ಪೆನ್‌ಡ್ರೈವ್ ಪ್ರಕರಣ: ಎಚ್‌.ಡಿ.ಕುಮಾರಸ್ವಾಮಿ ಆರೋಪಕ್ಕೆ ಬಿಜೆಪಿ ಮೌನವೇಕೆ?: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

KannadaprabhaNewsNetwork |  
Published : Aug 04, 2024, 01:25 AM ISTUpdated : Aug 04, 2024, 01:12 PM IST
6.ಜನಾಂದೋಲನದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿದರು. | Kannada Prabha

ಸಾರಾಂಶ

ಪೆನ್‌ಡ್ರೈವ್ ಅನ್ನು ಮಾಜಿ ಶಾಸಕ ಪ್ರೀತಂಗೌಡ ಹಂಚಿದ್ದಾನೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಮಾಡಿರುವ ಆರೋಪಕ್ಕೆ ಬಿಜೆಪಿ ನಾಯಕರೇಕೆ ಚರ್ಚೆ ಮಾಡದೆ ಮೌನವಾಗಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದರು. ರಾಮನಗರದಲ್ಲಿ ಆಯೋಜಿಸಿದ್ದ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದರು.

ರಾಮನಗರ: ಪೆನ್ ಡ್ರೈವ್ ಅನ್ನು ಮಾಜಿ ಶಾಸಕ ಪ್ರೀತಂಗೌಡ ಹಂಚಿದ್ದಾನೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಮಾಡಿರುವ ಆರೋಪಕ್ಕೆ ಬಿಜೆಪಿ ನಾಯಕರೇಕೆ ಚರ್ಚೆ ಮಾಡದೆ ಮೌನವಾಗಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದರು.

2ನೇ ದಿನದ ಜನಾಂದೋಲನ ಉದ್ಘಾಟಿಸಿ ಮಾತನಾಡಿ, ಮಹಿಳೆಯರ ರಕ್ಷಣೆ ಬಗ್ಗೆ ಮಾತನಾಡುವ ದೇಶದ ಪ್ರಧಾನಮಂತ್ರಿಗಳು ಪೆನ್ ಡ್ರೈವ್ ಪ್ರಕರಣದ ಬಗ್ಗೆ ಏಕೆ ಮಾತನಾಡುತ್ತಿಲ್ಲ. ಬಿಜೆಪಿ ನಾಯಕರೇಕೆ ಬಾಯಿ ಮುಚ್ಚಿಕೊಂಡಿದ್ದಾರೆ? ಕುಮಾರಸ್ವಾಮಿ ಅವರು ನಾನು ಪೆನ್ ಡ್ರೈವ್ ಬಿಡುಗಡೆ ಮಾಡಿದೆ ಎಂದು ಸುಳ್ಳು ಆರೋಪ ಮಾಡಿದ್ದರು. ಈ ಶಿವಕುಮಾರ್ ಅಂತಹ ನೀಚ ರಾಜಕಾರಣ ಮಾಡುವುದಿಲ್ಲ ಎಂದು ರಾಜ್ಯದ ಜನತೆಗೆ ಗೊತ್ತಿದೆ. ಈಗ ಕುಮಾರಸ್ವಾಮಿ ಅವರೇ ಈ ಪೆನ್‌ಡ್ರೈವ್ ಗಳನ್ನು ಬಿಟ್ಟಿರುವುದು ಬಿಜೆಪಿ ಮಾಜಿ ಶಾಸಕ ಪ್ರೀತಂಗೌಡ ಎಂದು ಹೇಳಿದ್ದಾರೆ. ಪ್ರೀತಂಗೌಡನನ್ನು ವೇದಿಕೆಯಲ್ಲಿಟ್ಟುಕೊಂಡು ನನ್ನನ್ನು ಪಾದಯಾತ್ರೆ, ಸಭೆಗೆ ಕರೆಯುತ್ತಾರೆ. ಹೀಗಾಗಿ ನಾನು ಭಾಗವಹಿಸಲ್ಲ ಎಂದು ಕುಮಾರಸ್ವಾಮಿ ಹೇಳಿದ್ದರು. ಈಗ ಹೋಗಿದ್ದಾರೆ. ಅವರ ಮಾತಿಗೂ ಕೃತಿಗೂ ಸಂಬಂಧವೇ ಇಲ್ಲ ಎಂದು ಟೀಕಿಸಿದರು.

ಪೆನ್ ಡ್ರೈವ್ ಪ್ರಕರಣ ಹೊರ ಬಂದಾಗ, ನನಗೂ ಪ್ರಜ್ವಲ್ ರೇವಣ್ಣಗೂ ಸಂಬಂಧವಿಲ್ಲ, ನನಗೂ ರೇವಣ್ಣ ಕುಟುಂಬಕ್ಕೂ ಸಂಬಂಧವಿಲ್ಲ. ಅವರ ಕುಟುಂಬವೇ ಬೇರೆ, ನಮ್ಮ ಕುಟುಂಬವೇ ಬೇರೆ ಎಂದು ಹೇಳಿದ್ದರು. ಈಗ ನಿಮ್ಮ ಮಾತು ಎಲ್ಲಿ ಹೋಯ್ತು? ನೀವು ಒಂದಾಗಿಯೇ ಇರಿ. ನಿಮ್ಮನ್ನು ಬೇರೆ ಮಾಡುವ ಉದ್ದೇಶ ನನ್ನದಲ್ಲ. ಆದರೆ ನಿಮ್ಮ ಮಾತು ಕಾಲಕ್ಕೆ ತಕ್ಕಂತೆ ಬದಲಾಗದಿರಲಿ ಎಂದು ಡಿ.ಕೆ.ಶಿವಕುಮಾರ್ ಕಾಲೆಳೆದರು.

ಮಿಸ್ಟರ್ ವಿಜಯೇಂದ್ರ, ನಿಮ್ಮ ತಂದೆ ಕಣ್ಣೀರಾಕುತ್ತಾ ರಾಜೀನಾಮೆ ಕೊಟ್ಟಿದ್ದೇಕೆ?

ರಾಮನಗರ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನನ್ನನ್ನು ಭ್ರಷ್ಟಾಚಾರದ ಪಿತಾಮಹ ಎಂದು ಕರೆದಿದ್ದಾರೆ. ಮಿಸ್ಟರ್ ವಿಜಯೇಂದ್ರ, ನಿಮ್ಮ ತಂದೆ ಏನು ತಪ್ಪು ಮಾಡಿದ್ದರು? ಅವರು ವಿಧಾನಸೌಧದಲ್ಲಿ ಕಣ್ಣೀರು ಹಾಕುತ್ತಾ ರಾಜೀನಾಮೆ ನೀಡಿದ್ದು ಏಕೆ? ಈ ಬಗ್ಗೆ ನೀವು ಉತ್ತರ ನೀಡಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೇಳಿದರು.

ಈ ಹಿಂದೆ ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಜೈಲಿಗೆ ಹೋಗಿದ್ದೇಕೆ? ಯಡಿಯೂರಪ್ಪ ಸಿಎಂ ಆಗಿದ್ದಾಗ ಅವರ ವಿಚಾರಣೆಗೆ ರಾಜ್ಯಪಾಲರು ಅನುಮತಿ ನೀಡಿದ್ದೇಕೆ? ವಿಜಯೇಂದ್ರ ಪಾದಯಾತ್ರೆ ಮಾಡುವ ಬದಲು, ಯಡಿಯೂರಪ್ಪ ಅವರು ಜೈಲಿಗೆ ಹೋಗಲು ಜೆಡಿಎಸ್ ಕಾರಣವಾಗಿದ್ದರ ಬಗ್ಗೆಯೂ ಉತ್ತರ ನೀಡಬೇಕು ಎಂದು ಸವಾಲೆಸೆದರು.ಗೌಡರ ಕುಟುಂಬದ ಭೂ ಕಬಳಿಕೆ ಬಗ್ಗೆ ಬಿಜೆಪಿ ಜಾಹೀರಾತು:

ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿಯವರು ‘ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಭೂ ಕಬಳಿಕೆಯ ಪಕ್ಷಿನೋಟ’ ಎಂದು ಪತ್ರಿಕೆಗಳಲ್ಲಿ ಜಾಹೀರಾತು ನೀಡಿದ್ದರು. ಮುಡಾದಲ್ಲಿ ಆ ಕುಟುಂಬ ಮಾಡಿದ ಅಕ್ರಮ ನಿವೇಶನಗಳ ಬಗ್ಗೆ ಕುಮಾರಸ್ವಾಮಿ ಅವರ ಅರ್ಜಿ ಸಮೇತ ಪ್ರಕಟಣೆ ಮಾಡಿದ್ದೀರಿ. ನಿಮ್ಮ ಪಕ್ಷ ನೀಡಿರುವ ಪ್ರಕಟಣೆ ಬಗ್ಗೆ ಚರ್ಚೆ ಮಾಡಿ. ಈ ಬಗ್ಗೆ ಯಡಿಯೂರಪ್ಪ, ಅಶೋಕಣ್ಣ, ಸಿ.ಟಿ ರವಿ ಉತ್ತರ ಕೊಡಿ ಎಂದು ಆಗ್ರಹಿಸಿದರು.

ಕುಮಾರಸ್ವಾಮಿ ಉತ್ತರಕ್ಕೆ ಕಾಯುತ್ತಿದ್ದೇನೆ: ಡಿಕೆಶಿ

ನನ್ನ ಪ್ರಶ್ನೆಗಳಿಗೆ ಉತ್ತರ ನೀಡುವುದಾಗಿ ಕುಮಾರಸ್ವಾಮಿ ಅವರೇ ಹೇಳಿದ್ದಾರೆ. ಅವರ ಉತ್ತರಕ್ಕಾಗಿ ಬಹಳ ನಮ್ರತೆಯಿಂದ ಕಾಯುತ್ತಿದ್ದೇನೆ. ಬಾಲಕೃಷ್ಣಗೌಡರ ಆಸ್ತಿಯಿಂದ ಆರಂಭಿಸಿ ಎಲ್ಲವನ್ನು ಹೇಳಲಿ. ಮೊದಲು ಆಸ್ತಿ ಎಷ್ಟಿತ್ತು, ಆನಂತರ ಎಷ್ಟಾಗಿದೆ, ಈಗ ಅದು ಎಷ್ಟಕ್ಕೆ ಏರಿಕೆಯಾಗಿದೆ ಹೇಳಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸವಾಲು ಹಾಕಿದರು.

ಬೆಂಗಳೂರಿನಲ್ಲೇ ನೂರಾರು ಎಕರೆ ಆಸ್ತಿ ಇರುವುದನ್ನು ಬಹಿರಂಗಪಡಿಸಲಿ. ಕನಕಪುರ ರಸ್ತೆ, ಕುಂಬಳಗೋಡು, ದೊಡ್ಡಗುಬ್ಬಿ, ಚಿಕ್ಕಗುಬ್ಬಿ, ನೆಲಮಂಗಲ, ಯಲಹಂಕ ಬಳಿ ಸೇರಿದಂತೆ ಎಲ್ಲೆಲ್ಲಿ ಎಷ್ಟಿದೆ. ಇದರಲ್ಲಿ ಎಷ್ಟು ದಾಖಲೆಗಳಿವೆ, ಎಷ್ಟು ಆಸ್ತಿಗಳ ದಾಖಲೆ ಇಲ್ಲ ಎಲ್ಲವನ್ನೂ ಹೇಳಲಿ ಎಂದು ತಿಳಿಸಿದರು.

ಕುಮಾರಸ್ವಾಮಿ ನಡೆಸುತ್ತಿರುವ ಗಣಿಗಾರಿಕೆ, ಲೋಕಾಯುಕ್ತ ತನಿಖೆ, ರಾಜ್ಯಪಾಲರ ಬಳಿ ಇರುವ ಫೈಲ್ ಬಗ್ಗೆ ನಾನು ಮಾತನಾಡುವುದಿಲ್ಲ. ಅವರ ಕುಟುಂಬದ ಆಸ್ತಿ ಹಾಗೂ ಅವುಗಳ ಹಿನ್ನೆಲೆ ಬಗ್ಗೆ ಮಾತ್ರ ಉತ್ತರ ಕೊಡಲಿ ಎಂದು ಶಿವಕುಮಾರ್ ಪ್ರಶ್ನಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

5000 ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ : ಲಕ್ಷ್ಮೀ
ನಾಯಿಗಳ ಮೇಲೂ ತೆರಿಗೆ ಹೇರಿಕೆಗೆ ಮುಂದಾದ ಸರ್ಕಾರ!