ಯಾರೇ ಲಂಚ ಕೇಳಿದರೂ ನಿರ್ದಾಕ್ಷಿಣ್ಯ ಕ್ರಮ: ಡಿಕೆಶಿ

KannadaprabhaNewsNetwork | Published : Jan 6, 2024 2:00 AM

ಸಾರಾಂಶ

ಯಾರೇ ಲಂಚ ಕೇಳಿದರೂ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಯಲಹಂಕದಲ್ಲಿ ಎಚ್ಚರಿಕೆ ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಯಾರೇ ಲಂಚ ಕೇಳಿದರೂ ನಿರ್ದಾಕ್ಷಿಣ್ಯವಾಗಿ ದೂರು ಕೊಡಿ, ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಯಲಹಂಕ, ಬ್ಯಾಟರಾಯನಪುರ, ದಾಸರಹಳ್ಳಿ ವಿಧಾನಸೌಧ ಕ್ಷೇತ್ರಗಳನ್ನು ಒಟ್ಟು ಸೇರಿಸಿ ಯಲಹಂಕದಲ್ಲಿ ಶುಕ್ರವಾರ ನಡೆದ ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಚಿವರು- ಶಾಸಕರು, ಪೊಲೀಸರು, ಕಂದಾಯ ಅಧಿಕಾರಿಗಳ ಸೇರಿದಂತೆ ಯಾರ ಹೆಸರಿನಲ್ಲಿ ಹಣ ಕೇಳಿದರೂ ದೂರು ಕೊಡಿ. ಅವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದರು.

ಅಧಿಕಾರಿಗಳು ಗೌರವ ನೀಡದಿದ್ದಾಗ, ಲಂಚ ಕೇಳಿ ಹಿಂಸೆ ಕೊಟ್ಟಾಗ ಜನಸಾಮಾನ್ಯರು ರಾಜಕಾರಣಿಗಳ ಬಳಿ ಬರುತ್ತಾರೆ. ಇತ್ತೀಚಿಗೆ ಈ ರೀತಿಯ ದೂರುಗಳ ಸಂಖ್ಯೆ ಹೆಚ್ಚಾಗುತ್ತಿವೆ. ಈ ಸಮಸ್ಯೆ ತಪ್ಪಿಸುವ ಉದ್ದೇಶದಿಂದ ಈ ಕಾರ್ಯಕ್ರಮ ರೂಪಿಸಲಾಗಿದೆ ಎಂದು ತಿಳಿಸಿದರು.

ಪ್ರತಿನಿತ್ಯ ಜನ ನಮ್ಮ ಮನೆ ಬಾಗಿಲಿಗೆ ತಮ್ಮ ಸಮಸ್ಯೆ ಹೊತ್ತುಕೊಂಡು ಬರುತ್ತಿದ್ದಾರೆ. ಇದನ್ನು ತಪ್ಪಿಸಲು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಪೊಲೀಸ್ ಸೇರಿದಂತೆ ಸುಮಾರು 300 ಅಧಿಕಾರಿಗಳು ನಿಮ್ಮ ಸೇವೆಗೆ ಬಂದಿದ್ದೇವೆ. ಜನರ ಅಹವಾಲುಗಳನ್ನು ಕಾನೂನು ಚೌಕಟ್ಟಿನಲ್ಲಿ ಪರಿಹಾರ ನೀಡುತ್ತೇವೆ. ಒಂದು ವೇಳೆ ಪರಿಹಾರ ನೀಡಲು ಆಗದಿದ್ದರೆ, ಯಾವ ಕಾರಣಕ್ಕೆ ಪರಿಹಾರ ನೀಡಲು ಆಗುವುದಿಲ್ಲ ಎಂಬ ಕಾರಣವನ್ನು ತಿಳಿಸುತ್ತೇವೆ ಎಂದರು.

ಬೆಂಗಳೂರು ಯೋಜಿತ ನಗರವಲ್ಲ. ಇಲ್ಲಿರುವ ಹವಾಮಾನ, ಶಿಕ್ಷಣ, ಆರೋಗ್ಯ ಸೌಲಭ್ಯದಿಂದ ಬೆಂಗಳೂರಿಗೆ ಬಂದವರು ವಾಪಸ್ ಹೋಗುವುದಿಲ್ಲ. ಹೀಗಾಗಿ ಬೆಂಗಳೂರಿನ ನಿರ್ವಹಣೆ ಬಹಳ ಮುಖ್ಯವಾಗಿದೆ. ನಗರದಲ್ಲಿ ಸ್ವಯಂ ತೆರಿಗೆ ವ್ಯವಸ್ಥೆ ಇದ್ದು, ಸರಿಯಾದ ಲೆಕ್ಕದಲ್ಲಿ ತೆರಿಗೆ ಪಾವತಿ ಮಾಡುತ್ತಿಲ್ಲ. ಹೀಗಾಗಿ ಸಮೀಕ್ಷೆ ಮಾಡುತ್ತಿದ್ದೇವೆ. ತೆರಿಗೆ ಪಾವತಿ ಮಾಡದಿದ್ದರೆ ರಸ್ತೆ ಮಾಡುವುದು, ನೀರು ನೀಡುವುದು ಹೇಗೆ? ಎಂದು ಪ್ರಶ್ನಿಸಿದರು.

ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾತನಾಡಿ, ಅಭಿವೃದ್ಧಿ ಹಾಗೂ ಜನರ ಅಹವಾಲುಗಳು ಜತೆ, ಜತೆಗೆ ಸಾಗಬೇಕಿದೆ. ಜನರ ಸಮಸ್ಯೆಗಳನ್ನು ಪರಿಹರಿಸದೆ ಸರ್ಕಾರ ಯಶಸ್ವಿಯಾಗಿ ನಡೆದಿದೆ ಎಂದು ಹೇಳಲು ಸಾಧ್ಯವಿಲ್ಲ. ಜನರ ಅಹವಾಲು ಪರಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಮಹತ್ವಾಕಾಂಕ್ಷಿ ಉದ್ದೇಶವನ್ನಿಟ್ಟು ಈ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.

ಯಲಹಂಕ ಶಾಸಕ ವಿಶ್ವನಾಥ್, ದಾಸರಹಳ್ಳಿ ಶಾಸಕ ಎಸ್.ಮುನಿರಾಜು, ವಿಧಾನ ಪರಿಷತ್ ಸದಸ್ಯ ಎಂ.ಆರ್.ಸೀತಾರಾಮ್, ರಾಜ್ಯಸಭಾ ಮಾಜಿ ಸದಸ್ಯ ರಾಜೀವ್ ಗೌಡ, ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಉಪಸ್ಥಿತರಿದ್ದರು.ಅರ್ಜಿ ವಿಲೇವಾರಿಗೆ ಪ್ರತ್ಯೇಕ ತಂಡ ರಚನೆ

ಸಾರ್ವಜನಿಕರಿಂದ ಸಲ್ಲಿಕೆಯಾದ ಅರ್ಜಿಗಳ ವಿಲೇವಾರಿಗೆ ಅಧಿಕಾರಿಗಳ ನೇತೃತ್ವದಲ್ಲಿ ಪ್ರತ್ಯೇಕ ತಂಡ ರಚನೆ ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.

ಯಲಹಂಕದಲ್ಲಿ ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಾರು 2600ಕ್ಕೂ ಅಧಿಕ ಅಹವಾಲುಗಳು ಸಲ್ಲಿಕೆಯಾಗಿವೆ. ಅರ್ಜಿಗಳನ್ನು ವಿಂಗಡಿಸಿ ತ್ವರಿತ ವಿಲೇವಾರಿಗೆ ವಾರ್ಡ್ ಮಟ್ಟದ ಅಧಿಕಾರಿಗಳಿಗೆ ಸಮಯ ನಿಗದಿ ಮಾಡುತ್ತೇವೆ. ಅರ್ಜಿ ಸಲ್ಲಿಸಿರುವ ಪ್ರತಿಯೊಬ್ಬರ ದೂರವಾಣಿ ಸಂಖ್ಯೆ ಪಡೆದಿದ್ದೇವೆ. ಎಲ್ಲಾ ದೂರುಗಳನ್ನು ಬಗೆಹರಿಸಲು ಪ್ರತ್ಯೇಕ ತಂಡ ಮಾಡುತ್ತೇವೆ ಎಂದರು.

ನಿವೇಶನ, ರಸ್ತೆ ಮುಚ್ಚಿರುವ ಬಗ್ಗೆ ದೂರಿನ ಹಿನ್ನೆಲೆಯಲ್ಲಿ ಸ್ಥಳೀಯ ಅಧಿಕಾರಿಗಳು ಸ್ಥಳಕ್ಕೆ ಹೋಗಿ ಪರಿಶೀಲನೆ ಮಾಡಿ ಪರಿಹಾರ ನೀಡಲು ಮಾರ್ಗದರ್ಶನ ನೀಡಿದ್ದೇನೆ. ಈ ಕಾರ್ಯಕ್ರಮಗಳು ಮುಗಿದ ನಂತರ ಅಧಿಕಾರಿಗಳ ಜತೆಗೆ ಮತ್ತೊಂದು ಸುತ್ತಿನ ಸಭೆ ಮಾಡಿ ಜನರ ಸಮಸ್ಯೆಗೆ ಹೇಗೆ ಪರಿಹಾರ ನೀಡಬೇಕು ಎಂದು ಚರ್ಚಿಸುತ್ತೇವೆ ಎಂದು ತಿಳಿಸಿದರು.

ಕಂದಾಯ ಇಲಾಖೆ, ಪಾಲಿಕೆಗೆ ಸಂಬಂಧಿಸಿದ ದೂರುಗಳು ಹೆಚ್ಚಾಗಿದ್ದು, ಖಾತೆ ವಿಚಾರವಾಗಿಯೂ ದೂರುಗಳು ಬಂದಿವೆ. ಮನೆಗಳು ಬೇಕು ಎಂಬ ಬೇಡಿಕೆ ಕೂಡ ಹೆಚ್ಚಾಗಿದ್ದು, ಉಚಿತವಾಗಿ ಮನೆ ನೀಡಲು ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಕ್ಕೆ ಅವಕಾಶ ಇಲ್ಲ. ಇವರಿಗೆ ಕಡಿಮೆ ದರದಲ್ಲಿ ಮನೆ ನೀಡಲಾಗುತ್ತಿದ್ದು, ವಸತಿ ಇಲಾಖೆ ಜತೆ ಚರ್ಚೆ ಮಾಡಿ ಎಷ್ಟು ವಿನಾಯಿತಿ ನೀಡಬಹುದೋ ಅಷ್ಟು ನೀಡುತ್ತೇವೆ ಎಂದು ಹೇಳಿದರು.

ಇನ್ನು ಪಾಲಿಕೆಗೆ ತೆರಿಗೆ ಕಟ್ಟದವರಿಗೆ ದಂಡದ ಪ್ರಮಾಣ ಹೆಚ್ಚಾಗಿದೆ ಎಂಬ ಅರ್ಜಿಗಳಿವೆ. ಸಣ್ಣ ಮನೆಗಳಿಗೆ ನೆರವು ನೀಡಲು ಅಧಿಕಾರಿಗಳ ಜತೆ ಚರ್ಚೆ ಮಾಡಿ ಕಾನೂನಿನಲ್ಲಿ ಎಷ್ಟು ಅವಕಾಶ ಇದೆ ಎಂದು ನೋಡುತ್ತೇವೆ ಎಂದು ತಿಳಿಸಿದರು.ಏಜೆಂಟರನ್ನು ದೂರ ಇಡಬೇಕು:

ಜನ ಕಂದಾಯ ನಿವೇಶನ, ಜಮೀನು ಕಳೆದುಕೊಂಡಿದ್ದು, ಇಂತಹವರನ್ನು ದಾರಿ ತಪ್ಪಿಸುವ ಕೆಲಸ ಆಗುತ್ತಿದೆ. ಈ ಜನರಿಗೆ ಕಾನೂನು ವ್ಯಾಪ್ತಿಯಲ್ಲಿ ಎಷ್ಟು ಸಹಾಯ ಮಾಡಲು ಸಾಧ್ಯವೋ ಅಷ್ಟು ಮಾಡುತ್ತೇವೆ. ಏಜೆಂಟರನ್ನು ದೂರ ಇಡಬೇಕು, ಅವರ ಬಗ್ಗೆ ಅರಿವು ಮೂಡಿಸಬೇಕು ಎಂಬ ಉದ್ದೇಶದಿಂದಲೇ ಈ ಕಾರ್ಯಕ್ರಮ ರೂಪಿಸಿ ನಾನು ಇಲ್ಲಿಗೆ ಬಂದಿದ್ದೇನೆ ಎಂದು ಡಿ.ಕೆ.ಶಿವಕುಮಾರ್‌ ತಿಳಿಸಿದರು.ಎಚ್‌ಡಿಕೆಗೆ ಒಳ್ಳೆಯದಾಗಲಿ: ಡಿಕೆಶಿ

ಕರ ಸೇವಕರ ಬಂಧನದ ಕುರಿತ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಡಿ.ಕೆ.ಶಿವಕುಮಾರ್‌, ಈಗಷ್ಟೇ ಅವರು ಬಿಜೆಪಿ ಜತೆ ಎನ್‌ಡಿಎ ಮೈತ್ರಿಕೂಟಕ್ಕೆ ಹೋಗಿದ್ದಾರೆ. ಅವರು ಕರಸೇವಕರ ಬಗ್ಗೆ ಮಾತಾನಾಡುತ್ತಿದ್ದು ಅವರಿಗೆ ಒಳ್ಳೆಯದಾಗಲಿ. ಇವರು ಕೂಡ ಸೇವೆ ಮಾಡಲಿ ಎಂದು ತಿಳಿಸಿದರು.

ಇನ್ನು ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ಸರ್ಕಾರವನ್ನು ಸೋಲಿಸುತ್ತೇವೆ ಎಂಬ ದೇವೇಗೌಡರ ಹೇಳಿಕೆಗೆ ಪ್ರಕ್ರಿಯೆ ನೀಡಿದ ಅವರು ಬಹಳ ಸಂತೋಷ. ಅವರಿಗೆ ಒಳ್ಳೆಯದಾಗಲಿ. ಅವರು ಆರೋಗ್ಯವಂತರಾಗಿರಲಿ ಎಂದು ಹಾರೈಸಿದರು.

Share this article