ಕನ್ನಡಪ್ರಭ ವಾರ್ತೆ ತುಮಕೂರು
ಸ್ಮಾರ್ಟ್ ಸಿಟಿ ಸಹಯೋಗದಲ್ಲಿ ತುಮಕೂರು ಜಿಲ್ಲಾ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸರ್ಕಾರ ಆಡಳಿತ ಚುಕ್ಕಾಣಿ ಹಿಡಿದ 8 ತಿಂಗಳಲ್ಲಿ ಜಾರಿ ಮಾಡಲಾದ ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಯುವನಿಧಿ ಸೇರಿದಂತೆ 5 ಯೋಜನೆಗಳಿಗೆ ಒದಗಿಸಲು ಸರ್ಕಾರದಲ್ಲಿ ಹಣವಿಲ್ಲ. ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎನ್ನುವವರಿಗೆ ಇಂದು ಜಿಲ್ಲೆಯಲ್ಲಿ ಆಯೋಜಿಸಿರುವ ಇಂತಹ ಕಾರ್ಯಕ್ರಮಗಳೇ ಉತ್ತರವಾಗಲಿದೆ ಎಂದು ತಿಳಿಸಿದರು.ಗ್ಯಾರಂಟಿ ಯೋಜನೆಗಳ ಜಾರಿಯಿಂದ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳು ನಿಂತಿಲ್ಲ. ಹೊಸ ಅಭಿವೃದ್ಧಿ ಕಾರ್ಯಗಳನ್ನೂ ಸಹ ಕೈಗೆತ್ತಿಕೊಳ್ಳಲಾಗಿದೆ. ಕೇಂದ್ರದ ಬೆಲೆ ಏರಿಕೆಯಿಂದಾಗಿ ಸೃಷ್ಟಿಯಾಗಿದ್ದ ಸಂಕಷ್ಟವನ್ನು ಕಡಿಮೆ ಮಾಡುವ ಸಲುವಾಗಿ ಗ್ಯಾರಂಟಿ ಯೋಜನೆಗಳಿಂದ ನಾಡಿನ ಜನರ ಕೊಳ್ಳುವ ಶಕ್ತಿ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಭೀಕರ ಬರಗಾಲ ಬಂದಿದ್ದರೂ ಕೇಂದ್ರ ಸರ್ಕಾರ ಇದುವರೆಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಡಿ ರಾಜ್ಯದ ಪಾಲಿನ ಒಂದೇ ಒಂದು ರೂಪಾಯಿ ಬರ ಪರಿಹಾರವನ್ನೂ ನೀಡದೆ ರೈತರ ಸಂಕಷ್ಟಕ್ಕೆ ಸ್ಪಂದಿಸಿಲ್ಲ. ಆದರೆ ರಾಜ್ಯ ಸರ್ಕಾರವು ಐದಕ್ಕೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದರೊಂದಿಗೆ ಇನ್ಪುಟ್ ಸಬ್ಸಿಡಿಯಡಿ ಜಿಲ್ಲೆಯ 1.61 ಲಕ್ಷ ರೈತರು ಸೇರಿದಂತೆ ರಾಜ್ಯದ 29.29 ಲಕ್ಷ ರೈತರ ಖಾತೆಗೆ 2 ಸಾವಿರ ರು.ಗಳಂತೆ ಒಟ್ಟು 55 ಕೋಟಿ ರು.ಗಳ ಬರ ಪರಿಹಾರದ ಮೊದಲ ಕಂತನ್ನು ಜಮೆ ಮಾಡಿದೆ ಎಂದು ವಿವರಿಸಿದರು.
ನಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ದೇವರಾಜ ಅರಸು ಬಸ್ ನಿಲ್ದಾಣ ಎಂದು ನಾಮಕರಣ ಮಾಡಲಾಗಿದೆ. ಇನ್ನು ಮುಂದೆ ದೇವರಾಜ ಅರಸು ಅವರ ಹೆಸರಲ್ಲಿ ಬಸ್ ನಿಲ್ದಾಣ ಕಾರ್ಯನಿರ್ವಹಿಸಲಿದೆ ಎಂದರು.
ಜಿಲ್ಲೆಯ ಜನರ ಆಶೀರ್ವಾದದಿಂದ ಎರಡನೆ ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ಅಧಿಕಾರಕ್ಕೆ ಬಂದ ನಂತರ ಎಲ್ಲಾ ಜನಾಂಗಕ್ಕೂ ಅನುಕೂಲ ಮಾಡಲಾಗಿದೆ. ಕೊಟ್ಟ ಮಾತಿನಂತೆ ನಡೆದುಕೊಳ್ಳಲಾಗಿದೆ ಎಂದರಲ್ಲದೆ, ಗೃಹ ಸಚಿವರು ಮನವಿ ಮಾಡಿರುವ ಎಲ್ಲ ಬೇಡಿಕೆಗಳನ್ನೂ ಈಡೇರಿಸುತ್ತೇನೆಂದು ಭರವಸೆ ನೀಡಿದರು.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿ, ಕಲ್ಪತರು ನಾಡು, ಧಾರ್ಮಿಕ ಕ್ಷೇತ್ರವೆಂದೆನಿಸಿಕೊಂಡಿರುವ ತುಮಕೂರು ಜಿಲ್ಲೆಯು ಎರಡನೇ ಬೆಂಗಳೂರಾಗಲಿದೆ. ಮುಂದಿನ ೫೦ವರ್ಷಕ್ಕೆ ತುಮಕೂರು ಜಿಲ್ಲೆಯನ್ನು ಹೊಸ ಬೆಂಗಳೂರನ್ನಾಗಿ ನಿರ್ಮಿಸಲು ತಯಾರಿ ಮಾಡಿಕೊಳ್ಳಬೇಕೆಂಬ ಆಶಾಭಾವನೆ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ಹಾದು ಹೋಗುವ ಬೃಹತ್ ನೀರಾವರಿ ಯೋಜನೆಗಳಾದ ಎತ್ತಿನಹೊಳೆ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗಳನ್ನು ಪೂರ್ಣಗೊಳಿಸಲು ಸರ್ಕಾರದಿಂದ ಅಗತ್ಯ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು.
ಸ್ಮಾರ್ಟ್ ಸಿಟಿ ಯೋಜನೆಯಡಿ ತುಮಕೂರು ನಗರದಲ್ಲಿ 35 ವಾರ್ಡ್ಗಳಲ್ಲಿ 6 ವಾರ್ಡ್ಗಳಿಗೆ ಸ್ಮಾರ್ಟ್ ಸಿಟಿ ಹಣ ಬಂದಿದೆ. ಉಳಿದ ವಾರ್ಡ್ಗಳು ಅಭಿವೃದ್ಧಿಯಾಗಿಲ್ಲ. ಹಾಗಾಗಿ ಈ ಆಯವ್ಯಯದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ 500 ಕೋಟಿ ರು.ಗಳ ಅನುದಾನ ಒದಗಿಸಬೇಕೆಂದರಲ್ಲದೆ ಬೆಂಗಳೂರಿಗೆ ಪರ್ಯಾಯವಾಗಿ ಬೆಳೆಯುತ್ತಿರುವ ತುಮಕೂರಿಗೆ ಬೆಂಗಳೂರಿನಿಂದ ಮೆಟ್ರೊ ಯೋಜನೆ ಮಂಜೂರು, ತುಮಕೂರು ವಿಶ್ವವಿದ್ಯಾಲಯದ ಅಭಿವೃದ್ಧಿಗಾಗಿ 200 ಕೋಟಿ ರು.ಗಳ ಅನುದಾನ, ಏಷ್ಯಾದಲ್ಲಿಯೇ ಬಹು ಎತ್ತರದ ಮಧುಗಿರಿ ಏಕಶಿಲಾ ಬೆಟ್ಟಕ್ಕೆ ರೋಪ್ ವೇ ನಿರ್ಮಿಸಲು ಅಗತ್ಯ ಅನುದಾನ, ಕೈಗಾರಿಕಾ ಪ್ರದೇಶ ಅಭಿವೃದ್ಧಿಯಡಿ ವಸಂತ ನರಸಾಪುರಕ್ಕೆ ಇಂಟಿಗ್ರೇಟೆಡ್ ಟೌನ್ಶಿಪ್ ಸೌಲಭ್ಯ, ನೆನೆಗುದಿಗೆ ಬಿದ್ದಿರುವ ಭದ್ರ ಮೇಲ್ದಂಡೆ ಯೋಜನೆಗೆ ಅನುದಾನ, ಹೊಸ ಜಿಲ್ಲಾಡಳಿತ ಭವನ ನಿರ್ಮಾಣಕ್ಕೆ ಅಗತ್ಯವಿರುವ ಅನುದಾನವನ್ನು ಘೋಷಿಸಬೇಕೆಂದು ಮನವಿ ಮಾಡಿದರು.
ಇದಕ್ಕೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಕೆಎಸ್ಆರ್ಟಿಸಿ ಬಸ್ ನಿಲ್ದಾಣವನ್ನು ಉದ್ಘಟಿಸಿದರು. ನಂತರ ಅರ್ಹ ಫಲಾನುಭವಿಗಳಿಗೆ ಲ್ಯಾಪ್ಟಾಪ್, ಕೃತಕ ಕೈ-ಕಾಲು, ವಿದ್ಯುತ್ ಚಾಲಿತ ವೀಲ್ ಚೇರ್ ಸೇರಿದಂತೆ ವಿವಿಧ ಸವಲತ್ತುಗಳನ್ನು ಸಾಂಕೇತಿಕವಾಗಿ ವಿತರಿಸಿದರು.ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸ್ವಾಗತಿಸಿದರು. ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ವಂದಿಸಿದರು. ಕಾರ್ಯಕ್ರಮದಲ್ಲಿ ಸಚಿವರಾದ ಕೆ.ಎನ್. ರಾಜಣ್ಣ, ಕೃಷ್ಣ ಭೈರೇಗೌಡ, ಲಕ್ಷ್ಮೀ ಹೆಬ್ಬಾಳ್ಕರ್, ಸತೀಶ್ ಜಾರಕಿಹೊಳಿ, ರಾಮಲಿಂಗಾರೆಡ್ಡಿ, ಬೈರತಿ ಸುರೇಶ್, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಮಾಜಿ ಸಚಿವ ಟಿ.ಬಿ. ಜಯಚಂದ್ರ, ಶಾಸಕರು, ವಿಧಾನಪರಿಷತ್ ಸದಸ್ಯರು, ವಿವಿಧ ಜನಪ್ರತಿನಿಧಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್, ಪಾಲಿಕೆ ಆಯುಕ್ತೆ ಅಶ್ವಿಜ ಹಾಗೂ ಕೃಷಿ, ರೇಷ್ಮೆ, ತೋಟಗಾರಿಕೆ, ಕಾರ್ಮಿಕ ಇಲಾಖೆ ಸೇರಿದಂತೆ ವಿವಿಧ ಇಲಾಖೆ, ನಿಗಮಗಳ ಅಧಿಕಾರಿಗಳು ಉಪಸ್ಥಿತರಿದ್ದರು.