ಕನ್ನಡಪ್ರಭ ವಾರ್ತೆ ಹೊಸದುರ್ಗ
ಇಂದಿನ ಶಿಕ್ಷಣ ಕೇವಲ ಅಂಕಗಳಿಗೆ ಹುದ್ದೆಗಳಿಗೆ ಮಾತ್ರ ಸೀಮಿತವಾಗಿದ್ದು ನೈತಿಕತೆ ಕಣ್ಮರೆಯಾಗುತ್ತಿದೆ. ಎಲ್ಲಾ ಪೋಷಕರು ತಮ್ಮ ಮಕ್ಕಳು ಡಾಕ್ಟರ್, ಎಂಜಿನಿಯರ್ ಆಗಬೇಕು ಎನ್ನುತ್ತಾರೆ ಹೊರತು ಯಾರೂ ರೈತರಾಗಿರಿ, ಯೋಧರಾಗಿರಿ ಎನ್ನುವುದಿಲ್ಲ ಇದು ದೇಶದ ಅಭಿವೃದ್ಧಿಗೆ ಮಾರಕ ಎಂದು ಬಾಳೆಹೊನ್ನೂರಿನ ರಂಭಾಪುರಿ ಪೀಠದ ಡಾ.ಶ್ರೀ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ಪಟ್ಟಣದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಎಸ್.ನಿಜಲಿಂಗಪ್ಪ ಶೈಕ್ಷಣಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ವತಿಯಿಂದ ಸುಮಾರು 6 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲೆಗಳ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದ ದಿವ್ಯ ಸಾನ್ನಿದ್ಯ ವಹಿಸಿ ಅವರು ಮಾತನಾಡಿದರು. ಸರ್ಕಾರಗಳು ಶಿಕ್ಷಣ ನೀಡಲಾಗದ ಕಾಲದಲ್ಲಿ ಈ ನಾಡಿನಲ್ಲಿ ಶಿಕ್ಷಣ ಸಂಸ್ಥೆಗಳನ್ನು ತೆರೆದು ಜನರಿಗೆ ಶಿಕ್ಷಣ ನೀಡಿದ್ದು ವೀರಶೈವ ಮಠಗಳು. ವೀರಶೈವ ಪೀಠದ ಶಿಕ್ಷಣ ಸಂಸ್ಥೆಗಳು ರಾಜ್ಯದಾದ್ಯಂತ ಶಿಕ್ಷಣಕ್ಕೆ ಹೆಚ್ಚಿನ ಕೊಡುಗೆ ನೀಡಿವೆ. ಬೆಳಗಾವಿ ಪ್ರಾಂತ್ಯದಲ್ಲಿ ಕೆಎಲ್ಇ ವಿದ್ಯಾಸಂಸ್ಥೆ, ಬಳ್ಳಾರಿ ಭಾಗದಲ್ಲಿ ವೀರಶೈವ ವಿದ್ಯಾವರ್ಧಕ ಸಂಘ, ಬಾಗಲಕೋಟೆಯಲ್ಲಿ ಶ್ರೀ ಬಸವೇಶ್ವರ ವಿದ್ಯಾ ವರ್ಧಕ ಸಂಘ, ತುಮಕೂರಿನ ಸಿದ್ದಗಂಗಾ, ಸುತ್ತೂರು ಮಠ, ತರಳಬಾಳು ಮಠ, ರಂಭಾಪುರಿ ಪೀಠ ಸೇರಿದಂತೆ ಹಲವು ವೀರಶೈವ ಮಠಗಳು ಶಿಕ್ಷಣ ಕ್ಷೇತ್ರಕ್ಕೆ ಬಹುದೊಡ್ಡ ಕೊಡುಗೆ ನೀಡಿವೆ ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಹಾಗೂ ಈಗಿನ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಂಗಳೂರಿನ ಶ್ರೀ ರೇಣುಕಾಚಾರ್ಯ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಎಂದು ಹೇಳಿಕೊಳ್ಳಲು ಹೆಮ್ಮೆ ಎನಿಸುತ್ತದೆ. ಬೆಳೆಯುವಂತಹ ಮಕ್ಕಳಿಗೆ ಕಿರಿ ವಯಸ್ಸಿನಲ್ಲಿ ಕೊಡುವ ಸಂಸ್ಕಾರ, ಮತ್ತು ಸಂಸ್ಕಾರಯುತ ಬದುಕನ್ನು ಕಟ್ಟಿಕೊಳ್ಳಲು ಸಹಕಾರಿಯಾಗುತ್ತದೆ ಎಂದರು.ಸಾನ್ನಿಧ್ಯ ವಹಿಸಿದ್ದ ನೊಣವಿನಕೆರೆ ಕಾಡ ಸಿದ್ದೇಶ್ವರ ಮಠದ ಡಾ.ಶ್ರೀ.ಕರಿವೃಷಭ ರಾಜ ದೇಶೀಕೇಂದ್ರ ಸ್ವಾಮೀಜಿ ಮಾತನಾಡಿ, ಬಡವರ, ರೈತರ, ಕೂಲಿ ಕಾರ್ಮಿಕರ ಮಕ್ಕಳಿಗೆ ಶಿಕ್ಷಣ ಸಂಸ್ಕಾರ ನೀಡುವ ನಿಟ್ಟಿನಲ್ಲಿ ನಿಜಲಿಂಗಪ್ಪ ಶಿಕ್ಷಣ ಸಂಸ್ಥೆ ಮುಂದಾಗಿದೆ. ಮುಂದೆ ಗುರಿ ಹಿಂದೆ ಗುರುಗಳು ಇದ್ದಾರೆ ಉತ್ತಮ ಸಂಸ್ಥೆಯನ್ನು ಕಟ್ಟಿ ಹೆಮ್ಮರವಾಗಿ ಬೆಳೆದಿದೆ ಎಂದರು.
ಶಾಸಕ ಬಿ.ಜಿ.ಗೋವಿಂದಪ್ಪ ಮಾತನಾಡಿ, ಗ್ರಾಮೀಣ ಮಕ್ಕಳಿಗೆ ಪಠ್ಯ, ಅಂಕಗಳ ಜೊತೆಗೆ ಸಂಸ್ಕಾರ ಕಲಿಸುವ ನಿಟ್ಟಿನಲ್ಲಿ ನಿಜಲಿಂಗಪ್ಪ ಸಂಸ್ಥೆ ಮುಂದಾಗಿದೆ. ಇತ್ತೀಚಿಗೆ ಹಣ ಮಾಡುವ ಸಂಸ್ಥೆಗಳು ಹುಟ್ಟಿಕೊಳ್ಳುತ್ತಿರುವ ಈ ಕಾಲಘಟ್ಟದಲ್ಲಿ ಆಡಳಿತ ಮಂಡಳಿಯ ಉದಾರತೆಯಿಂದ ಈ ಸಂಸ್ಥೆ ಗ್ರಾಮೀಣ ಭಾಗದಲ್ಲಿ ಉತ್ತಮ ಕಾರ್ಯ ಮಾಡುತ್ತಿದೆ ಎಂದರು.ಸಂಸ್ಥೆಯ ಕಾರ್ಯದರ್ಶಿ ಕೆ.ಎಸ್.ಕಲ್ಮಠ್ ಪ್ರಾಸ್ತಾವಿಕ ಮಾತನಾಡಿ, ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಂಸ್ಕಾರ, ಸಂಸ್ಕೃತಿ ಕಲಿಸುವ ಸಲುವಾಗಿ ಈ ಸಂಸ್ಥೆಯನ್ನು ಕಟ್ಟಲಾಗಿದೆ. ಈ ಸಂಸ್ಥೆಯನ್ನು ಕಟ್ಟಲು ರಂಭಾಪುರಿ ಶ್ರೀಗಳ ಆಶೀರ್ವಾದ ಆಡಳಿತ ಮಂಡಳಿಯ ಸಹಕಾರದಿಂದ ಈ ಸಂಸ್ಥೆ ಅಭಿವೃದ್ಧಿ ಹೊಂದಲು ಸಹಕಾರಿಯಾಗಿದೆ. ಸಂಸ್ಥೆ ಕಟ್ಟಲು ದಿವಂಗತ ಹಾಲಪ್ಪ ನವರು ಹಾಗೂ ತಿಪ್ಪೇಸ್ವಾಮಿ ಸೇರಿದಂತೆ ಸಮಾನ ಮನಸ್ಕರ ಸಹಕಾರವನ್ನು ಸ್ಮರಿಸಲೇಬೇಕಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಂ.ಶಿವಲಿಂಗಪ್ಪ ಅಧ್ಯಕ್ಷತೆ ವಹಿಸಿದ್ದರು. ಪದವಿ ಪೂರ್ವ ಕಾಲೇಜುಗಳ ನೂತನ ಕಟ್ಟಡವನ್ನು ಶಾಸಕ ಬಿ.ಜಿ.ಗೋವಿಂದಪ್ಪ ಉದ್ಘಾಟಿಸಿದರು. ಪ್ರೌಢ ಶಾಲೆಗಳ ನೂತನ ಕಟ್ಟಡವನ್ನು ಹರಪನಹಳ್ಳಿ ಶಾಸಕಿ ಲತಾ ಮಲ್ಲಿಕಾರ್ಜುನ್ ಉದ್ಘಾಟಿಸಿದರು.ಇದೆ ವೇಳೆ ಸೀತಾ ಬ್ಯಾಂಕಿನ ಅಧ್ಯಕ್ಷ ಹಂಜಿ ಶಿವಸ್ವಾಮಿ, ನಿಜಲಿಂಗಪ್ಪ ಶಿಕ್ಷಣ ಸಂಸ್ಥೆಯ ಧಮದರ್ಶೀಗಳಾದ ನೀಲಕಂಠಯ್ಯ, ಪಾರ್ವತಮ್ಮ ಹಾಲಪ್ಪ, ಪ್ರಕಾಶ್ ಮೂರ್ತಿ, ಗುರುಒಪ್ಪತ್ತಿಸ್ವಾಮಿ ಬ್ಯಾಂಕಿನ ಮಾಜಿ ಅಧ್ಯಕ್ಷ ಸಿದ್ದರಾಮೇಶ್ ಗುರುರಕ್ಷೆ ಸ್ವೀಕರಿಸಿದರು. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಪುರಸಭಾ ಅಧ್ಯಕ್ಷೆ ರಾಜೇಶ್ವರಿ, ಕೆ.ಎಸ್.ಪುಟ್ಟರಾಜು, ಮಲ್ಲಿಕಾರ್ಜುನಪ್ಪ, ಪ್ರದೀಪ್ಕುಮಾರ್, ಆರ್.ಹನುಮಂತಪ್ಪ, ಗುರುಸ್ವಾಮಿ, ಹೆಬ್ಬಳ್ಳಿ ಮಲ್ಲಿಕಾರ್ಜುನ್, ತಹಸೀಲ್ದಾರ್ ತಿರುಪತಿ ಪಾಟೀಲ್, ಡಿಡಿಪಿಐ ಮಂಜುನಾಥ್, ಬಿಇಒ ಸಯ್ಯದ್ ಮೋಸೀನ್ ಭಾಗವಹಿಸಿದ್ದರು.