ಪೂರ್ಣಪ್ರಜ್ಞ ವಿದ್ಯಾಸಂಸ್ಥೆಯ ಪ್ರಾಂಶುಪಾಲ । ನಾಲ್ವಡಿ ಕೃಷ್ಣರಾಜರ ಜನ್ಮ ದಿನಾಚರಣೆ
ಬಡತನ ನಿರ್ಮೂಲನೆ ಮತ್ತು ಗ್ರಾಮೀಣ ಮೂಲಸೌಕರ್ಯಗಳನ್ನು ಅಭಿವೃದ್ಧಿಗೊಳಿಸಲು ನಾಲ್ವಡಿ ಕೃಷ್ಣರಾಜ ಒಡೆಯರ್ ತಮ್ಮ ಆಡಳಿತ ಅವಧಿಯಲ್ಲಿ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದರು ಎಂದು ಪೂರ್ಣಪ್ರಜ್ಞ ವಿದ್ಯಾಸಂಸ್ಥೆ ಪ್ರಾಂಶುಪಾಲ ಪ್ರಶಾಂತ್ ಕುಮಾರ್ ಹೇಳಿದರು.
ಪಟ್ಟಣದ ಶಾಂತಲಾ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ತಾಲೂಕು ಜಾನಪದ ಪರಿಷತ್ತು ವತಿಯಿಂದ ನಡೆದ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮ ದಿನಾಚರಣೆ ಸಂದರ್ಭದಲ್ಲಿ ಕಾರ್ಯಕ್ರಮ ಉದ್ಘಾಟನೆ ನಡೆಸಿ ಮಾತನಾಡಿ, ಕನ್ನಡ ನಾಡಿಗೆ ಪ್ರಮುಖ ಕೊಡುಗೆಗಳನ್ನು ನೀಡಿದ ರಾಜರಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಒಬ್ಬರಾಗಿದ್ದಾರೆ. ಸಾರ್ವಜನಿಕ ಆರೋಗ್ಯ ಶಿಕ್ಷಣ ಮತ್ತು ಅರ್ಥಿಕತೆಯ ಅವರ ಆಳ್ವಿಕೆಯಲ್ಲಿ ಪ್ರವರ್ಧಮಾನಕ್ಕೆ ಬಂದಿದೆ. ಬಾಲ್ಯ ವಿವಾಹ ಪದ್ದತಿ ನಿಷೇಧ ಮತ್ತು ಜಾತೀಯತೆ ನಿರ್ಮೂಲನೆಯ ಸಾಮಾಜಿಕ ಕಾರ್ಯಕ್ಕೆ ಹೆಚ್ಚಿನ ಅಧ್ಯತೆ ನೀಡುವ ಜತೆಗೆ ಕಲೆ, ಸಂಗೀತ, ನೃತ್ಯ ಸೇರಿದಂತೆ ಸಾಂಸ್ಕೃತಿಕ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ತಿಳಿಸಿದರು.ತಾಲ್ಲೂಕು ಜಾನಪದ ಪರಿಷತ್ತು ಅಧ್ಯಕ್ಷ ವೈ.ಎಸ್.ಸಿದ್ದೇಗೌಡ ಮಾತನಾಡಿ, ಮೈಸೂರು ಸಂಸ್ಥಾನದ ಕೀರ್ತಿಯನ್ನು ಇಡೀ ಜಗತ್ತಿನಲ್ಲಿ ಖ್ಯಾತಿ ಮಾಡಿದ ನಾಲ್ವಿಡಿ ಕೃಷ್ಣರಾಜ ಒಡೆಯರು ಕನ್ನಡ ನಾಡು, ನುಡಿ ಮತ್ತು ಜಲಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ. ನಾಲ್ವಡಿಯವರ ಆಡಳಿತ ಅವಧಿಯಲ್ಲಿ ಕರ್ನಾಟಕದಲ್ಲಿ ಹಲವಾರು ಪ್ರಮುಖ ಶೈಕ್ಷಣಿಕ ಹಾಗೂ ಕೈಗಾರಿಕೆ ಸಂಸ್ಥೆಗಳನ್ನು ಸ್ಥಾಪಿಸಿದ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. ಜನಪರ ಆಡಳಿತ ಮತ್ತು ಸಮಾಜಮುಖಿ ಚಿಂತನೆಗಳು ಮೂಲಕ ದೇಶದಲ್ಲಿ ಮೈಸೂರು ಸಂಸ್ಥಾನದ ಹೆಸರನ್ನು ಮುಗಿಲ ಎತ್ತರಕ್ಕೆ ಬೆಳೆಸಿದ್ದಾರೆ. ಇಂತಹ ನಾಲ್ವಡಿ ಕೃಷ್ಣರಾಜ ಒಡೆಯರು ತಂದು ಸುಧಾರಣೆಗಳು ಮತ್ತು ಜನಪರ ಅಭಿವೃದ್ಧಿ ಕಾರ್ಯಗಳನ್ನು ಯುವ ಪೀಳಿಗೆಗೆ ಪರಿಚಯಿಸುವ ಕೆಲಸವನ್ನು ಕರ್ನಾಟಕ ಜಾನಪದ ಪರಿಷತ್ತು ನಡೆಸಿದೆ ಎಂದು ಹೇಳಿದರು.
ತಾಲೂಕು ವಿಕಲಚೇತನರ ಸಂಘದ ಅಧ್ಯಕ್ಷ ಪುರುಷೋತ್ತಮ ಬಹುಮಾನ ವಿತರಿಸಿದರು.ಜಾವಗಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ಧನಂಜಯ್ ನಿರೂಪಣೆ, ಉಪನ್ಯಾಸಕ ಮೋಹನ್ ಸ್ವಾಗತ, ಲೋಹಿತ್ ವಂದನಾರ್ಪಣೆ ನೆರವೇರಿಸಿದರು.