ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ವಿರುದ್ಧ ಪ್ರತಿಭಟನೆ ನಡೆಸಿದ ಸ್ವಾಮೀಜಿಗಳು, ರೈತರು, ಶಾಸಕರು ಹಾಗೂ ನಾಗರೀಕರ ಮೇಲೆ ಹಾಕಿರುವ ಎಫ್ಐಆರ್ ವಾಪಸ್ ಪಡೆಯಬೇಕು
ಕನ್ನಡಪ್ರಭ ವಾರ್ತೆ, ತುಮಕೂರು ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ವಿರುದ್ಧ ಪ್ರತಿಭಟನೆ ನಡೆಸಿದ ಸ್ವಾಮೀಜಿಗಳು, ರೈತರು, ಶಾಸಕರು ಹಾಗೂ ನಾಗರೀಕರ ಮೇಲೆ ಹಾಕಿರುವ ಎಫ್ಐಆರ್ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ಶಾಸಕರಾದ ಎಂ.ಟಿ.ಕೃಷ್ಣಪ್ಪ, ಬಿ.ಸುರೇಶ್ಗೌಡ, ಮಾಜಿ ಸಚಿವ ಸೊಗಡು ಶಿವಣ್ಣ, ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ ಹಾಗೂ ಹೋರಾಟ ಸಮಿತಿ ಮುಖಂಡರು ಬುಧವಾರ ನಗರದ ಎಸ್ಪಿ ಕಚೇರಿಯಲ್ಲಿ ಧರಣಿ ನಡೆಸಿದರು.ಇದಕ್ಕೂ ಮೊದಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಈ ವೇಳೆ ಹಾಜರಿದ್ದ ಕೇಂದ್ರ ವಲಯ ಐಜಿ ಲಾಬೂರಾಮ್ ಅವರಿಗೆ ಕೇಸ್ ಹಿಂಪಡೆಯುವ ಬಗ್ಗೆ ಮನವಿ ಮಾಡಿದರು.
ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ಮಾತನಾಡಿ, ತಮ್ಮ ನೀರಿನ ಹಕ್ಕಿಗಾಗಿ ಹೋರಾಟ ನಡೆಸಿದ ರೈತರ, ಸ್ವಾಮೀಜಿಗಳ ಮೇಲೆ ಕೇಸು ದಾಖಲಿಸುವುದೆಂದರೆ ಏನರ್ಥ? ಸ್ವಾಮೀಜಿಗಳು ರಾಜಕಾರಣ ಮಾಡಲು ಬಂದಿರಲಿಲ್ಲ, ಸಮಾಜದ ಒಳಿತಿಗೆ ಶ್ರಮಿಸುವ ಸ್ವಾಮೀಜಿಗಳು ಜನರ ನೀರಿನ ಹೋರಾಟದಲ್ಲಿ ಬೆಂಬಲ ನೀಡಿ ಭಾಗವಹಿಸಿದ್ದರು. ಇಂತಹವರ ಮೇಲೆ ಕೇಸು ಹಾಕಿದ ಕೆಟ್ಟ ಸರ್ಕಾರವನ್ನು ನಾನು ನೋಡಿಲ್ಲ ಎಂದರು.ನಮ್ಮ ಮೇಲೆ ಎಫ್ಐಆರ್ ಮಾಡಿದ್ದೀರಿ, ನಮ್ಮಕೇಸ್ ವಾಪಸ್ ಪಡೆಯಬೇಡಿ, ನಾವು ಜೈಲಿಗೆ ಹೋಗಲೂ ಸಿದ್ಧರಿದ್ದೇವೆ. ಆದರೆ ರೈತರು, ಸ್ವಾಮೀಜಿಗಳ ಮೇಲಿನ ಎಫ್ಐಆರ್ ರದ್ದು ಮಾಡಬೇಕು. ಕುಣಿಗಲ್, ಮಾಗಡಿಗೆ ಹೇಮಾವತಿ ನೀರು ತೆಗೆದುಕೊಂಡು ಹೋಗುವ ಬಗ್ಗೆ ನಮ್ಮದೇನೂ ತಕರಾರಿಲ್ಲ. ಅವೈಜ್ಞಾನಿಕವಾದ ಎಕ್ಸ್ ಪ್ರೆಸ್ ಕೆನಾಲ್ ಯೋಜನೆ ರದ್ದುಮಾಡಿ ನಾಲೆಯ ಮೂಲಕ ತೆಗೆದುಕೊಂಡು ಹೋಗಲಿ ಎಂಬುದು ನಮ್ಮಒತ್ತಾಯ ಎಂದು ಹೇಳಿದರು.ತುಮಕೂರು ಗ್ರಾಮಾಂತರ ಕ್ಷೇತ್ರ ಶಾಸಕ ಬಿ.ಸುರೇಶ್ಗೌಡರು ಮಾತನಾಡಿ, ಎಕ್ಸ್ ಪ್ರೆಸ್ ಕೆನಾಲ್ ವಿರುದ್ಧ ಶಾಂತರೀತಿಯ ಹೋರಾಟ ನಡೆಯಿತು. ಯಾವುದೇ ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡಲಿಲ್ಲ. 20 ಸಾವಿರ ಜನ ಸೇರಿರುವ ಕಡೆ ಸಣ್ಣ ಪುಟ್ಟ ಅಹಿತಕರ ಪ್ರಕರಣ ನಡೆದಿರಬಹುದು. ನೀರಿನ ಹಕ್ಕಿಗಾಗಿ ರೈತರು ಆಕ್ರೋಶಗೊಂಡಿದ್ದಾರೆ, ಹಾಗೆಂದು ಅವರ ಮೇಲೆ ಎಫ್ಐಆರ್ ಮಾಡಿ ಕೇಸು ದಾಖಲಿಸುವುದು ಸರಿಯಲ್ಲ. ಸರ್ಕಾರ ತಕ್ಷಣ ರೈತರು, ಸ್ವಾಮೀಜಿಗಳು ಸೇರಿದಂತೆಎಲ್ಲಾ ಎಫ್ಐಆರ್ಗಳನ್ನು ರದ್ದು ಮಾಡಬೇಕು ಎಂದು ಆಗ್ರಹಿಸಿದರು.ಕುಣಿಗಲ್, ಮಾಗಡಿಗೆ ನೀರು ತೆಗೆದುಕೊಂಡು ಹೋಗುವುದಕ್ಕೆ ನಮ್ಮದೇನು ಅಭ್ಯಂತರವಿಲ್ಲ ಎಂದು ಪದೇಪದೆ ಹೇಳುತ್ತಿದ್ದೇವೆ. ಆದರೆ ಎಕ್ಸ್ ಪ್ರೆಸ್ ಕೆನಾಲ್ ಬೇಡ, ಈ ಕೆನಾಲ್ ನಿರ್ಮಾಣಕ್ಕೆ ಮಾಡುವ ವೆಚ್ಚದಲ್ಲಿ ಹೇಮಾವತಿ ನಾಲೆಯನ್ನು ಅಗಲಗೊಳಿಸಿ, ಆಧುನಿಕರಣಗೊಳಿಸಿ, ಸರ್ಕಾರ ನೀರಿನ ಹಂಚಿಕೆ ಪ್ರಮಾಣವನ್ನು ಹೆಚ್ಚು ಮಾಡಿ ಕುಣಿಗಲ್, ಮಾಗಡಿ, ರಾಮನಗರಕ್ಕೂತೆಗೆದುಕೊಂಡು ಹೋಗಲಿ. ಆದರೆ ರೈತರ, ಜನಪ್ರತಿನಿಧಿಗಳ ಹೋರಾಟವನ್ನು ದಮನ ಮಾಡಿ ಎಕ್ಸ್ ಎಕ್ಸ್ ಪ್ರೆಸ್ ಕೆನಾಲ್ನಲ್ಲಿ ನೀರು ತೆಗೆದುಕೊಂಡು ಹೋಗಲು ಬಿಡುವುದಿಲ್ಲ ಎಂದರು.ಎಕ್ಸ್ ಪ್ರೆಸ್ ಕೆನಾಲ್ ಯೋಜನೆಯ ಸಾಧಕ, ಬಾಧಕಗಳ ಬಗ್ಗೆ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ತಜ್ಞರಿಂದ ಸಮೀಕ್ಷೆ ಮಾಡಿಸಲಿ, ಆ ವರದಿ ತೃಪ್ತಿಕರವಾಗಿದೆ ಎನಿಸಿದರೆ ಎಕ್ಸ್ ಪ್ರೆಸ್ ಕೆನಾಲ್ ಬಗ್ಗೆ ನಂತರ ತೀರ್ಮಾನಿಸೋಣ ಎಂದು ಶಾಸಕ ಸುರೇಶ್ಗೌಡ ಹೇಳಿದರು.ಮಾಜಿ ಸಚಿವ ಸೊಗಡು ಶಿವಣ್ಣ ಮಾತನಾಡಿ, ರೈತರು, ಸ್ವಾಮೀಜಿಗಳ ವಿರುದ್ಧ ಹಾಕಿರುವ ಕೇಸುಗಳನ್ನು ವಾಪಸ್ ಪಡೆಯಬೇಕು. ಸ್ವಾಮೀಜಿಗಳ ಮೇಲೆ ಕೇಸು ಹಾಕುವುದೆಂದರೆ ದೇವಸ್ಥಾನಕ್ಕೆ ಬೀಗ ಹಾಕಿದಂತೆ, ಜಿಲ್ಲೆಯಲ್ಲಿ ಸುಮಾರು 40 ಮಠಗಳಿದ್ದು ಆ ಸ್ವಾಮೀಜಿಗಳು ಹೋರಾಟದಲ್ಲಿ ಭಾಗವಹಿಸಿ ಜೈಲಿಗೂ ಹೋಗಲು ಸಿದ್ಧ ಎಂದು ಹೇಳಿದ್ದಾರೆ. ಸ್ವಾಮೀಜಿಗಳು ಜೈಲಿಗೆ ಹೋದರೆ ನಿಮ್ಮ ಸರ್ಕಾರ ಉಳಿಯುವುದಿಲ್ಲ ಎಂದು ಎಚ್ಚರಿಸಿದರು.ಹೋರಾಟಗಾರರ ಮನವಿ ಬಗ್ಗೆ ಸರ್ಕಾರಕ್ಕೆ ಗಮನಕ್ಕೆ ತಂದು ಎಫ್ಐಆರ್ ವಾಪಸ್ ಪಡೆಯುವ ಪ್ರಯತ್ನ ಮಾಡುವುದಾಗಿ ಐಜಿ ಲಾಬೂ ರಾಮ್ ಹೇಳಿದಾಗ ಶಾಸಕರು ತಮ್ಮ ಧರಣಿ ಸತ್ಯಾಗ್ರಹ ಅಂತ್ಯಗೊಳಿಸಿದರು.ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ, ತಿಪಟೂರು ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್, ಕನ್ನಡ ಸೇನೆ ಜಿಲ್ಲಾಧ್ಯಕ್ಷ ಧನಿಯಾಕುಮಾರ್, ನಗರ ಬಿಜೆಪಿ ಅಧ್ಯಕ್ಷ ಧನುಷ್, ಮುಖಂಡರಾದ ಟಿ.ಹೆಚ್.ಹನುಮಂತರಾಜು, ಸತ್ಯಮಂಗಲ ಜಗದೀಶ್, ಮನೋಹರಗೌಡ, ನರಸೇಗೌಡ ಮೊದಲಾದವರು ಭಾಗವಹಿಸಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.