ಕಾಡಾನೆ ದಾಳಿ: ಕಾರ್ಮಿಕ ಸಾವು, ಮತ್ತೋರ್ವ ಗಂಭೀರ

KannadaprabhaNewsNetwork |  
Published : Aug 18, 2026, 02:45 AM IST
ಸಾರ್ವಜನಿಕರು ಸಿದ್ದಾಪುರದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.  | Kannada Prabha

ಸಾರಾಂಶ

ಸಿದ್ದಾಪುರ ಸಮೀಪದ ಶಿಲ್ಪಿ ಎಸ್ಟೇಟ್‌ನಲ್ಲಿ ಸೋಮವಾರ ಕಾಡಾನೆ ದಾಳಿ ನಡೆಸಿದ್ದು, ಪಶ್ಚಿಮ ಬಂಗಾಳ ಮೂಲದ ಕಾರ್ಮಿಕ ಗೋಪಾಲನ್ ಭವೂರಿ (45) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬ ಕಾರ್ಮಿಕ ಜಾದವ್ ಭವೂರಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೊಡಗಿನ ಸಿದ್ದಾಪುರ ಸಮೀಪ ಎಸ್ಟೇಟ್‌ನಲ್ಲಿ ದುರ್ಘಟನೆ । ರಸ್ತೆ ತಡೆದು ಸಾರ್ವಜನಿಕರಿಂದ ಪ್ರತಿಭಟನೆ

ಸಿದ್ದಾಪುರ ಸಮೀಪದ ಶಿಲ್ಪಿ ಎಸ್ಟೇಟ್‌ನಲ್ಲಿ ಸೋಮವಾರ ಕಾಡಾನೆ ದಾಳಿ ನಡೆಸಿದ್ದು, ಪಶ್ಚಿಮ ಬಂಗಾಳ ಮೂಲದ ಕಾರ್ಮಿಕ ಗೋಪಾಲನ್ ಭವೂರಿ (45) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬ ಕಾರ್ಮಿಕ ಜಾದವ್ ಭವೂರಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಎಸ್ಟೇಟ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕಾರ್ಮಿಕರಿಬ್ಬರ ಮೇಲೂ ಕಾಡಾನೆ ದಾಳಿ ನಡೆಸಿದೆ. ಪೊಲೀಸರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಸಾರ್ವಜನಿಕರ ಪ್ರತಿಭಟನೆ:

ಘಟನೆ ಖಂಡಿಸಿ ಸಾರ್ವಜನಿಕರು ಸಿದ್ದಾಪುರದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಅರಣ್ಯ ಇಲಾಖೆ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಕಾಡಾನೆಗಳಿರುವ ಪ್ರದೇಶಗಳನ್ನು ಗುರುತಿಸಿ, ಮುನ್ನೆಚ್ಚರಿಕೆ ಕ್ರಮ ಕೈಗೊಂಡ ಬಳಿಕವೇ ಕಾರ್ಮಿಕರನ್ನು ಕೆಲಸಕ್ಕೆ ಬಿಡಬೇಕು ಎಂದು ಒತ್ತಾಯಿಸಿದರು.ಕಾಡಾನೆ ದಾಳಿಯಿಂದ ಮೃತಪಟ್ಟ ಕಾರ್ಮಿಕನ ಮೃತದೇಹವನ್ನು ಮಡಿಕೇರಿಗೆ ಕೊಂಡೊಯ್ದಿರುವುದಕ್ಕೂ ಪ್ರತಿಭಟನಾಕಾರರು ಆಕ್ಷೇಪ ವ್ಯಕ್ತಪಡಿಸಿದರು. ಸಿದ್ದಾಪುರದಲ್ಲೇ ಮರಣೋತ್ತರ ಪರೀಕ್ಷೆ ನಡೆಸಲು ಸಾಧ್ಯವಿದ್ದರೂ ಮೃತದೇಹವನ್ನು ಮಡಿಕೇರಿಗೆ ಏಕೆ ಕೊಂಡೊಯ್ಯಲಾಗಿದೆ ಎಂದು ಪ್ರಶ್ನಿಸಿದರು.ತೋಟದ ಮಾಲೀಕರೊಂದಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಎನ್.ಡಿ. ಕುಟ್ಟಪ್ಪ ಆರೋಪಿಸಿದರು. ಪಿ.ಆರ್. ಭರತ್ ಮಾತನಾಡಿ, ವನ್ಯಜೀವಿಗಳ ಹಾವಳಿ ನಿಯಂತ್ರಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಫಲವಾಗಿವೆ ಎಂದು ದೂರಿದ ಅವರು

ಕೊಡಗಿನಲ್ಲಿ ನಿರಂತರವಾಗಿ ಕಾಡಾನೆ ದಾಳಿ ನಡೆಯುತ್ತಿದ್ದರೂ ಅರಣ್ಯ ಇಲಾಖೆ ಕಾಟಾಚಾರಕ್ಕೆ ಒಂದು ತೋಟದಿಂದ ಮತ್ತೊಂದು ತೋಟಕ್ಕೆ ಆನೆಗಳನ್ನು ಅಟ್ಟಿಸುವ ಕೆಲಸ ಮಾಡುತ್ತಿದೆ. ಇದರಿಂದ ಸಮಸ್ಯೆ ಮತ್ತಷ್ಟು ಉಲ್ಬಣಿಸುತ್ತಿದೆ ಎಂದು ಆರೋಪಿಸಿದರು.

ರಸ್ತೆ ತಡೆ ನಡೆಸಿರುವುದು ಸಾಂಕೇತಿಕ ಪ್ರತಿಭಟನೆಯಾಗಿದ್ದು, ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯದಿದ್ದರೆ ಮುಂದಿನ ದಿನಗಳಲ್ಲಿ ಸಿದ್ದಾಪುರ ಬಂದ್ ಕರೆ ನೀಡಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಿದ್ದಾಪುರ ಪೋಲಿಸ್ ಠಾಣಾಧಿಕಾರಿ ಮಂಜುನಾಥ್ ಸ್ಥಳದಲ್ಲಿದ್ದು, ಪ್ರತಿಭಟನಕಾರರ ಮನವೊಲಿಸಿ ಪ್ರತಿಭಟನೆ ನಿಲ್ಲಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹೆಸರಿನಲ್ಲಿ ನಕಲಿ ವೀಡಿಯೋ: ಪೊಲೀಸ್ ದೂರು
ಸುಂಟಿಕೊಪ್ಪ: ಕಾಡಾನೆ ಹಾವಳಿ, ಬೆಳೆ ನಷ್ಟ