗೆ ಸೌಲಭ್ಯಗಳನ್ನು ನೀಡಿದ್ದು ಈ ಸೌಲಭ್ಯಗಳನ್ನು ಉಪಯೋಗ ಮಾಡಿಕೊಳ್ಳುವ ಮೂಲಕ ಮತ ಹಾಕಬೇಕು ಎಂದು ಹೇಳಿದರು.
ಸಹಾಯಕ ಚುನಾವಣೆ ಅಧಿಕಾರಿ ರೇಷ್ಮಾ ಹಾನಗಲ್ ಮಾತನಾಡಿ, ನೊಂದಣಿಯಾದ ಎಲ್ಲ ಮತದಾರರು ಮತದಾನ ಮಾಡುವ ಮೂಲಕ ಸುಭದ್ರವಾದ ದೇಶದ ನಿರ್ಮಾಣಕ್ಕೆ ಮುಂದಾಗಬೇಕು ಎಂದರು.
ಈ ಸಂದರ್ಭದಲ್ಲಿ ತಾಪಂ ಇಒ ನಿಂಗಪ್ಪ ಮಸಳಿ, ತಹಸೀಲ್ದಾರ್ ರವಿ ಅಂಗಡಿ, ಸಿಡಿಪಿಒ ಯಲ್ಲಮ್ಮ ಹಂಡಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಬಾಲಚಂದ್ರ ಸಂಗನಾಳ, ಕ್ಷೇತ್ರ ಶಿಕ್ಷಣ ಸಮನ್ವಯ ಅಧಿಕಾರಿ ಜಗದೀಶ ಮೆಣೆದಾಳ, ತಾಪಂ ಸಹಾಯಕ ನಿರ್ದೇಶಕ ನಿಂಗನಗೌಡ ಹಿರೇಹಾಳ ಸೇರಿದಂತೆ ಪತ್ರಕರ್ತರು, ಬೂತ್ಮಟ್ಟದ ಅಧಿಕಾರಿಗಳು ಸೇರಿದಂತೆ ಇತರರು ಇದ್ದರು.