ಅರಣ್ಯ ಸಿಬ್ಬಂದಿ ತಪಾಸಣೆ ನಡೆಸುತ್ತಿದ್ದ ಸಂದರ್ಭ ಕಾರೊಂದರಲ್ಲಿ ಮಹಿಳೆಯ ಮೃತದೇಹ ಪತ್ತೆಯಾದ ಪ್ರಕರಣ ಬೆಳಕಿಗೆ ಬಂದಿದೆ.
ಕನ್ನಡಪ್ರಭ ವಾರ್ತೆ ಮಡಿಕೇರಿ
ಚೆಕ್ಪೋಸ್ಟ್ ವೊಂದರಲ್ಲಿ ಶುಕ್ರವಾರ ರಾತ್ರಿ ಅರಣ್ಯ ಸಿಬ್ಬಂದಿ ತಪಾಸಣೆ ನಡೆಸುತ್ತಿದ್ದ ಸಂದರ್ಭ ಕಾರೊಂದರಲ್ಲಿ ಮಹಿಳೆಯ ಮೃತದೇಹ ಪತ್ತೆಯಾದ ಪ್ರಕರಣ ಕೊಡಗು ಜಿಲ್ಲೆಯ ಮಾಲ್ದಾರೆ ಗ್ರಾ.ಪಂ ವ್ಯಾಪ್ತಿಯ ಲಿಂಗಾಪುರ ಚೆಕ್ಪೋಸ್ಟ್ ನಲ್ಲಿ ಬೆಳಕಿಗೆ ಬಂದಿದೆ.ಮೈಸೂರಿನಲ್ಲಿ ಪತಿಯೊಂದಿಗೆ ವಾಸವಾಗಿದ್ದ ಹರಿಯಾಣ ಮೂಲದ ನಾನ್ಕಿದೇವಿ (45) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಮೂವರನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡು ಪ್ರಕರಣವನ್ನು ಮೈಸೂರಿನ ಮೇಟ್ ಗಳ್ಳಿ ಪೊಲೀಸ್ ಠಾಣೆಗೆ ವರ್ಗಾಯಿಸಿದ್ದಾರೆ ಎಂದು ತಿಳಿದು ಬಂದಿದೆ.ಅರಣ್ಯ ಇಲಾಖೆಯ ಸಿಬ್ಬಂದಿ ಎಂದಿನಂತೆ ಶುಕ್ರವಾರ ರಾತ್ರಿ ಲಿಂಗಾಪುರ ಚೆಕ್ಪೋಸ್ಟ್ ನಲ್ಲಿ ತಪಾಸಣೆಯಲ್ಲಿ ತೊಡಗಿದ್ದರು. ಈ ಸಂದರ್ಭ ಅದೇ ಮಾರ್ಗವಾಗಿ ಬಂದ ಕಾರನ್ನು ತಪಾಸಣೆ ನಡೆಸಿದಾಗ ಕಾರಿನಲ್ಲಿ ಮಹಿಳೆಯ ಮೃತದೇಹ ಇರುವುದು ಕಂಡು ಬಂದಿದೆ.ತಕ್ಷಣ ಎಚ್ಚೆತುಕೊಂಡ ಅರಣ್ಯ ಇಲಾಖಾ ಸಿಬ್ಬಂದಿಗಳು ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಬಂದ ಸಿದ್ದಾಪುರ ಠಾಣೆ ಪೊಲೀಸರು ಹಾಗೂ ಸಿಬ್ಬಂದಿಗಳು ಕಾರಿನಲ್ಲಿದ್ದ ಮೃತ ಮಹಿಳೆಯ ಪತಿ ರಾಕೇಶ್ ಕುಮಾರ್ ಸಹಿತ ಮೂವರು ವ್ಯಕ್ತಿಗಳನ್ನು ವಶಕ್ಕೆ ಪಡೆದರು. ವಿಚಾರಣೆಯ ಸಂದರ್ಭ ತನ್ನ ಪತ್ನಿ ನೇಣು ಬಿಗಿದುಕೊಂಡ ಕಾರಣ ಮಡಿಕೇರಿ ಆಸ್ಪತ್ರೆಗೆ ಕರೆದುಕೊಂಡು ಬರಲಾಗುತ್ತಿತ್ತು ಎಂದು ಪತಿ ರಾಕೇಶ್ ಕುಮಾರ್ ಹೇಳಿಕೆ ನೀಡಿರುವುದಾಗಿ ತಿಳಿದು ಬಂದಿದೆ. ಸಂಶಯಾಸ್ಪದ ಸಾವೆಂದು ಪ್ರಕರಣ ದಾಖಲಾಗಿದೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.