ಕನ್ನಡಪ್ರಭ ವಾರ್ತೆ ಬೇಲೂರು ತಾಲೂಕಿನ ಕೋಗೋಡು - ಬೊಮ್ಮೇನಹಳ್ಳಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಬೆಳಗಿನ ಜಾವವೇ ಕಾಡಾನೆಗಳ ಹಿಂಡು ಕಾಣಿಸಿಕೊಂಡಿದ್ದು, ಯಾವುದೇ ಭಯವಿಲ್ಲದೆ ರಾಜ ಗಾಂಭೀರ್ಯದಿಂದ ಹೆಜ್ಜೆಹಾಕುತ್ತಾ ಮುಖ್ಯ ರಸ್ತೆಯಲ್ಲಿ ಓಡಾಡಿ ಕೆಲಕಾಲ ಗ್ರಾಮಸ್ಥರನ್ನು ಗಾಬರಿಗೊಳಿಸಿದ ಘಟನೆ ನಡೆದಿದೆ.ಬುಧವಾರ ಬೆಳಿಗ್ಗೆ ಮುಖ್ಯ ರಸ್ತೆಗೆ ಬಂದ ಕಾಡಾನೆಗಳ ಹಿಂಡು ಓಡಾಟ ನಡೆಸಿದ್ದರಿಂದ ಸ್ಥಳೀಯ ವಾಹನ ಸವಾರರು ಹಾಗೂ ಗ್ರಾಮಸ್ಥರು ತೀವ್ರ ಭೀತಿಗೊಳಗಾಗಿದ್ದರು. ವಿಷಯ ತಿಳಿದ ತಕ್ಷಣವೇ ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಸಿಬ್ಬಂದಿ, ಕಾರ್ಯಾಚರಣೆ ನಡೆಸಿ ಆನೆಗಳನ್ನು ಸುರಕ್ಷಿತವಾಗಿ ಕಾಡಿನತ್ತ ಅಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆ ಕುರಿತು ಶಿರಗೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕಿ ಲಕ್ಷೀ ನಾಗರಾಜು ಮಾತನಾಡಿ, "ಇತ್ತೀಚಿನ ದಿನಗಳಲ್ಲಿ ನಮ್ಮ ಗ್ರಾಮದಲ್ಲಿ ಕಾಡಾನೆಗಳ ಉಪಟಳ ಮಿತಿಮೀರಿದ್ದು, ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಪ್ರತಿದಿನ ತೋಟಗಳಿಗೆ ಕೆಲಸಕ್ಕೆ ಹೋಗಲು ರೈತರು ಹಾಗೂ ಕೂಲಿ ಕಾರ್ಮಿಕರು ಭಯಪಡುವ ವಾತಾವರಣ ನಿರ್ಮಾಣವಾಗಿದೆ. ತೋಟಕ್ಕೆ ನುಗ್ಗುತ್ತಿದ್ದ ಆನೆಗಳು ಈಗ ಮನೆ ಮುಂದೆ ಓಡಾಡುತ್ತಿವೆ. ಇದೇ ಪರಿಸ್ಥಿತಿ ಮುಂದುವರಿದರೆ ಜನರು ಜೀವನ ಮಾಡುವುದಕ್ಕೆ ಕಷ್ಟವಾಗುತ್ತದೆ . ಈಗಾಗಲೇ ಕಾಡಾನೆ ಹಾವಳಿಯಿಂದ ಈ ಭಾಗದಲ್ಲಿ ಹಲವಾರು ಜನ ಮತ್ತು ರೈತರು ಮೃತಪಟ್ಟಿದ್ದಾರೆ. ಅರಣ್ಯ ಇಲಾಖೆ ತಕ್ಷಣವೇ ಸೂಕ್ತ ಭದ್ರತಾ ಕ್ರಮ ಕೈಗೊಂಡು ಕಾಡಾನೆಗಳನ್ನು ಬೇರೆಡೆಗೆ ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿದರು.ಕಳೆದ ಕೆಲವು ದಿನಗಳಿಂದ ಕಾಡಾನೆಗಳ ಹಿಂಡು ಜನನಿಬಿಡ ಪ್ರದೇಶ ಹಾಗೂ ಕೃಷಿ ಭೂಮಿಗೆ ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿ ಮಾಡುತ್ತಿವೆ. ಇದರಿಂದಾಗಿ ರೈತರು ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸುವಂತಾಗಿದೆ. ಅಲ್ಲದೆ, ಸಂಜೆ ವೇಳೆಗೆ ಸಾರ್ವಜನಿಕರು ಹಾಗೂ ಶಾಲಾ ಮಕ್ಕಳು ರಸ್ತೆಯಲ್ಲಿ ಸಂಚರಿಸಲು ಭಯಪಡುವ ವಾತಾವರಣ ನಿರ್ಮಾಣವಾಗಿದೆ.ಅರಣ್ಯ ಇಲಾಖೆಯು ಕೇವಲ ತಾತ್ಕಾಲಿಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇದು ಯಾವುದೇ ಪ್ರಯೋಜನ ನೀಡುತ್ತಿಲ್ಲ. ಆನೆ ಕಂದಕ ನಿರ್ಮಿಸುವುದು ಹಾಗೂ ಸೋಲಾರ್ ಬೇಲಿಗಳನ್ನು ಸರಿಯಾಗಿ ನಿರ್ವಹಣೆ ಮಾಡುಲು ಸಬ್ಸಿಡಿ ನೀಡುವ ಮೂಲಕ ಸಮಸ್ಯೆಗೆ ಶಾಶ್ವತ ಮುಕ್ತಿ ನೀಡಬೇಕು . ಮುಂದಿನ ದಿನಗಳಲ್ಲಿ ರೈತರಿಗೆ ಏನಾದರೂ ತೊಂದರೆಯಾದರೆ ಅದಕ್ಕೆ ಅರಣ್ಯ ಇಲಾಖೆ ಹಾಗೂ ಸರ್ಕಾರವೇ ನೇರ ಹೊಣೆಯಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.ಕಾಡಾನೆಗಳ ಹಾವಳಿಯಿಂದ ಮುಕ್ತಿ ನೀಡಲು ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಸಮಸ್ಯೆಗೆ ಶೀಘ್ರವೇ ಪರಿಹಾರ ಸಿಗದಿದ್ದರೆ ಮುಂಬರುವ ದಿನಗಳಲ್ಲಿ ಅರಣ್ಯ ಕಚೇರಿಯ ಮುಂಭಾಗದಲ್ಲಿ ಉಗ್ರ ಹೋರಾಟ ರೂಪಿಸುವುದಾಗಿ ಚಿಕ್ಕನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹರೀಶ್ ಹಾಗೂ ಮಾಜಿ ಸದಸ್ಯ ಸುನಿಲ್, ಗ್ರಾಮಸ್ಥರಾದ ಮಹೇಶ್ ಹಾಗೂ ಟೈಲರ್ ನಾಗೇಶ್ ಮತ್ತು ಕೋಗೋಡು, ಬೊಮ್ಮೇನಹಳ್ಳಿ, ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.
*ಹೇಳಿಕೆ
ತೋಟಕ್ಕೆ ನುಗ್ಗುತ್ತಿದ್ದ ಆನೆಗಳು ಈಗ ಮನೆ ಮುಂದೆ ಓಡಾಡುತ್ತಿವೆ. ಈಗಾಗಲೇ ಕಾಡಾನೆ ಹಾವಳಿಯಿಂದ ಈ ಭಾಗದಲ್ಲಿ ಹಲವಾರು ಜನ ಮತ್ತು ರೈತರು ಮೃತಪಟ್ಟಿದ್ದಾರೆ. ಅರಣ್ಯ ಇಲಾಖೆ ತಕ್ಷಣವೇ ಸೂಕ್ತ ಭದ್ರತಾ ಕ್ರಮ ಕೈಗೊಂಡು ಕಾಡಾನೆಗಳನ್ನು ಬೇರೆಡೆಗೆ ಸ್ಥಳಾಂತರಿಸಬೇಕು. ಲಕ್ಷ್ಮೀ ನಾಗರಾಜು, ಶಿರಗೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕಿ