ಕನ್ನಡಪ್ರಭ ವಾರ್ತೆ ಪೊನ್ನಂಪೇಟೆ
ಗ್ರಾಮದಂಚಿನ ಕಾಡು ಮತ್ತು ಪಾಳುಬಿಟ್ಟ ಕಾಫಿ ತೋಟಗಳಿಂದ ಬರುತ್ತಿರುವ ಕಾಡಾನೆಗಳು ಈ ಭಾಗದಲ್ಲಿ ರೈತರ ಬೆಳೆಗಳ ಮೇಲೆ ನಿರಂತರ ದಾಳಿ ನಡೆಸುತ್ತಿವೆ. ಇದರಿಂದ ಬೆಳೆಗಾರರು ತೀವ್ರವಾಗಿ ಕಂಗಾಲಾಗಿದ್ದಾರೆ. ಆನೆ ಹಾವಳಿ ತಡೆಗೆ ಹಲವು ಬಾರಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದ್ದರೂ, ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯ ಬೆಳಗಾರರು ಆರೋಪಿಸಿದ್ದಾರೆ.
ಒಂದೆಡೆ ಬೆಳಗಾರರು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಇನ್ನಿಲ್ಲದ ಪ್ರಯತ್ನಗಳ ಮೂಲಕ ಹೋರಾಡುತ್ತಿದ್ದರೆ, ಮತ್ತೊಂದೆಡೆ ಕಾಡುಪ್ರಾಣಿಗಳಿಂದ ತಮ್ಮ ಬೆಳೆ ರಕ್ಷಿಸಲು ಪ್ರತಿದಿನ ತಮ್ಮ ಪ್ರಾಣದ ಹಂಗನ್ನು ತೊರೆದು ಕಾವಲು ಕಾಯಬೇಕಾದ ಪರಿಸ್ಥಿತಿ ನಿರ್ಮಾಣಗೊಂಡಿದೆ. ವರ್ಷವಿಡೀ ಕಷ್ಟಪಟ್ಟು ದುಡಿದ ಫಲವಾಗಿ ದೊರೆಯುವ ವಿವಿಧ ಬೆಳೆಗಳ ಫಸಲನ್ನು ಉಳಿಸಿಕೊಳ್ಳುವುದೇ ಬೆಳೆಗಾರರಿಗೆ ದೊಡ್ಡ ಸವಾಲಾಗಿದೆ. ಇದಕ್ಕೆ ಕಾಡಾನೆಗಳ ನಿರಂತರ ಹಾವಳಿಯೇ ಪ್ರಮುಖ ಕಾರಣ ಎಂದು ಹೊಸಕೋಟೆಯ ತೋಟ ಮಾಲೀಕ ಡಿ. ಎಚ್. ಸೂಫಿ ಹಾಜಿ ಆಪಾದಿಸಿದ್ದಾರೆ.ನಲವತ್ತೋಕ್ಲು ಸಮೀಪದ ಹೊಸಕೋಟೆ ಮತ್ತು ಬಿಳುಗುಂದ ಗ್ರಾಮ ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ಕಳೆದ ಹಲವು ತಿಂಗಳುಗಳಿಂದ ಕಾಡಾನೆಗಳ ಹಾವಳಿ ಮಿತಿಮೀರಿದೆ. 8-12 ಆನೆಗಳಿರುವ ಹಿಂಡು ಸುತ್ತಮುತ್ತಲಿನ ಪಾಳುಬಿಟ್ಟ ತೋಟಗಳಲ್ಲಿ ಹಗಲಿನಲ್ಲಿ ಬೀಡುಬಿಟ್ಟು ಕತ್ತಲೆಯಾಗುತ್ತಿದ್ದಂತೆ ತೋಟಗಳಿಗೆ ಲಗ್ಗೆ ಇಡುತ್ತಿದೆ. ಇಲ್ಲಿನ ಬೆಳಗಾರರ ವಿವಿಧ ಬೆಳೆಗಳು ಫಸಲಿಗೆ ಬರುತ್ತಿದ್ದಂತೆಯೇ ಕಾಡಾನೆಗಳ ಹಾವಳಿ ಹೆಚ್ಚತೊಡಗುತ್ತದೆ. ರಾತ್ರಿ ಸಮಯದಲ್ಲಿ ಕಾಡಾನೆಗಳಿಗೆ ತೋಟಗಳಲ್ಲಿ ನುಗ್ಗಿ ದಾಳಿ ಮಾಡಿ ಫಸಲನ್ನು ನಾಶ ಮಾಡುತ್ತಿರುವುದರಿಂದ ಕೈಗೆ ಬಂದ ತುತ್ತು ಬಾಯಿಗೆ ಬಾರದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ದೂರಿದ್ದಾರೆ.ಆನೆಗಳು ತೋಟಗಳಿಗೆ ನುಗ್ಗದಂತೆ ಎಷ್ಟೇ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡರೂ ಕಾಡಾನೆಗಳ ಹಾವಳಿ ಮಾತ್ರ ಕಡಿಮೆಯಾಗುತ್ತಿಲ್ಲ. ಕಾಡಾನೆಗಳ ಹಾವಳಿ ದಿನೇ ದಿನೇ ಹೆಚ್ಚುತಿದ್ದರೂ ಇಲ್ಲಿನ ಬೆಳೆಗಾರರ ಸಮಸ್ಯೆಯನ್ನು ಯಾರೂ ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಕಾಫಿ ಫಸಲೂ ಮಣ್ಣುಪಾಲು:
ಕಾಡಾನೆಗಳು ಕಾಫಿ ತೋಟಗಳಲ್ಲಿ ದಾಳಿ ನಡೆಸುವುದರಿಂದ ಫಸಲಿರುವ ಕಾಫಿ ಗಿಡದ ರೆಕ್ಕೆಗಳಿಗೆ ತೀವ್ರ ಹಾನಿಯಾಗುತ್ತಿದೆ. ಇದರಿಂದ ಕೊಯ್ಲಿಗೆ ಸಿದ್ಧಗೊಳ್ಳುತ್ತಿರುವ ಕಾಫಿ ನೆಲ ನೆಲಕ್ಕುರುಳುತ್ತಿದೆ. ತೋಟದಲ್ಲಿ ಆನೆಗಳು ಮನಸೋ ಇಚ್ಛೆ ಸಂಚರಿಸುವುದರಿಂದ ಇತ್ತೀಚಿಗೆ ನೆಟ್ಟಿರುವ ವಿವಿಧ ಗಿಡಗಳು ನಾಶಗೊಂಡು ನೆಲಕಚ್ಚಿದೆ. ಕಾಡಾನೆಗಳ ನಿರಂತರ ಹಾವಳಿ ತೋಟ ಕೆಲಸಗಳ ಮೇಲು ಪರಿಣಾಮ ಬೀರಿದ್ದು, ಕಾರ್ಮಿಕರು ಪ್ರಾಣಭಯದಿಂದ ತೋಟ ಕೆಲಸಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಇದೆಲ್ಲವೂ ಬೆಳಗಾರರ ಆರ್ಥಿಕ ವ್ಯವಸ್ಥೆಗೆ ತೀವ್ರ ದಕ್ಕೆ ಉಂಟು ಮಾಡುತ್ತಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.ಕಾಡಾನೆಗಳ ದಾಳಿಯಿಂದ ಬೆಳೆ ನಷ್ಟ ಅನುಭವಿಸುತ್ತಿರುವ ಬೆಳೆಗಾರರಿಗೆ ಕೂಡಲೇ ಸೂಕ್ತ ಪರಿಹಾರ ನೀಡಬೇಕು. ಕಾಡಾನೆಗಳ ನಿರಂತರ ಉಪಟಳವನ್ನು ನಿಯಂತ್ರಿಸಲು ಅರಣ್ಯ ಇಲಾಖೆ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದು ಸೂಫಿ ಹಾಜಿ ಗ್ರಾಮದ ಬೆಳೆಗಾರರ ಪರವಾಗಿ ಅರಣ್ಯ ಇಲಾಖೆಯನ್ನು ಆಗ್ರಹಿಸಿದ್ದಾರೆ.