ಕನ್ನಡಪ್ರಭ ವಾರ್ತೆ ಚಾಮರಾಜನಗರಮಹಿಳೆಯರು ದೌರ್ಜನ್ಯವನ್ನು ಧೈರ್ಯದಿಂದ ಎದುರಿಸಿ ನಿಲ್ಲಬೇಕು ಎಂದು ಜಿಲ್ಲಾ ಸತ್ರ ನ್ಯಾಯಾಲಯದ ವಕೀಲರಾದ ರೂಪಶ್ರೀ ಹೇಳಿದರು.ನಗರದ ಜೆಎಸ್ಎಸ್ ಮಹಿಳಾ ಕಾಲೇಜು ಸಭಾಂಗಣದಲ್ಲಿ ಲೈಂಗಿಕ ದೌರ್ಜನ್ಯ ನಿವಾರಣಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಲೈಂಗಿಕ ದೌರ್ಜನ್ಯ ತಡೆಗಟ್ಟುವಿಕೆ ಮತ್ತು ಅದರ ಕಾನೂನು ನಿಯಮಗಳು ಎಂಬ ವಿಷಯ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಲೈಂಗಿಕ ದೌರ್ಜನ್ಯವನ್ನು ತಡೆಗಟ್ಟುವುದು ಕೇವಲ ಕಾನೂನು ವಿಷಯವಾಗಿರದೆ ಮಾನವೀಯ ಮೌಲ್ಯಗಳು ಗೌರವ ಮತ್ತು ಸುರಕ್ಷಿತ ಸಮಾಜದ ನಿರ್ಮಾಣಕ್ಕೆ ಸಂಬಂಧಿಸಿದ ಅತ್ಯಂತ ಮಹತ್ವದ ವಿಷಯವಾಗಿದೆ ಎಂದರು.ಭಾರತ ಸರ್ಕಾರವು ಮಹಿಳೆಯರು ಕೆಲಸ ಮಾಡುವ ಸ್ಥಳಗಳಲ್ಲಿ ಲೈಂಗಿಕ ದೌರ್ಜನ್ಯವನ್ನು ತಡೆಗಟ್ಟಲು 2013ರಲ್ಲಿ ಕಾಯ್ದೆಯನ್ನು ಜಾರಿಗೆ ತಂದಿದೆ. ಈ ಕಾಯ್ದೆಯ ಉದ್ದೇಶ ಕೆಲಸದ ಸ್ಥಳಗಳಲ್ಲಿ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಲೈಂಗಿಕ ದೌರ್ಜನ್ಯವನ್ನು ತಡೆಯುವುದು ಮತ್ತು ನಿಷೇಧಿಸುವುದು ಹಾಗೂ ಪರಿಹಾರವನ್ನು ಒದಗಿಸುವುದಾಗಿದೆ ಎಂದರು, ಮಹಿಳೆಯರು ತಾವು ಕರ್ತವ್ಯವನ್ನು ನಿರ್ವಹಿಸುವ ಸ್ಥಳಗಳಲ್ಲಿ ಯಾವುದೇ ರೀತಿಯ ದೌರ್ಜನ್ಯಕ್ಕೆ ಒಳಗಾದರೆ ಭಯಪಡದೆ ಹತ್ತಿರದ ಪೊಲೀಸ್ ಠಾಣೆಗೆ ದೂರು ಸಲ್ಲಿಸಬೇಕು ಮತ್ತು ಹತ್ತಕ್ಕಿಂತ ಹೆಚ್ಚು ಮಹಿಳೆಯರು ಕೆಲಸ ಮಾಡುವ ಸಂಸ್ಥೆಗಳಲ್ಲಿ ಮಹಿಳೆಯರ ದೌರ್ಜನ್ಯ ತಡೆಗಟ್ಟುವ ಆಂತರಿಕ ದೂರು ಸಮಿತಿಯನ್ನು ರಚನೆ ಮಾಡಬೇಕು ಎಂದರು.ಭಾರತೀಯ ದಂಡ ಸಂಹಿತೆಯ ಪ್ರಕಾರ ಸೆಕ್ಷನ್ 379, 354 ಎ, 356, 274 ಹೀಗೆ ಈ ಕಾಯಿದೆಯ ಆಡಿ ಮಹಿಳೆಯರಿಗೆ ದೌರ್ಜನ್ಯವನ್ನು ಎಸಗಿದವರಿಗೆ ಕಠಿಣ ಶಿಕ್ಷೆಯನ್ನು ವಿಧಿಸಲಾಗುತ್ತದೆ ಎಂಬುದನ್ನು ವಿವರಿಸಿದರು. ಸಾಮಾಜಿಕ ಜಾಲತಾಣಗಳ ದುರ್ಬಳಕೆಯಿಂದ ದೌರ್ಜನ್ಯವು ಹೆಚ್ಚಾಗುತ್ತಿದ್ದು, ವಿದ್ಯಾರ್ಥಿನಿಯರು ಆದಷ್ಟು ಸಾಮಾಜಿಕ ಜಾಲತಾಣಗಳಿಂದ ದೂರವಿರಬೇಕು. ಅಪರಿಚಿತ ವ್ಯಕ್ತಿಗಳೊಡನೆ ಸಂಭಾಷಣೆ, ಸಂದೇಶಗಳನ್ನು ರವಾನಿಸುವುದು ಇವುಗಳನ್ನು ತಪ್ಪಿಸಬೇಕೆಂದು ತಿಳಿಸಿದರು,
-------೧೭ಸಿಎಚ್ಎನ್೩ಚಾಮರಾಜನಗರದ ಜೆಎಸ್ಎಸ್ ಮಹಿಳಾ ಕಾಲೇಜು ಸಭಾಂಗಣದಲ್ಲಿ ಲೈಂಗಿಕ ದೌರ್ಜನ್ಯ ನಿವಾರಣ ಸಮಿತಿ ವತಿಯಿಂದ ಹಮ್ಮಕೊಂಡಿದ್ದ ಲೈಂಗಿಕ ದೌರ್ಜನ್ಯ ತಡೆಗಟ್ಟುವಿಕೆ ಮತ್ತು ಅದರ ಕಾನೂನು ನಿಯಮಗಳು ಎಂಬ ವಿಷಯ ಕುರಿತು ಜಿಲ್ಲಾ ಸತ್ರ ನ್ಯಾಯಾಲಯದ ವಕೀಲರಾದ ರೂಪಶ್ರೀ ಮಾತನಾಡಿದರು.--------