ಬಜೆಟ್‌ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್‌ ಕೊಡುಗೆ: ಮೀನುಗಾರರ ರಕ್ಷಣೆಗೆ ಬರಲಿದೆ ಸಮುದ್ರ ಆ್ಯಂಬುಲೆನ್ಸ್‌

KannadaprabhaNewsNetwork | Updated : Feb 17 2024, 01:11 PM IST

ಈ ಬಜೆಟ್‌ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್‌ ಕೊಡುಗೆ ನೀಡಿರುವ ರಾಜ್ಯ ಸರ್ಕಾರ ಮುಂದಿನ ಮೂರು ವರ್ಷಗಳಲ್ಲಿ 3 ಸಾವಿರ ಕೋಟಿ ರು.ಗಳಲ್ಲಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸುವುದಾಗಿ ಘೋಷಿಸಿದೆ.

ಬೆಂಗಳೂರು: ಈ ಬಜೆಟ್‌ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್‌ ಕೊಡುಗೆ ನೀಡಿರುವ ರಾಜ್ಯ ಸರ್ಕಾರ ಮುಂದಿನ ಮೂರು ವರ್ಷಗಳಲ್ಲಿ 3 ಸಾವಿರ ಕೋಟಿ ರು.ಗಳಲ್ಲಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸುವುದಾಗಿ ಘೋಷಿಸಿದೆ.

ಹೊನ್ನಾವರ ತಾಲ್ಲೂಕಿನ ಮಂಕಿ ಅಥವಾ ಕಾಸರಕೋಡದಲ್ಲಿ ಮೀನುಗಾರಿಕೆ ಸಂಶೋಧನಾ ಕೇಂದ್ರ ಸ್ಥಾಪನೆ. ಭದ್ರಾವತಿಯಲ್ಲಿ ಅತ್ಯಾಧುನಿಕ ಮೀನು ಮಾರುಕಟ್ಟೆ ಸ್ಥಾಪನೆ.

ಆಕ್ವಾ ಪಾರ್ಕ್‌ಗಳ ಸ್ಥಾಪನೆ. ಭಟ್ಕಳ ತಾಲ್ಲೂಕಿನ ಮುರುಡೇಶ್ವರದಲ್ಲಿ ಸುಸಜ್ಜಿತ ಮೀನುಗಾರಿಕೆ ಹೊರ ಬಂದರು ನಿರ್ಮಾಣ. ವಿಜಯಪುರದ ಆಲಮಟ್ಟಿಯಲ್ಲಿ ಒಳನಾಡು ಮೀನುಗಾರಿಕೆ ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆ ಮಾಡುವುದಾಗಿ ಹೇಳಿದೆ. 

ಪರಿಹಾರ ನಿಧಿ ಹೆಚ್ಚಳ: ಮತ್ಯ್ಯ ಆಶಾಕಿರಣ ಯೋಜನೆಯಡಿ ಮೀನುಗಾರಿಕೆ ನಿಷೇಧದ ಅವಧಿಯಲ್ಲಿ ಕರಾವಳಿಯ ಮೀನುಗಾರರಿಗೆ ನೀಡುತ್ತಿರುವ ಪರಿಹಾರ ಮೊತ್ತದ ರಾಜ್ಯದ ಪಾಲನ್ನು 1,500 ರು.ಗಳಿಂದ 3 ಸಾವಿರ ರು.ಗಳಿಗೆ ಹೆಚ್ಚಿಸಲಾಗುವುದು. 

ಸಮುದ್ರ ಮೀನುಗಾರಿಕೆಗೆ ತೆರಳಿದಾಗ ಅಪಘಾತ ಅಥವಾ ಅನಾರೋಗ್ಯಕ್ಕೆ ಒಳಗಾಗುವ ಮೀನುಗಾರರನ್ನು ತ್ವರಿತವಾಗಿ ದಡಕ್ಕೆ ತರಲು ರಾಜ್ಯದಲ್ಲಿ ಪ್ರಪ್ರಥಮ ಸಮುದ್ರ ಆ್ಯಂಬುಲೆನ್ಸ್ ಅನ್ನು 7 ಕೋಟಿ ರು.ವೆಚ್ಚದಲ್ಲಿ ಖರೀದಿಸುವುದಾಗಿ ತಿಳಿಸಿದೆ.

2024-25ನೇ ಸಾಲಿನಲ್ಲಿ 10 ಸಾವಿರ ವಸತಿ ರಹಿತ ಮೀನುಗಾರರಿಗೆ ರಾಜ್ಯ ಸರ್ಕಾರದ ವಿವಿಧ ವಸತಿ ಯೋಜನೆಗಳಡಿಯಲ್ಲಿ ಮನೆಗಳನ್ನು ನಿರ್ಮಿಸಲು ಸಹಾಯಧನ ನೀಡಲಾಗುವುದು.

ರಾಜ್ಯದಲ್ಲಿ 16 ಮೀನು ಮರಿ ಉತ್ಪಾದನಾ ಕೇಂದ್ರಗಳ ಉನ್ನತೀಕರಣವನ್ನು ನಬಾರ್ಡ್‌ ಸಹಯೋಗದೊಂದಿಗೆ 20 ಕೋಟಿ ರು.ವೆಚ್ಚದಲ್ಲಿ ಕೈಗೊಳ್ಳಲಾಗುವುದು. 

ಚಿತ್ರದುರ್ಗ, ಹೊಳಲ್ಕೆರೆ ಮತ್ತು ಹೊಸದುರ್ಗ ತಾಲೂಕುಗಳ ಗಣಿಬಾಧಿತ ಪ್ರದೇಶದಲ್ಲಿ ಮೀನುಗಾರಿಕೆಯನ್ನು ಕೈಗೊಳ್ಳಲು 6 ಕೋಟಿ ರು.ವೆಚ್ಚ ಮಾಡಲಾಗುವುದು ಎಂದು ತಿಳಿಸಿದೆ.